ಉಪ ಸಮರ- ಅಕ್ರಮವಾಗಿ ಸಂಗ್ರಹಿಸಿದ್ದ 33 ಲಕ್ಷ ರೂ.ನಗದು, 29 ಲಕ್ಷ ರೂ. ಮೌಲ್ಯದ ಸೀರೆ ವಶ

Public TV
1 Min Read

ಬೆಂಗಳೂರು: 33.04 ಲಕ್ಷ ರೂ. ಅಕ್ರಮ ನಗದು ಹಾಗೂ 29,03 ಲಕ್ಷ ರೂ. ಮೌಲ್ಯದ ಸೀರೆಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮಾಹಿತಿ ನೀಡಿದರು.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮತದಾರರಿಗೆ ಹಂಚಲು ತಂದಿದ್ದ 33.04 ಲಕ್ಷ ರೂ. ಅಕ್ರಮ ನಗದು ಹಾಗೂ 29,03 ಲಕ್ಷ ರೂ. ಮೌಲ್ಯದ ಸೀರೆಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಫ್ಲೈಯಿಂಗ್ ಸ್ಕ್ವಾಡ್ ಗಳಿಂದ 95,19,291 ರೂ. ನಗದು ಹಾಗೂ 3.5 ಲಕ್ಷ ರೂ. ಮೌಲ್ಯದ 99 ಸಾವಿರ ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವಿವರಿಸಿದರು.

ಒಟ್ಟು 165 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. 156 ಪುರುಷರು, 09 ಮಹಿಳಾ ಅಭ್ಯರ್ಥಿಗಳು ಕಣದಲ್ಲಿದ್ದರು. ಇದರಲ್ಲಿ 53 ಅಭ್ಯರ್ಥಿಗಳು ನಾಮಪತ್ರ ವಾಪಾಸ್ ತೆಗೆದುಕೊಂಡಿದ್ದಾರೆ. ಪ್ರಸ್ತುತ 112 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಶಿವಾಜಿನಗರದಲ್ಲಿ ಅತಿ ಹೆಚ್ಚು 19 ಅಭ್ಯರ್ಥಿಗಳು ಕಣದಲ್ಲಿದ್ದು, ಹೊಸಕೋಟೆಯಲ್ಲಿ 17 ಅಭ್ಯರ್ಥಿಗಳು ಕಣದಲ್ಲಿದ್ದಾರೆ ಎಂದರು.

ಮತದಾರ ಚೀಟಿ ಇಲ್ಲದಿದ್ದರೂ ಸಮಸ್ಯೆ ಇಲ್ಲ. ಪಾಸ್ ಪೋರ್ಟ್, ಡ್ರೈವಿಂಗ್ ಲೈಸೆನ್ಸ್, ಪಾನ್ ಕಾರ್ಡ್ ಅಥವಾ ಯಾವುದೇ ಅಧಿಕೃತ ವಿಳಾಸ ಐಡಿ ಕಾರ್ಡ್ ಇದ್ದರೂ ಮತ ಹಾಕಬಹುದು. ಮತದಾರರಿಗೆ ಕಲರ್ ಫೋಟೋ ಇರುವ ಸ್ಮಾರ್ಟ್ ಕಾರ್ಡ್ ಕೊಡುತ್ತಿದ್ದೇವೆ. ಹೊಸ ಮತದಾರರಿಗೆ ಈ ಸ್ಮಾರ್ಟ್ ಕಾರ್ಡ್ ನೀಡಲಾಗುತ್ತಿದೆ. ಉಪಚುನಾವಣೆಯಲ್ಲಿ ಒಟ್ಟು 37,77,970 ಮತದಾರರು ಮತದಾನ ಮಾಡಲಿದ್ದಾರೆ. ಈ ಬಾರಿಯೂ ವಿವಿ ಪ್ಯಾಟ್ ಹಾಗೂ ಇವಿಎಂ ಇರುತ್ತವೆ ಎಂದು ಸ್ಪಷ್ಟಪಡಿಸಿದರು.

ಇವಿಎಂ ವಿವಿಪ್ಯಾಟ್ ಗಳ ಬಗ್ಗೆ ಮತದಾರರಿಗೆ ಜಾಗೃತಿ ಮೂಡಿಸಲಾಗುತ್ತಿದೆ. 282 ಮೊಬೈಲ್ ಟೀಂಗಳು ಇದಕ್ಕಾಗಿ ಕಾರ್ಯನಿರ್ವಹಿಸುತ್ತಿವೆ. 15 ಕ್ಷೇತ್ರಗಳಲ್ಲಿ ಒಟ್ಟು 37,77,970 ಮತದಾರರಿದ್ದು, ಇದರಲ್ಲಿ 19,25,529 ಪುರುಷ, 18,52,027 ಮಹಿಳಾ ಮತದಾರರಿದ್ದಾರೆ. 18 ರಿಂದ 19 ವರ್ಷದ 79,714 ಜನ ಯುವ ಮತದಾರರಿದ್ದಾರೆ ಎಂದು ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *