ಕೋಲಾರ: ತನ್ನ ಕಚೇರಿಯ ಶೌಚಾಲಯವನ್ನು ತಾವೇ ಸ್ವಚ್ಛಗೊಳಿಸುವ ಮೂಲಕ ಕ್ಷೇತ್ರ ಶಿಕ್ಷಣಾಧಿಕಾರಿ ಡಿ-ಗ್ರೂಪ್ ನೌಕರರಿಗೆ ಸ್ವಚ್ಛತೆಯ ಪಾಠ ಹೇಳಿಕೊಟ್ಟಿದ್ದಾರೆ.
ಕೋಲಾರ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ನಾಗರಾಜಗೌಡ ಸ್ವತಃ ತಮ್ಮ ಕಚೇರಿಯ ಶೌಚಾಲಯವನ್ನು ಇಂದು ಶುದ್ಧ ಮಾಡುವ ಮೂಲಕ ಸಾವಿರಾರು ಶಿಕ್ಷಕರಿಗೆ ಮಾದರಿಯಾಗಿದ್ದಾರೆ. ಕಚೇರಿಯ ಶೌಚಾಲಯವನ್ನು ಪೊರಕೆ ಹಿಡಿದು ಸ್ವಚ್ಛಗೊಳಿಸುವ ಮೂಲಕ ಮಾದರಿಯಾಗಿದ್ದಾರೆ.
ಶಿಕ್ಷಕರು ಹಾಗೂ ಸರ್ಕಾರಿ ಇಲಾಖೆಗಳಲ್ಲಿನ ಅಧಿಕಾರಿಗಳು ಶೌಚಾಲಯಗಳನ್ನು ಸ್ವಚ್ಛಗೊಳಿಸಿಕೊಳ್ಳುವುದರಿಂದ ಸ್ವಚ್ಛ ಭಾರತ್ ಅಭಿಯಾನಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಸ್ವಚ್ಛ ಭಾರತ ಕಲ್ಪನೆ ಪ್ರಧಾನಿ ಮೋದಿ ಅವರಿಂದ ಆರಂಭವಾಗಿದ್ದು, ಅಧಿಕಾರಿಗಳು ಅದನ್ನು ಸಮರ್ಪಕವಾಗಿ ಮೈಗೂಡಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ.
ಒಂದು ವರ್ಷದ ಹಿಂದೆ ಸರ್ಕಾರಿ ಶಾಲೆಯ ಶೌಚಾಲಯವನ್ನು ಸ್ವಚ್ಛ ಮಾಡುವ ಮೂಲಕ ಬಂಗಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಕೆಂಪಯ್ಯ ಮಾದರಿಯಾಗಿದ್ದರು. ಅದರಂತೆ ಕೋಲಾರ ಬಿಇಓ ಶೌಚಾಲಯ ಸ್ವಚ್ಛ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ. ಈಗ ಬಿಇಓ ನಾಗರಾಜ್ಗೌಡ ಅವರ ಶೌಚಾಲಯ ಸ್ವಚ್ಛ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಶಿಕ್ಷಕರು ಸೇರಿದಂತೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.