ಸದ್ಯಕ್ಕೆ ಮದ್ಯದಂಗಡಿ ತೆರೆಯುವ ಪ್ರಸ್ತಾಪ ಇಲ್ಲ: ಎಚ್ ನಾಗೇಶ್

Public TV
1 Min Read

ಕೋಲಾರ: ಕೊರೊನಾ ಸೋಂಕು ತಡೆಗಟ್ಟುವವರೆಗೂ ರಾಜ್ಯದಲ್ಲಿ ಮದ್ಯದಂಗಡಿಗಳನ್ನ ತೆರೆಯುವುದಿಲ್ಲ ಎಂದು ಅಬಕಾರಿ ಸಚಿವ ಎಚ್ ನಾಗೇಶ್ ಹೇಳಿಕೆ ನೀಡಿದ್ರು.

ಇಂದು ಕೋಲಾರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕೊರೊನಾ ಸೋಂಕು ತಡೆಗಟ್ಟುವವರೆಗೂ ಮದ್ಯದಂಗಡಿಗಳನ್ನು ತೆರೆಯುವುದಿಲ್ಲ ಎಂದು ಹೇಳಿದ್ರು.

ಅಲ್ಲದೆ ರಾಜ್ಯದಾದ್ಯಂತ ಕೊರೊನಾ ಲಾಕ್ ಡೌನ್ ಆಗಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಮುಗಿದ ಬಳಿಕ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡಿದ ನಂತರ, ಮದ್ಯದಂಗಡಿಗಳನ್ನ ತೆರೆಯುವುದರ ಕುರಿತು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.

ಕೋಲಾರದ ಗಡಿಭಾಗವಾದ ಬೆಂಗಳೂರು ಗ್ರಾಮಾಂತರ ಭಾಗದ ಬೈಲ ನರಸಾಪುರದಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಜೊತೆಗೆ ಕೊರೊನಾ ಸೋಂಕಿತ ವ್ಯಕ್ತಿ ಕೋಲಾರ ತಾಲೂಕಿನ ವೇಮಗಲ್ ಸೇರಿದಂತೆ ನರಸಾಪುರ ಭಾಗಗಳಲ್ಲಿ ಓಡಾಡಿದ್ದು, ಸೋಂಕಿತನ ಟ್ರಾವಲ್ ಹಿಸ್ಟರಿಯನ್ನ ಅಧಿಕಾರಿಗಳು ಹಾಗೂ ಪೊಲೀಸರು ಸಂಗ್ರಹ ಮಾಡುತ್ತಿದ್ದಾರೆ ಎಂದರು.

ಕೋಲಾರ ಜಿಲ್ಲೆಯಾದ್ಯಂತ ಇದುವರೆಗೂ ಯಾವುದೇ ಕೊರೊನಾ ಸೋಂಕು ಕಂಡುಬಂದಿಲ್ಲ, ಕೋಲಾರ ಜಿಲ್ಲೆಯ ಎಲ್ಲಾ ಗಡಿಭಾಗಗಳಲ್ಲಿ ನಿಗಾವಹಿಸಲಾಗಿದೆ ಎಂದು ಹೇಳಿದ್ರು.

Share This Article
Leave a Comment

Leave a Reply

Your email address will not be published. Required fields are marked *