ಸರ್ಕಾರಿ ಗುತ್ತಿಗೆ, ಖರೀದಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ – ಇದು ಹಣಕಾಸು ತಜ್ಞರ ಒಡೆದಾಳುವ ಆರ್ಥಿಕತೆ: ಸುನಿಲ್‌ ಕುಮಾರ್‌ ಕಿಡಿ

Public TV
2 Min Read

ಬೆಂಗಳೂರು: ಇಷ್ಟು ದಿ‌ನ ಮುಸ್ಲಿಮರಿಗೆ (Muslims) ತೆರೆಮರೆಯಲ್ಲಿ ವಿಶೇಷ ಆದ್ಯತೆ ನೀಡುತ್ತಿದ್ದ ಸಿದ್ದರಾಮಯ್ಯ (Siddaramaiah) ಈಗ ಅದನ್ನು ಬಜೆಟ್‌ಗೂ (Budget) ವಿಸ್ತರಿಸಿದ್ದಾರೆ. ಹಣಕಾಸು ತಜ್ಞರ ಒಡೆದಾಳುವ ಆರ್ಥಿಕತೆ ಎಂದು ಕಾರ್ಕಳ ಬಿಜೆಪಿ ಶಾಸಕ ಸುನಿಲ್‌ ಕುಮಾರ್‌ (Sunil Kumar) ಆಕ್ರೋಶ ಹೊರ ಹಾಕಿದ್ದಾರೆ.

ಸರ್ಕಾರಿ ಕಾಮಗಾರಿಗಳಲ್ಲಿ 2 ಕೋಟಿ ರೂ.ವರೆಗಿನ ಗುತ್ತಿಗೆ ಮತ್ತು 1 ಕೋಟಿ ರೂ.ವರೆಗಿನ ಖರೀದಿಯಲ್ಲಿ ಮುಸ್ಲಿಂ ಮೀಸಲಾತಿ ಕಲ್ಪಿಸುವುದಾಗಿ ರಾಜ್ಯ ಸರ್ಕಾರ ಬಜೆಟ್ ನಲ್ಲಿ ಘೋಷಿಸಿದೆ. ಸರ್ಕಾರದ ಹಿಂದೂ ವಿರೋಧಿ ನೀತಿಗೆ ಇದಕ್ಕಿಂತ ಬೇರೆ ಉದಾಹರಣೆ ಬೇಕೆ ಎಂದು ಪ್ರಶ್ನಿಸಿದ್ದಾರೆ.


ಕಡುಬು ತಿನ್ನುವುದು ಕಹಿ ನೀರು ಕುಡಿಯುವುದು. ರಾಜ್ಯವನ್ನು 1,16,000 ಕೋಟಿ ರೂ. ಸಾಲದ ಶೂಲಕ್ಕೆ ದೂಡಿರುವ ಸಿದ್ದರಾಮಯ್ಯನವರ ಹದಿನಾರನೇ ಬಜೆಟ್ ಕರ್ನಾಟಕವನ್ನು ಅಕ್ಷರಶಃ ಆರ್ಥಿಕ ದುಸ್ಥಿತಿಗೆ ದೂಡಲಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಅಲ್ಪಸಂಖ್ಯಾತರಿಗೆ ಬಂಪರ್‌: ಸಾಮೂಹಿಕ ವಿವಾಹದಲ್ಲಿ ಮದ್ವೆಯಾದ ಜೋಡಿಗಳಿಗೆ 50 ಸಾವಿರ – ಬಜೆಟ್‌ ಘೋಷಣೆಗಳೇನು?

 


ಬಜೆಟ್ ಎನ್ನುವುದು ನನ್ನ ದೃಷ್ಟಿಯಲ್ಲಿ ಕೇವಲ ಬಿಳಿಹಾಳೆಯಲ್ಲ ಎಂದು ವ್ಯಾಖ್ಯಾನಿಸಿರುವ ಸಿದ್ದರಾಮಯ್ಯನವರು ಶಾಶ್ವತ ಯೋಜನೆಗಳತ್ತ ಗಮನ ಹರಿಸಿಲ್ಲ. ಕರಾವಳಿ ಭಾಗದ ಜಿಲ್ಲೆಗಳಿಗಂತೂ ಯಾವುದೇ ಕೊಡುಗೆ ಇಲ್ಲ. ಮಂಗಳೂರಿನಿಂದ ಕಾರವಾರದವರೆಗಿನ ಕೊಂಕಣ ರೈಲ್ವೆ ಯೋಜನೆಗೆ ಸರ್ಕಾರ ನೆರವಿನ ಹಸ್ತ ಚಾಚಿಲ್ಲ ಎಂದು ದೂರಿದ್ದಾರೆ.

ಆಕರ್ಷಣೀಯ ಘೋಷಣೆಗಳು, ಕವಿವಾಣಿಯ ಉಲ್ಲೇಖದಲ್ಲೇ ಬಜೆಟ್ ಪುಸ್ತಕ ತುಂಬಿದ್ದು, ಶಿಕ್ಷಣ, ಆರೋಗ್ಯ, ಜಲಸಂನ್ಮೂಲ, ಗ್ರಾಮೀಣಾಭಿವೃದ್ಧಿ ಯೋಜನೆಗಳ ಆಮೂಲಾಗ್ರ ಅಭಿವೃದ್ಧಿಗೆ ಯಾವುದೇ ಕೊಡುಗೆ ಇಲ್ಲ ಎಂದು ಸಿಟ್ಟು ಹೊರಹಾಕಿದ್ದಾರೆ.

Share This Article