ಜ್ಯೂಬಿಲಿಯೆಂಟ್ ಕಾರ್ಖಾನೆಯ 42 ಜನರು ಪುನಃ ಕ್ವಾರಂಟೈನ್‍ಗೆ ದಾಖಲು

Public TV
1 Min Read

ಚಾಮರಾಜನಗರ: ಜ್ಯೂಬಿಲಿಯೆಂಟ್ ಕಾರ್ಖಾನೆಯ 42 ಜನರು ಪುನಃ ಕ್ವಾರಂಟೈನ್‍ಗೆ ದಾಖಲಾಗಿದ್ದಾರೆ.

ಕೊರೊನಾ ಸೋಂಕಿತ ಉದ್ಯೋಗ ಮಾಡುತ್ತಿದ್ದ ಮೈಸೂರು ಜಿಲ್ಲೆಯ ನಂಜನಗೂಡು ಪಟ್ಟಣದ ಜುಬಿಲಿಯೆಂಟ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಜಿಲ್ಲೆಯ 52 ಜನರು 14 ದಿನಗಳ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ ಬಳಿಕ ಬಿಡುಗಡೆಗೊಂಡಿದ್ದರು. ಈ ಪೈಕಿ ಮತ್ತೆ 42 ಜನರನ್ನು ಮುಂಜಾಗ್ರತಾ ಕ್ರಮವಾಗಿ ಪುನಃ ಕ್ವಾರಂಟೈನ್ ಕೇಂದ್ರದಲ್ಲಿ ದಾಖಲಿಸಿಕೊಂಡು ಈ ಎಲ್ಲರ ಗಂಟಲಿನ ದ್ರವ ಹಾಗೂ ರಕ್ತದ ಮಾದರಿಯನ್ನು ಪರೀಕ್ಷೆಗಾಗಿ ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಕೇಂದ್ರಕ್ಕೆ ಕಳುಹಿಸಿಕೊಡಲಾಗಿದೆ. ಫಲಿತಾಂಶ ನಿರೀಕ್ಷಿಸಲಾಗುತ್ತಿದೆ ಎಂದು ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ತಿಳಿಸಿದ್ದಾರೆ.

ಜ್ಯೂಬಿಲಿಯೆಂಟ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಜಿಲ್ಲೆಯ 52 ವ್ಯಕ್ತಿಗಳ ಪೈಕಿ ಈಗಾಗಲೇ 5 ಜನರ ಗಂಟಲಿನ ದ್ರವ ಹಾಗೂ ರಕ್ತದ ಮಾದರಿಯನ್ನು ಪರೀಕ್ಷಿಸಲಾಗಿದ್ದು, ಪರೀಕ್ಷೆಯ ಫಲಿತಾಂಶ ನೆಗೆಟಿವ್ ಬಂದಿರುತ್ತದೆ. ಉಳಿದ 47 ಜನರಲ್ಲಿ 42 ಜನರನ್ನು ಪುನಃ ಕ್ವಾರೆಂಟೈನ್ ಕೇಂದ್ರದಲ್ಲಿ ದಾಖಲಿಸಿಕೊಂಡು ಈ ಎಲ್ಲರ ಮಾದರಿಗಳನ್ನು ಪರೀಕ್ಷೆಗಾಗಿ ಕಳುಹಿಸಲಾಗಿದೆ. ಉಳಿದ 5 ಜನರನ್ನು ಕ್ವಾರೆಂಟೈನ್ ಕೇಂದ್ರಕ್ಕೆ ಕರೆಸಲು ಕ್ರಮ ವಹಿಸಲಾಗಿದೆ.

ಐ.ಎಲ್.ಐ ರೋಗಲಕ್ಷಣ ಇದ್ದ ಒರ್ವ ವ್ಯಕ್ತಿಯ ಗಂಟಲಿನ ದ್ರವ ಮಾದರಿಯನ್ನು ಪರೀಕ್ಷೆಗಾಗಿ ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಕೇಂದ್ರಕ್ಕೆ ಕಳುಹಿಸಿಕೊಡಲಾಗಿದ್ದು, ಫಲಿತಾಂಶ ನಿರೀಕ್ಷಿಸಲಾಗುತ್ತಿದೆ. ಈ ಬಗ್ಗೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *