ದೇವಸ್ಥಾನಗಳಿಗೆ ಹೈಟೆಕ್ ಸ್ಪರ್ಶ, ಇ-ಹುಂಡಿ ವ್ಯವಸ್ಥೆ ಜಾರಿಗೆ ಸರ್ಕಾರ ನಿರ್ಧಾರ

Public TV
2 Min Read

ಬೆಂಗಳೂರು: ದೇವಸ್ಥಾನಗಳಿಗೆ ಹೈಟೆಕ್ ಸ್ಪರ್ಶ ನೀಡಲು ಮುಂದಾಗಿವ ಬಿಜೆಪಿ ಸರ್ಕಾರವು, ಇ-ಹುಂಡಿ ವ್ಯವಸ್ಥೆ ಜಾರಿಗೆ ತರಲು ನಿರ್ಧಾರ ಕೈಗೊಂಡಿದೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಜರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು, 15 ದಿನಗಳಲ್ಲಿ ರಾಜ್ಯ ಧಾರ್ಮಿಕ ಪರಿಷತ್ ರಚನೆ ಆಗಲಿದೆ. ಜೊತೆಗೆ ರಾಜ್ಯದ 30 ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಉಸ್ತುವಾರಿಯಲ್ಲಿ ಜಿಲ್ಲಾ ಧಾರ್ಮಿಕ ಪರಿಷತ್ ರಚನೆ ಮಾಡುತ್ತೇವೆ. ಈ ಬೆನ್ನಲ್ಲೇ ಇ-ಹುಂಡಿ ಪ್ರಕ್ರಿಯೆ ಜಾರಿಗೆ ತರುತ್ತಿದ್ದೇವೆ. ಪ್ರಾರಂಭದಲ್ಲಿ 10-15 ದೇವಸ್ಥಾನಗಳಲ್ಲಿ ಇ-ಹುಂಡಿ ಪ್ರಕ್ರಿಯೆ ಜಾರಿ ಬಲಿದೆ ಎಂದು ತಿಳಿಸಿದರು.

ಜಿಲ್ಲಾ ಪರಿಷತ್ ರಚನೆ ಆದ ಬಳಿಕ ಬಿ ಮತ್ತು ಸಿ ವಲಯದ ದೇವಾಲಯಗಳಿಗೆ ಆಡಳಿತ ಮಂಡಳಿಗಳ ನೇಮಕ ಮಾಡಲಾಗುತ್ತದೆ. ರಾಜ್ಯದಲ್ಲಿ ಇರು ಮುಜರಾಯಿ ದೇವಾಲಯಗಳ ಜಾಗ ಸರ್ವೆ ಮಾಡಲು ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಸರ್ವೆ ತಂಡ ರಚನೆ ಮಾಡಲಾಗುವುದು. ಸರ್ವೆ ವೇಳೆ ದೇವಸ್ಥಾನದ ಜಾಗ ಅತಿಕ್ರಮ ಮಾಡಿದ್ದರೆ ವಶಪಡಿಸಿಕೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.

ಇಷ್ಟು ದಿನ ಲೋಕೋಪಯೋಗಿ ಇಲಾಖೆ ನೇತೃತ್ವದಲ್ಲಿ ನಡೆಯುತ್ತಿದ್ದ ಇಂಜಿನಿಯರಿಂಗ್ ವಿಭಾಗದ ಬದಲಾಗಿ ಇಲಾಖೆಯಿಂದಲೇ ಇಂಜಿನಿಯರಿಂಗ್ ವಿಭಾಗ ಪ್ರಾರಂಭ ಮಾಡಲಾಗುತ್ತೆ. ಇಲಾಖೆಯ ವ್ಯಾಪ್ತಿಗೆ ಬರುವ ಅನುವಂಶಿಕ ದೇವಸ್ಥಾನಗಳಿಗೆ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ನೇಮಕ ಮಾಡುವುದಕ್ಕೆ ನಿರ್ಧರಿಸಲಾಗಿದೆ. ಎ ವರ್ಗದ 62 ದೇವಾಲಯಗಳಿಗೆ ಆಡಳಿತ ಮಂಡಳಿ ರಚನೆ ಮಾಡುವ ಆದೇಶ ಹೊರಡಿಸಲಾಗಿದೆ. ಇದಲ್ಲದೆ ಇಲಾಖೆಯಲ್ಲಿ ಅಗತ್ಯವಾಗಿ ಖಾಲಿ ಇರುವ ಒಂದು ಸಾವಿರ ಹುದ್ದೆಗಳ ನೇಮಕ ಶೀಘ್ರವೇ ಭರ್ತಿ ಮಾಡಲಾಗುತ್ತದೆ ಎಂದು ಭರವಸೆ ನೀಡಿದರು.

ಏನಿದು ಇ-ಹುಂಡಿ?
ಭಕ್ತರು ನೀಡುವ ಕಾಣಿಕೆಯನ್ನು ನೇರವಾಗಿ ಇ-ಹುಂಡಿಗೆ ಹಾಕುವುದು. ಇದರಿಂದಾಗಿ ಕಾಣಿಕೆ ನೀಡುವುದಕ್ಕೆ ಯಾವುದೇ ವ್ಯಕ್ತಿಗಳ ಅವಶ್ಯಕತೆ ಇರುವುದಿಲ್ಲ. ಎಷ್ಟು ಹಣ ಹಾಕಲಾಗಿದೆ, ಹೆಸರು ಸಮೇತ ನಿಮಗೆ ಮಾಹಿತಿ ತಕ್ಷಣಕ್ಕೆ ಲಭ್ಯವಾಗುತ್ತದೆ. ಕಾಣಿಕೆ ಮೊತ್ತದ ವಿವರ ಸ್ಲಿಪ್‍ನಲ್ಲಿ ತಕ್ಷಣವೇ ಲಭ್ಯವಾಗಲಿದೆ. ಯಾವುದೇ ವ್ಯಕ್ತಿ ಕೈಗೆ ಕಾಣಿಕೆ ಕೊಡುವ ಅವಶ್ಯಕತೆ ಇರುವುದಿಲ್ಲ. ಅಷ್ಟೇ ಅಲ್ಲದೆ ಸ್ಲಿಪ್ ಬರೆಸುವ ಗೋಜು ಇರುವುದಿಲ್ಲ. ಭಕ್ತರು ಇ-ಹುಂಡಿಯಲ್ಲಿ ಹಾಕಿದ ಹಣ ನೇರವಾಗಿ ದೇವಸ್ಥಾನ ಬ್ಯಾಂಕ್ ಅಕೌಂಟ್‍ಗೆ ಜಮೆ ಆಗುತ್ತೆ. ಈ ಸೇವೆಗಳನ್ನು ನಿಂತಲ್ಲೆ ಬುಕ್ ಮಾಡಿಸಬಹುದು. ಇ-ಹುಂಡಿಯಲ್ಲಿ ಹಣ ಕಟ್ಟಿ ವಿಶೇಷ ಸೇವೆಗಳನ್ನು ದೇವಸ್ಥಾನಗಳಲ್ಲಿ ಮಾಡಿಸಬಹುದು.

ಇದೇ ವೇಳೆ ನೆರೆ ಪರಿಹಾರದ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಈಗಾಗಲೇ ಕೇಂದ್ರ ತಂಡ ಪರಿಶೀಲನೆ ಮಾಡಿಕೊಂಡು ಹೋಗಿದೆ. ಆದಷ್ಟು ಬೇಗ ಕೇಂದ್ರ ಹೆಚ್ಚು ಅನುದಾನ ನೀಡುವ ನಿರೀಕ್ಷೆ ರಾಜ್ಯ ಸರ್ಕಾರಕ್ಕೆ ಇದೆ. ಆದಷ್ಟು ಬೇಗ ಕೇಂದ್ರದಿಂದ ಅನುದಾನ ಬರುತ್ತದೆ. ಗರಿಷ್ಠ ಪ್ರಮಾಣದಲ್ಲಿ ಅನುದಾನ ರಾಜ್ಯಕ್ಕೆ ಬರಲಿದೆ. ಕೇಂದ್ರ ಸರ್ಕಾರದ ಮೇಲೆ ನಮಗೆ ನಂಬಿಕೆ ಇದೆ ಎಂದು ತಿಳಿಸಿದರು.

ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಪರ ಬುಧವಾರ ನಡೆದ ಹೋರಾಟದ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಜಾರಿ ನಿರ್ದೇಶನಾಲಯ (ಇಡಿ) ತೆಗೆದುಕೊಂಡ ನಿರ್ಧಾರ ಸರಿ ಇದೆ. ನಮ್ಮ ಬಿಜೆಪಿ ನಾಯಕರು ಯಾರು ಪ್ರತಿಭಟನೆ ಹೋಗಿಲ್ಲ. ಯಾರಾದರು ಹೋಗಿದ್ದರೆ ಅದಕ್ಕೂ ಪಕ್ಷಕ್ಕೂ ಸಂಬಂಧವಿಲ್ಲ. ನನ್ನ ಗಮನಕ್ಕೆ ಬಂದಿರುವಂತೆ ನಮ್ಮ ಪಕ್ಷದ ಯಾವ ನಾಯಕರು ಪ್ರತಿಭಟನೆಯಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ಇಲ್ಲ. ಡಿ.ಕೆ.ಶಿವಕುಮಾರ್ ಅವರ ಬಂಧನದಲ್ಲಿ ಕೇಂದ್ರ ಸರ್ಕಾರ ಯಾವುದೇ ಹಸ್ತಕ್ಷೇಪ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದರು.

Share This Article
Leave a Comment

Leave a Reply

Your email address will not be published. Required fields are marked *