ಕೃಷ್ಣ ನದಿ ನೀರಿನ ಪ್ರಮಾಣದಲ್ಲಿ ಭಾರೀ ಹೆಚ್ಚಳ- ರಾಯಚೂರು, ಯಾದಗಿರಿಯಲ್ಲಿ ಹೈ ಅಲರ್ಟ್

Public TV
2 Min Read

ರಾಯಚೂರು/ಯಾದಗಿರಿ: ಮಹಾರಾಷ್ಟ್ರದಲ್ಲಿ ಕಳೆದ 15 ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಈ ಹಿನ್ನೆಲೆ ಕೃಷ್ಣ ನದಿಯ ನೀರಿನ ಪ್ರಮಾಣದಲ್ಲಿ ಅಪಾರ ಏರಿಕೆಯಾಗುತ್ತಿದೆ. ಹೀಗಾಗಿ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಿಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

ಕೃಷ್ಣ ನದಿಯಲ್ಲಿ ನೀರಿನ ಪ್ರಮಾಣ ತೀವ್ರ ಹೆಚ್ಚಳವಾಗಿದ್ದು, ಭಾರೀ ಪ್ರವಾಹ ಸಾಧ್ಯತೆ ಇದೆ. ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯಗಳಿಂದಲೂ ಅಧಿಕ ಪ್ರಮಾಣದ ನೀರನ್ನು ಹರಿಬಿಡಲಾಗುತ್ತಿದ್ದು, ರಾಯಚೂರು, ಯಾದಗಿರಿ ಜಿಲ್ಲೆಯಲ್ಲಿ ಜಿಲ್ಲಾಡಳಿತ ಹೈ ಅಲರ್ಟ್ ಘೊಷಿಸಿದೆ. ಮುಂಬೈನಲ್ಲಿ ಮಳೆಯಾಗುತ್ತಿದ್ದು, ಇತ್ತ ರಾಜ್ಯದ ಗಡಿ ಜಿಲ್ಲೆ ಬೆಳಗಾವಿಯಲ್ಲೂ ಸಹ ನಿರಂತರ ಮಳೆಯಾಗುತ್ತಿದೆ. ಹೀಗಾಗಿ ಹೆಚ್ಚಿನ ಪ್ರಮಾಣದ ನೀರು ಜಲಾಶಯಗಳಿಗೆ ಹರಿದು ಬರುತ್ತಿದ್ದು, ಹಿಪ್ಪರಗಿ ಜಲಾಶಯದಿಂದ ಆಲಮಟ್ಟಿ ಜಲಾಶಯಕ್ಕೆ ಭಾರೀ ಪ್ರಮಾಣದ ನೀರು ಹರಿ ಬಿಡಲಾಗುತ್ತಿದೆ.

ಇಂದು ರಾತ್ರಿ ಆಲಮಟ್ಟಿಯಿಂದ ನಾರಾಯಣಪುರಕ್ಕೆ 3 ಲಕ್ಷ ಕ್ಯೂಸೆಕ್ಸ್, ನಂತರ ನಾರಾಯಣಪುರ ಜಲಾಶಯದಿಂದ ಕೃಷ್ಣ ನದಿಗೆ 3 ಲಕ್ಷ ಕ್ಯೂಸೆಕ್ಸ್ ನೀರು ಹರಿಬಿಡುವ ಸಾಧ್ಯತೆ ಇದ್ದು, ಇಷ್ಟೊಂದು ಪ್ರಮಾಣದ ನೀರು ಬಿಟ್ಟರೆ ರಾಯಚೂರು ಜಿಲ್ಲೆಯ ಸಾವಿರಾರು ಎಕರೆ ಕೃಷಿ ಭೂಮಿಗೆ ಭಾರೀ ಪ್ರಮಾಣದಲ್ಲಿ ನೀರು ನುಗ್ಗುವ ಸಾಧ್ಯತೆ ಇದೆ. ಹೀಗಾಗಿ ನದಿ ಪಕ್ಕದ ಪಂಪ್‍ಸೆಟ್‍ಗಳನ್ನು ತೆಗೆಯಲು ರೈತರಿಗೆ ಜಿಲ್ಲಾಡಳಿತ ಸೂಚನೆ ನೀಡಿದ್ದು, ನಾರಾಯಣಪುರ ಜಲಾಶಯದಿಂದ ಕೃಷ್ಣ ನದಿಗೆ ಹೆಚ್ಚಿನ ಪ್ರಮಾಣದ ನೀರು ಬಿಡುತ್ತಿರುವ ಹಿನ್ನೆಲೆ ಪ್ರವಾಹದ ಮುನ್ನೆಚ್ಚರಿಕೆಯಿಂದ ರೈತರು ಕೃಷ್ಣ ನದಿ ಬಳಿ ಹಾಕಿರುವ ಪಂಪ್ ಸೆಟ್ ಗಳನ್ನು ತೆರವುಗೊಳಿಸುತ್ತಿದ್ದಾರೆ.

ರಾಯಚೂರು, ಲಿಂಗಸ್ಗೂರು, ದೇವದುರ್ಗ ತಾಲೂಕಿನಲ್ಲಿ ಪ್ರವಾಹ ಭೀತಿ ಎದುರಾಗಿದೆ. ಹೀಗಾಗಿ ನದಿ ಬಳಿ ತೆರಳದಂತೆ ನದಿ ಪಾತ್ರದ ಗ್ರಾಮಸ್ಥರಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ಇತ್ತ ಯಾದಗಿರಿ ಜಿಲ್ಲೆಯ ನಾರಾಯಣಪುರ ಡ್ಯಾಂನಲ್ಲಿಯೂ ಸಹ ಒಳಹರಿವು ಹೆಚ್ಚಾದ ಹಿನ್ನೆಲೆ 24 ಗೇಟ್‍ಗಳ ಮೂಲಕ ಕೃಷ್ಣಾ ನದಿಗೆ 2.25 ಲಕ್ಷ ಕ್ಯೂಸೆಕ್ಸ್ ನೀರು ಹರಿಬಿಡಲಾಗುತ್ತಿದ್ದು, ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚುತ್ತಿದ್ದಂತೆ ನಾರಾಯಣಪುರದ ಛಾಯಾ ಭಗವತಿ ದೇವಸ್ಥಾನಕ್ಕೆ ನೀರು ನುಗ್ಗಿದ್ದು, ಸಮುದ್ರದ ಅಲೆಗಳಂತೆ ಬೃಹತ್ ಗಾತ್ರದ ಅಲೆಗಳು ದೇವಸ್ಥಾನಕ್ಕೆ ಅಪ್ಪಳಿಸುತ್ತಿವೆ. ಕೃಷ್ಣ ನದಿ ತಟದಲ್ಲೇ ಈ ದೇವಸ್ಥಾನವಿದ್ದು, ಅರ್ಚಕರನ್ನು ಸುರಕ್ಷಿತವಾಗಿ ದೇವಸ್ಥಾನದಿಂದ ಹೊರ ಕರೆತರಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *