ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ವಿಶ್ವನಾಥ್ ಅವರಿಗೆ ಗುರುವಾರ ಸಂಜೆ ಹೈದರಾಬಾದ್ ನಲ್ಲಿ ಲಘು ಹೃದಯಾಘಾತವಾಗಿದೆ.
ವಿಮಾನ ನಿಲ್ದಾಣದಲ್ಲಿ ಎದೆ ನೋವು ಕಾಣಿಸಿಕೊಂಡು ಅಸ್ವಸ್ಥರಾದ ವಿಶ್ವನಾಥ್ ಅವರನ್ನು ಕೂಡಲೇ ಹೈದರಾಬಾದ್ ನ ಲಾಲಬಹುದ್ದೂರ್ ಶಾಸ್ತ್ರಿ ನಗರದ ಓಜೋನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಲ್ಲಿನ ವೈದ್ಯರೊಂದಿಗೆ ಜಯದೇವ ಆಸ್ಪತ್ರೆಯ ವೈದ್ಯ ಡಾ.ಮಂಜುನಾಥ್ ನಿರಂತರ ಸಂಪರ್ಕದಲ್ಲಿದ್ದು, ಆರೋಗ್ಯದ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದಾರೆ.
ಈ ಹಿಂದೆ ವಿಶ್ವನಾಥ್ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಿ ಮೂರು ಸ್ಟಂಟ್ ಗಳನ್ನು ಅಳವಡಿಸಲಾಗಿತ್ತು. ಮೂರು ಸ್ಟಂಟ್ ಗಳ ಪೈಕಿ ಒಂದರಲ್ಲಿ ತೊಂದರೆ ಕಾಣಿಸಿಕೊಂಡಿದ್ದರಿಂದ ಲಘು ಹೃದಯಾಘಾತ ಸಂಭವಿಸಿದೆ. ಸದ್ಯ ವಿಶ್ವನಾಥ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಭಾನುವಾರವರಗೆ ಪರಿಸ್ಥಿತಿ ನೋಡಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಕರೆತರುವ ಬಗ್ಗೆ ತೀರ್ಮಾನಿಸಲಾಗುವುದು. ಏರ್ ಅಂಬ್ಯುಲೆನ್ಸ್ ಅಥವಾ ಸಾಮಾನ್ಯ ವಿಮಾನದಲ್ಲೇ ಕರೆತರಬಹುದ ಎಂಬುದರ ಕುರಿತು ಆರೋಗ್ಯ ಸ್ಥಿತಿ ನೋಡಿ ಇಂದು ಸಂಜೆ ತೀರ್ಮಾನ ಮಾಡಲಾಗುವುದು ಎಂಬ ಮಾಹಿತಿ ಲಭಿಸಿದೆ.
ಕುರುಬ ಸಮಾಜದ ಕಾರ್ಯಕ್ರಮದಲ್ಲಿ ಭಾಗಿಯಾಗಲು ವಿಶ್ವನಾಥ್ ಗುರುವಾರ ಹೈದರಾಬಾದ್ ಗೆ ತೆರಳಿದ್ದರು. ವಿಮಾನ ನಿಲ್ದಾಣದಲ್ಲಿ ಮಾಜಿ ಸಚಿವ ಹೆಚ್.ಎಂ.ರೇವಣ್ಣ ಸಹ ವಿಶ್ವನಾಥ್ ಅವರ ಜೊತೆಯಲ್ಲಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv