ತಮಿಳ್ನಾಡು ಮಾಜಿ ಮುಖ್ಯಮಂತ್ರಿ ಕರುಣಾನಿಧಿ ವಿಧಿವಶ- ಬೆಂಗ್ಳೂರಿನಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್

Public TV
2 Min Read

ಬೆಂಗಳೂರು: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಮುಖ್ಯಸ್ಥ ಕರುಣಾನಿಧಿ ವಿಧಿವಶರಾದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ತಮಿಳು ಭಾಷಿಕರು ಇರುವ ಏರಿಯಾವಾದ ಬೆಂಗಳೂರಿನ ಶ್ರೀರಾಂಪುರದಲ್ಲಿ ಭದ್ರತೆಯ ದೃಷ್ಟಿಯಿಂದ ಪೊಲೀಸರನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಎರಡು ಕೆ ಎಸ್ ಆರ್ ಪಿ ತುಕಡಿಗಳು ಹಾಗೂ ಪೊಲೀಸರನ್ನು ನಿಯೋಜಿಸಲಾಗಿದೆ.

ತಮಿಳುನಾಡು ಕಡೆ ಹೊರಡುವ ಕೆಎಸ್‍ಆರ್‍ಟಿಸಿ ಮತ್ತು ತಮಿಳುನಾಡು ಸಾರಿಗೆ ಬಸ್‍ಗಳ ಸಂಚಾರ ಕೂಡ ಸ್ಥಗಿತವಾಗಿದೆ. ಈ ಹಿನ್ನೆಲೆಯಲ್ಲಿ ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ತೊಂದರೆ ಅನುಭವಿಸುವಂತಾಗಿದೆ. ಮಕ್ಕಳು, ಮಹಿಳೆಯರು ತಮ್ಮ ಊರುಗಳಿಗೆ ತೆರಳಲು ಬಸ್‍ಗಳಿಲ್ಲದ ಬಸ್ ನಿಲ್ದಾಣದಲ್ಲೆ ವಾಸ್ತವ್ಯ ಹೂಡಿದ್ದಾರೆ. ರಾತ್ರಿ ಇಡೀ ಬಸ್ ನಿಲ್ದಾಣದಲ್ಲಿ ಜಾಗರಣೆ ಮಾಡಬೇಕು, ಬೇರೆ ದಾರಿ ಇಲ್ಲ ಅಂತ ಪ್ರಯಾಣಿಕರು ತಿಳಿಸಿದ್ದಾರೆ.

ತಮಿಳುನಾಡಿನ ವಿವಿಧ ಭಾಗಗಳಿಗೆ ಸಂಚರಿಸುವ ಎಲ್ಲಾ ಬಸ್ ಗಳು ಸ್ಥಗಿತವಾಗಿದ್ದು, ತಮಿಳುನಾಡು ಸಾರಿಗೆ ಸಂಸ್ಥೆಯ ಎಲ್ಲಾ ಬಸ್‍ಗಳು ಸ್ಯಾಟಲೈಟ್ ನಿಲ್ದಾಣದಲ್ಲಿ ಹಾಲ್ಟ್ ಆಗಿವೆ.

ಘಟನೆ ವಿವರ:
ತಮಿಳುನಾಡಿನ ಮಾಜಿ ಸಿಎಂ ಮತ್ತು ಡಿಎಂಕೆ ಮುಖ್ಯಸ್ಥ ಎಂ. ಕಲೈನರ್ ಕರುಣಾನಿಧಿ(94) ಅವರು ಉಸಿರಾಟದ ತೊಂದರೆ, ಜ್ವರ ಹಾಗೂ ಮೂತ್ರನಾಳದ ಸೋಂಕಿನಿಂದ ಬಳಲುತ್ತಿದ್ದ ಅವರನ್ನು ಜುಲೈ 22ರ ರಾತ್ರಿ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜುಲೈ 22ರ ಬಳಿಕ ಕರುಣಾನಿಧಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿತ್ತು. ಆದರೆ ಆರೋಗ್ಯದಲ್ಲಿ ಮತ್ತೇ ಏರಿಳಿತ ಕಂಡು ಬಂದ ಹಿನ್ನೆಲೆಯಲ್ಲಿ ಕರುಣಾನಿಧಿ ಅವರನ್ನು ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಾವೇರಿ ಆಸ್ಪತ್ರೆ ವೈದ್ಯರು ಸೋಮವಾರವೇ 24 ಗಂಟೆಗಳ ಕಾಲ ಯಾವ ಭರವಸೆಗಳನ್ನು ನೀಡೋದಕ್ಕೆ ಸಾಧ್ಯವಿಲ್ಲ. ಕ್ಷಣ ಕ್ಷಣಕ್ಕೂ ಕರುಣಾನಿಧಿ ಆರೋಗ್ಯ ಕ್ಷೀಣಿಸುತ್ತಿದೆ ಎಂದು ಸ್ಪಷ್ಟಪಡಿಸಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಸಂಜೆ ವಿಧಿವಶರಾದ್ರು.

ಕರುಣಾನಿಧಿ ಅವರ ಪಾರ್ಥಿವ ಶರೀರವನ್ನು ರಾತ್ರಿ 9.30ರ ಸುಮಾರಿಗೆ ಕಾವೇರಿ ಆಸ್ಪತ್ರೆಯಿಂದ ಗೋಪಾಲಪುರಂ ನಿವಾಸಕ್ಕೆ ಕೊಂಡೊಯ್ದು ಅಂತಿಮ ದರ್ಶನಕ್ಕಿಡಲಾಗಿದೆ. ಈ ವೇಳೆ ನಟ ರಜಿನಿಕಾಂತ್, ಪಶ್ಚಿಮಗಳ ಸಿಎಂ ಮಮತಾ ಬ್ಯಾನರ್ಜಿ ಸೇರಿದಂತೆ ಗಣ್ಯಾತಿಗಣ್ಯರು ಅಂತಿಮ ದರ್ಶನ ಪಡೆದರು. ಬಳಿಕ ಮಧ್ಯರಾತ್ರಿ 1.30 ರ ಸುಮಾರಿಗೆ ಸಿಐಟಿ ಕಾಲೋನಿಯಲ್ಲಿರುವ ಪುತ್ರಿ ಕನಿಮೋಳಿ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಯ್ತು. ನಸುಕಿನ ಜಾವ 5.30ರ ನಂತರ ರಾಜಾಜಿ ಹಾಲ್‍ನಲ್ಲಿ ಸಾರ್ವಜನಿಕ ದರ್ಶನಕ್ಕಿಡಲಾಗಿದ್ದು, ಸಾಗರೋಪಾದಿಯಲ್ಲಿ ಜನ ಹರಿದು ಬರ್ತಿದ್ದಾರೆ.

ಐದು ಬಾರಿ ಮುಖ್ಯಮಂತ್ರಿ:
ಕರುಣಾನಿಧಿ ಅವರು 1924 ಜೂನ್ 3ರಂದು ಮದ್ರಾಸ್ ನ ನಾಗಪಟ್ಟಿನಂ ಜಿಲ್ಲೆಯ ಥಿರುಕ್ಕುವಲೈ ನಲ್ಲಿ ಜನಿಸಿದ್ದರು. ತಮಿಳುನಾಡಿನ ಮೂರನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ಇವರು ತಮಿಳುನಾಡಿನ ರಾಜಕೀಯ ಪಕ್ಷವಾದ ದ್ರಾವಿಡ ಮುನ್ನೇತ್ರ ಕಳಗಂ ನ ಅಧ್ಯಕ್ಷರಾಗಿದ್ದರು. 1969 ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. ಮತ್ತೆ 2006 ಮೇ 13 ರಂದು ಐದನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದರು.

Share This Article
Leave a Comment

Leave a Reply

Your email address will not be published. Required fields are marked *