ಹ್ಯಾಟ್ರಿಕ್ ಗೆಲುವಿಗಾಗಿ ದೇವಿ ಮುಂದೆ ಬಿ ಫಾರಂ ಇಟ್ಟು ಪೂಜೆ ಸಲ್ಲಿಸಿದ ನಾರಾಯಣಗೌಡ

Public TV
1 Min Read

– 2018ರಲ್ಲಿ ಕೇವಲ 9,819 ಮತ ಗಳಿಸಿದ್ದ ಬಿಜೆಪಿ ಅಭ್ಯರ್ಥಿ

ಮಂಡ್ಯ: ಹ್ಯಾಟ್ರಿಕ್ ಗೆಲುವು ತಂದುಕೊಡುವಂತೆ ಅನರ್ಹ ಶಾಸಕ ನಾರಾಯಣಗೌಡ ದಢೀಘಟ್ಟದ ಚಿಕ್ಕಮ್ಮ ದೇವಿಗೆ ಪೂಜೆ ಸಲ್ಲಿಸಿದ್ದಾರೆ.

ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸ್ಪರ್ಧಿಸುತ್ತಿರುವ ನಾರಾಯಣಗೌಡ ಅವರು ಪತ್ನಿ ದೇವಿಕಾ ಜೊತೆ ದೇವಸ್ಥಾನಕ್ಕೆ ಆಗಮಿಸಿದರು. ಬಳಿಕ ಮನೆ ದೇವರ ಮುಂದೆ ಬಿ ಫಾರಂ ಇಟ್ಟು ಪೂಜೆ ಮಾಡಿಸಿದ್ದಾರೆ. ನಾರಾಯಣಗೌಡರು  ಪ್ರತಿ ಚುನಾವಣೆಗೂ ಮುನ್ನ ದಢೀಘಟ್ಟದ ಚಿಕ್ಕಮ್ಮ ದೇವಸ್ಥಾನಕ್ಕೆ ಬಂದು ಪೂಜೆ ಸಲ್ಲಿಸುತ್ತಾರೆ. ಈ ಬಾರಿಯೂ ದೇವಿಗೆ ಪೂಜೆ ಸಲ್ಲಿಸಿ, ಉಪ ಚುನಾವಣೆ ಅಖಾಡಕ್ಕೆ ಧುಮುಕಿದ್ದಾರೆ.

ನಾರಾಯಣಗೌಡ ಅವರು 2008ರಲ್ಲಿ ಬಿಎಸ್‍ಪಿಯಿಂದ ಸ್ಪರ್ಧಿಸಿ ಕೇವಲ 10,218 ಮತಗಳನ್ನು ಪಡೆದು ಸೋತಿದ್ದರು. ಬಳಿಕ ಜೆಡಿಎಸ್ ಸೇರಿದ ನಾರಾಯಣಗೌಡ ಅವರು, 2014ರ ಚುನಾವಣೆಯಲ್ಲಿ 56,784 ಮತಗಳನ್ನು ಪಡೆದು ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದರು.

2018ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‍ನಿಂದ ಚುನಾವಣಾ ಕಣಕ್ಕೆ ಇಳಿದಿದ್ದ ನಾರಾಯಣಗೌಡ ಅವರು 88,016 ಮತಗಳನ್ನು ಕೆ.ಬಿ.ಚಂದ್ರಶೇಖರ್ ವಿರುದ್ಧ ಜಯ ಗಳಿಸಿದ್ದರು. ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಸಿ.ಮಂಜು ಕೇವಲ 9,819 ಮತಗಳನ್ನು ಪಡೆಯಲು ಶಕ್ತರಾಗಿದ್ದರು. ಉಪ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಹ್ಯಾಟ್ರಿಕ್ ಜಯವನ್ನು ಸಾಧಿಸಲು ನಾರಾಯಣಗೌಡ ಭಾರೀ ಸಿದ್ಧತೆ ನಡೆಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *