ಕೆಪಿಟಿಸಿಎಲ್ ಪರೀಕ್ಷೆಯಲ್ಲಿ ಸ್ಮಾರ್ಟ್ ವಾಚ್ ಬಳಕೆ- 9 ಮಂದಿ ಬಂಧನ

Public TV
2 Min Read

ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆಯಲ್ಲಿ ಸ್ಮಾರ್ಟ್ ವಾಚ್ ಬಳಸಿ ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ 9 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ನಾಗನೂರ ಗ್ರಾಮದ ಸಿದ್ದಪ್ಪ ಮದಿಹಳ್ಳಿ, ಬೆನಚಿನಮರಡಿ ಗ್ರಾಮದ ಸಿದ್ದಪ್ಪ ಕೊತ್ತಲ, ಮಾಲದಿನ್ನಿ ಗ್ರಾಮದ ರೇಣುಕಾ ಜವಾರಿ, ಸುನೀಲ ಭಂಗಿ, ಸಂತೋಷ ವೀರನಗಡ್ಡಿ, ಬಸವಣ್ಣಿ ಡೊಣವಾಡ, ಗದಗ ಮೂಲದ ಮಾರುತಿ ಸೋನವಣಿ, ಸಮೀತಕುಮಾರ್ ಸೋನವಣಿ ಹಾಗೂ ಅಮರೇಶ ರಾಜೂರ ಬಂಧಿತರು.

ಕಳೆದ ಆಗಸ್ಟ್ 7ರಂದು ನಡೆದಿದ್ದ ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆಯಲ್ಲಿ ಗೋಕಾಕ್ ಜಿ.ಎಸ್. ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾರ್ಥಿಯಿಂದ ಸ್ಮಾರ್ಟ್ ವಾಚ್ ಬಳಸಿ ಅಕ್ರಮ ಎಸಗಿದ ಆರೋಪದಡಿ ಸಿದ್ದಪ್ಪ ಮದಿಹಳ್ಳಿ ಎಂಬ ಅಭ್ಯರ್ಥಿಯನ್ನು ಪೊಲೀಸರು ಬಂಧಿಸಿದ್ದರು. ಬಂಧಿತ ಆರೋಪಿ ಸಿದ್ದಪ್ಪ ಮದಿಹಳ್ಳಿ ಸ್ಮಾರ್ಟ್ ವಾಚ್‍ನಲ್ಲಿ ಪ್ರಶ್ನೆ ಪತ್ರಿಕೆ ಫೋಟೋ ತೆಗೆದು ಟೆಲಿಗ್ರಾಂ ಆ್ಯಪ್ ಮೂಲಕ ಮತ್ತೊಬ್ಬ ಆರೋಪಿ ಸುನೀಲ್ ಭಂಗಿ ಎಂಬುವವರಿಗೆ ರವಾನಿಸಿದ್ದನು.

ಸಿಸಿ ಕ್ಯಾಮೆರಾ ದೃಶ್ಯಾವಳಿ ಗಮನಿಸಿ ಅನುಮಾನಗೊಂಡ ಪರೀಕ್ಷಾ ಕೇಂದ್ರದ ಸಿಬ್ಬಂದಿ ಆ. 9ರಂದು ಗೋಕಾಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ದಾಖಲಿಸಿಕೊಂಡ ಪೊಲೀಸರು ಮೊದಲಿಗೆ ಸಿದ್ದಪ್ಪ ಮದಿಹಳ್ಳಿ ಎಂಬಾತನನ್ನು ಬಂಧಿಸಿದ್ದಾರೆ. ಬಳಿಕ ತೀವ್ರ ವಿಚಾರಣೆ ನಡೆಸಿದ ಸಂದರ್ಭದಲ್ಲಿ ಸುನೀಲ್ ಭಂಗಿಗೆ ಬಂಧಿತ ಆರೋಪಿ ಸಿದ್ದಪ್ಪ ಪ್ರಶ್ನೆ ಪತ್ರಿಕೆ ಕಳುಹಿಸುತ್ತಿದ್ದ ಬಗ್ಗೆ ಮಾಹಿತಿ ದೊರೆತಿದೆ. ಈ ಹಿನ್ನೆಲೆಯಲ್ಲಿ ಗೋಕಾಕ್ ಪೊಲೀಸರು ಹುಕ್ಕೇರಿ ತಾಲೂಕಿನ ಬಿ.ಕೆ. ಶಿರಹಟ್ಟಿ ಗ್ರಾಮದ ತೋಟದ ಮನೆಯ ಮೇಲೆ ದಾಳಿ ನಡೆಸಿ ಸುನಿಲ್‍ನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲೊಬ್ಬ ನಕಲಿ ಸ್ವಾಮಿಯ ಕಾಮ ಪುರಾಣ – 7 ವರ್ಷದಿಂದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ

ಸುನೀಲ್ ಭಂಗಿಯನ್ನು ಪೊಲೀಸರು ತೀವ್ರವಾಗಿ ವಿಚಾರಣೆ ನಡೆಸಿದಾಗ, ಈತ ಮನೆಯಲ್ಲಿ ಕುಳಿತು ಬ್ಲೂ ಟೂತ್‍ನಲ್ಲಿ ಹಲವರಿಗೆ ಉತ್ತರ ಹೇಳಿದ್ದಾನೆ. ಇದರ ಜೊತೆಗೆ ಗದಗ ನಗರಸಭೆ ಪಿಯು ಕಾಲೇಜಿನ ಕೇಂದ್ರದಿಂದಲ್ಲೂ ಪ್ರಶ್ನೆ ಪತ್ರಿಕೆ ಲಭ್ಯವಾಗಿತ್ತು ಎನ್ನುವ ವಿಷಯ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿ ಆ ಪ್ರಶ್ನೆ ಪತ್ರಿಕೆಯನ್ನು ಸೋರಿಕೆ ಮಾಡಿದ್ದ ಗದಗ ಮೂಲದ ಮಾರುತಿ ಸೋನವಣಿ, ಸಮೀತಕುಮಾರ್ ಸೋನವಣಿ ಬಂಧಿಸಿ ಬೆಳಗಾವಿಗೆ ಕರೆತಂದಿದ್ದಾರೆ. ತಂದೆ ಮತ್ತು ಮಗ ಪರೀಕ್ಷೆ ನಡೆಯುವ ಸಂದರ್ಭದಲ್ಲಿ ಅಭ್ಯರ್ಥಿಗಳಿಗೆ ಬ್ಲೂಟೂತ್ ಡಿವೈಸ್ ಮೂಲಕವೇ ಉತ್ತರ ಹೇಳಿದ ಆರೋಪವಿದೆ.

ಪರೀಕ್ಷೆಯಲ್ಲಿ ನಡೆದಿರುವ ಅಕ್ರಮ ಪ್ರಕರಣ ಬೆನ್ನತ್ತಿರುವ ಬೆಳಗಾವಿ ಎಸ್ಪಿ ಡಾ. ಸಂಜೀವ್ ಪಾಟೀಲ್ ನೇತೃತ್ವದ ತಂಡ ಪ್ರತ್ಯೇಕ ಎರಡು ತಂಡಗಳನ್ನು ರಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪರೀಕ್ಷಾ ಪ್ರಾಧಿಕಾರಕ್ಕೆ ಸಮಗ್ರ ವರದಿ ಸಲ್ಲಿಕೆಗೆ ನಿರ್ಧಾರ ಮಾಡಲಾಗಿದ್ದು, ಅಭ್ಯರ್ಥಿಗಳು ಬ್ಲೂಟೂನ್ ಡಿವೈಸ್ ಬಳಸಿ ಪರೀಕ್ಷೆ ಬರೆದಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮಡಿಕೇರಿ ಚಲೋಗೆ ನಿಷೇಧಾಜ್ಞೆ ಅಡ್ಡಿ – ಕಾಂಗ್ರೆಸ್‌ ಮುಂದಿನ ನಡೆ ಏನು?

ಕೆಪಿಟಿಸಿಎಲ್ ಪರೀಕ್ಷೆಯಲ್ಲಿ ಬೆಳಗಾವಿ, ಗದಗ, ಉತ್ತರ ಕನ್ನಡ ಜಿಲ್ಲೆಯಲ್ಲಿ ಜಾಲ ಸಕ್ರಿಯವಾಗಿದೆ. ಹೀಗಾಗಿ ಪೊಲೀಸರು ಸದ್ಯ ತನಿಖೆಯನ್ನು ಮತ್ತಷ್ಟು ಚುರುಕಿಗೊಳಿಸಿದ್ದಾರೆ. ಸದ್ಯ ಬೆಳಗಾವಿ ಪೊಲೀಸರಿಂದ 9 ಆರೋಪಿಗಳನ್ನು ಬಂಧಿಸಲಾಗಿದ್ದು, ಕೆಪಿಟಿಸಿಎಲ್ ಪರೀಕ್ಷೆ ಅಕ್ರಮದಲ್ಲಿ 13 ಅಭ್ಯರ್ಥಿಗಳು ಉತ್ತರ ಬರೆದಿರುವ ಮಾಹಿತಿ ಇದ್ದು, ಹೀಗಾಗಿ ತನಿಖೆ ಮುಂದುವರೆದಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *