ಬೆಂಗಳೂರು: ನಮ್ಮ ಗೌರವಾನ್ವಿತ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ (Siddaramaiah) ಕೈ ಬಲಪಡಿಸುವ ಕಡೆಗೆ ನಮ್ಮ ಚಿಂತನೆ ಇರಲಿ ಎಂದು ನಿಮ್ಮನ್ನು ಕೋರುತ್ತೇನೆ ಎಂದು ಮಾಜಿ ಸಚಿವ ರಾಜಣ್ಣ (KN Rajanna) ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.
ಸಿದ್ದರಾಮಯ್ಯ ಸಂಪುಟದಿಂದ (Siddaramaiah Cabinet) ವಜಾಗೊಂಡ ಬಳಿಕ ರಾಜಣ್ಣ ಅಭಿಮಾನಿಗಳು ಇಂದು ತುಮಕೂರು ಜಿಲ್ಲೆಯ ಮಧುಗಿರಿ (Madhugiri) ಪಟ್ಟಣವನ್ನು ಬಂದ್ ಮಾಡಿ ಪ್ರತಿಭಟಿಸಿದರು. ಈ ಬೆನ್ನಲ್ಲೇ ರಾಜಣ್ಣ ಅಭಿಮಾನಿಗಳಿಗೆ ಸಾಮಾಜಿಕ ಜಾಲತಾಣದಲ್ಲಿ ಭಾವುಕ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ರಾಹುಲ್ ಗಾಂಧಿ ನಿರ್ದೇಶನದ ಮೇಲೆ ರಾಜಣ್ಣರನ್ನ ಸಂಪುಟದಿಂದ ವಜಾ ಮಾಡಲಾಗಿದೆ: ಸಿದ್ದರಾಮಯ್ಯ
ರಾಜಣ್ಣ ಪತ್ರದಲ್ಲಿ ಏನಿದೆ?
ಆತ್ಮೀಯ ಹಾಗೂ ಅಭಿಮಾನಿ ಬಂಧುಗಳಲ್ಲಿ ನನ್ನದೊಂದು ಕೋರಿಕೆ. ರಾಜಕೀಯ ಏರುಪೇರುಗಳು ನನಗೆ ಹೊಸತಲ್ಲ. ಯಾವುದೇ ರಾಜಕೀಯ ಬದಲಾವಣೆಗೂ ಎಂದೂ ಧೃತಿಗೆಟ್ಟಿಲ್ಲ. ಇದು ಸಹ ಹಾಗೆಯೇ ಎಂದು ಹೇಳಲು ಇಚ್ಛಿಸುತ್ತೇನೆ. ನಿಮ್ಮಲ್ಲಿ ನನ್ನ ವಿನಂತಿ ಏನೆಂದರೆ ಯಾವುದೇ ಕಾರಣಕ್ಕೂ ಅಭಿಮಾನದ ಅತಿರೇಕದಲ್ಲಿ ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ.
ಕೆಲವು ಯುವಜನರು ಅಹಿತಕರವಾಗಿ ತಮಗೆ ತಾವು ನೋವು ಮಾಡಿಕೊಂಡಿದ್ದು ನನ್ನ ಮನಸ್ಸಿಗೆ ದುಃಖ ತಂದಿದೆ. ನಿಮ್ಮನ್ನು ನಂಬಿಕೊಂಡು ನಿಮ್ಮ ಕುಟುಂಬಗಳು ಮನೆಯಲ್ಲಿ ಕಾಯುತ್ತಿರುತ್ತಾರೆ. ನಾನು ಸಹ ನಿಮ್ಮನ್ನು ನನ್ನ ಕುಟುಂಬವೆಂದೇ ಭಾವಿಸಿದ್ದೇನೆ. ನಿಮ್ಮ ಪ್ರೀತಿ, ಅಭಿಮಾನ ಎಂತಹದ್ದು ಎಂಬುದನ್ನು ಕಣ್ಣಾರೆ ಕಂಡಿದ್ದೇನೆ. ಹಾಗಾಗಿ ಯಾವುದೇ ತಪ್ಪು ನಿರ್ಧಾರ ಮಾಡಬೇಡಿ. ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡುವಂತಹ ಪ್ರಯತ್ನವನ್ನು ಮಾಡಬೇಡಿ.
ನಾವೆಲ್ಲರೂ ಬುದ್ಧ, ಬಸವ, ವಾಲ್ಮೀಕಿ, ಅಂಬೇಡ್ಕರ್ ರವರ ಹಾದಿಯಲ್ಲೇ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಳ್ಳುವುದು ಮುಖ್ಯ. ನಮ್ಮ ನಾಯಕರಾದ ರಾಹುಲ್ ಗಾಂಧಿಯವರ ನಾಯಕತ್ವದಲ್ಲಿ ಸಂವಿಧಾನ ಉಳಿಸುವ ಪ್ರಯತ್ನಕ್ಕೆ ಬಲ ತರಬೇಕಿದೆ. ಹಾಗೂ ನಮ್ಮ ಗೌರವಾನ್ವಿತ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಕೈ ಬಲಪಡಿಸುವ ಕಡೆಗೆ ನಮ್ಮ ಚಿಂತನೆ ಇರಲಿ ಎಂದು ನಿಮ್ಮನ್ನು ಕೋರುತ್ತೇನೆ.