ಪಾಕ್ ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರೋ ಜಾಧವ್ ಭೇಟಿ ಮಾಡಿದ ಪತ್ನಿ, ತಾಯಿ

Public TV
2 Min Read

ಇಸ್ಲಾಮಾಬಾದ್: ಮರಣದಂಡನೆಗೆ ಗುರಿಯಾಗಿರುವ ಭಾರತೀಯ ಪ್ರಜೆ ಕುಲಭೂಷಣ್ ಜಾಧವ್ ಅವರನ್ನು ಪತ್ನಿ ಮತ್ತು ತಾಯಿ ಸೋಮವಾರ ಮಧ್ಯಾಹ್ನ ಭೇಟಿ ಮಾಡಿ ಮಾತನಾಡಿದ್ದಾರೆ.

ಜಾಧವ್ ಬಂಧನದ 21 ತಿಂಗಳ ನಂತರ ಪಾಕಿಸ್ತಾನ ಸರ್ಕಾರ ಕುಟುಂಬ ಸದಸ್ಯರ ಭೇಟಿಗೆ ಅವಕಾಶ ಕಲ್ಪಿಸಿತ್ತು. ಇಸ್ಲಾಮಾಬಾದ್ ನಲ್ಲಿರುವ ಪಾಕ್ ವಿದೇಶಾಂಗ ಸಚಿವಾಲಯದ ಕಚೇರಿಯಲ್ಲಿ ಸೇನೆ, ಪೊಲೀಸ್, ಶಾರ್ಪ್ ಶೂಟರ್ಸ್ ಗಳ ಬಿಗಿಭದ್ರತೆ ನಡುವೆ ಪತ್ನಿ ಚೇತನ್ ಕುಲ್ ಹಾಗೂ ತಾಯಿ ಆವಂತಿ ಅವರು ಜಾಧವ್ ಅವರನ್ನು ಭೇಟಿ ಮಾಡಿದರು.

ಮಧ್ಯಾಹ್ನ 1.35ರಿಂದ ಅರ್ಧ ಗಂಟೆ ಕಾಲ ಪತ್ನಿ ಮತ್ತು ತಾಯಿ ಭೇಟಿ ಮಾಡಿ ಮಾತನಾಡಿದರು. ಒಂದು ಕೋಣೆಯಲ್ಲಿ ಜಾಧವ್ ಕುಳಿತಿದ್ದರೆ ಮತ್ತೊಂದು ಕೋಣೆಯಲ್ಲಿ ಚೇತನ್ ಕುಲ್ ಹಾಗೂ ತಾಯಿ ಆವಂತಿ ಕುಳಿತಿದ್ದರು. ಮೂವರು ನೇರವಾಗಿ ಮಾತನಾಡಲು ಪಾಕ್ ಸರ್ಕಾರ ಅವಕಾಶ ಕೊಡಲಿಲ್ಲ. ಬದಲಾಗಿ ಗಾಜಿನ ಪರದೆಯಿಂದ ಪ್ರತ್ಯೇಕಿಸಲ್ಪಟ್ಟ ಕೋಣೆಯಲ್ಲಿ ಇಂಟರ್ ಕಾಮ್ ಮೂಲಕ ಮಾತನಾಡಿದರು.

ಈ ಮಾತುಕತೆಯ ಬಳಿಕ ಪಾಕ್ ಸರ್ಕಾರ ವಿಡಿಯೋವನ್ನು ಬಿಡುಗಡೆ ಮಾಡಿದೆ. ವಿಡಿಯೋದಲ್ಲಿ ಜಾಧವ್, ಪತ್ನಿ ಮತ್ತು ತಾಯಿಯನ್ನು ಭೇಟಿ ಮಾಡಲು ಅವಕಾಶ ನೀಡಿ ಎಂದು ಎಂದು ಮನವಿ ಮಾಡಿದ್ದೆ. ನನ್ನ ಈ ಆಸೆಯನ್ನು ಈಡೇರಿಸಿದ್ದಕ್ಕೆ ಪಾಕ್ ಸರ್ಕಾರಕ್ಕೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.

ಪಾಕಿಸ್ತಾನದ ರಾಷ್ಟ್ರಪಿತ ಮೊಹಮ್ಮದ್ ಅಲಿ ಜಿನ್ನಾ ಅವರ ಹುಟ್ಟುಹಬ್ಬದ ಪ್ರಯುಕ್ತ ಪಾಕ್ ಸರ್ಕಾರ ಮಾನವೀಯತೆ ಆಧಾರದ ಮೇಲೆ ಜಾಧವ್ ಕುಟುಂಬದವರ ಭೇಟಿಗೆ ಅನುಮತಿ ನೀಡಿತ್ತು. ಭೇಟಿಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ದುಬೈ ಮೂಲಕ ಇಸ್ಲಾಮಾಬಾದ್‍ಗೆ ಜಾಧವ್ ಪತ್ನಿ ಮತ್ತು ತಾಯಿ ಬಂದಿದ್ದರು.

ಭಾರತ ಸರ್ಕಾರ ಈ ಹಿಂದೆ ಕುಲಭೂಷಣ್ ಜಾಧವ್ ಭೇಟಿಗೆ ಅವಕಾಶ ನೀಡಬೇಕೆಂದು ಪಾಕ್ ಸರ್ಕಾರಕ್ಕೆ ಮನವಿ ಮಾಡಿತ್ತು. ಆದರೆ ಪಾಕಿಸ್ತಾನ ಭಾರತದ ಮನವಿಯನ್ನು ತಿರಸ್ಕರಿಸಿತ್ತು. ಮನವಿಯನ್ನು ತಿರಸ್ಕರಿಸಿದ ಹಿನ್ನೆಲೆಯಲ್ಲಿ ಭಾರತ ನೆದರ್ ಲ್ಯಾಂಡಿನ ಹೇಗ್ ನಲ್ಲಿರುವ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದೂರು ನೀಡಿತ್ತು. ಭಾರತದ ಅರ್ಜಿಯನ್ನು ವಿಚಾರಣೆ ನಡೆಸಿದ್ದ ನ್ಯಾಯಾಲಯ ಗಲ್ಲು ಶಿಕ್ಷೆಗೆ ತಾತ್ಕಾಲಿಕ ತಡೆ ನೀಡಿತ್ತು.

ಏನಿದು ಪ್ರಕರಣ?
ಭಾರತದ ಪರ ಗೂಢಚರ್ಯೆ ನಡೆಸುತ್ತಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ, ಕುಲಭೂಷಣ್ ಜಾಧವ್ ಅವರಿಗೆ ಪಾಕಿಸ್ತಾನ ಕೋರ್ಟ್ ಮರಣದಂಡನೆ ಶಿಕ್ಷೆ ವಿಧಿಸಿತ್ತು. ಫೀಲ್ಡ್ ಜನರಲ್ ಕೋರ್ಟ್ ಮಾರ್ಷಲ್ ಜಾಧವ್ ಅವರಿಗೆ ಗಲ್ಲು ಶಿಕ್ಷೆ ವಿಧಿಸಿದೆ ಎಂದು ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಷನ್ಸ್ (ಐಎಸ್‍ಪಿಆರ್) ತಿಳಿಸಿತ್ತು.

ವಿಚಾರಣೆ ವೇಳೆ ರಾ ಪರ ನಾನು ಗೂಢಚರ್ಯೆ ನಡೆಸುತ್ತಿದ್ದ ವಿಚಾರವನ್ನು ಕುಲಭೂಷಣ್ ಜಾಧವ್ ತಪ್ಪೊಪ್ಪಿಕೊಂಡಿದ್ದರು ಎಂದು ಐಎಸ್‍ಪಿಆರ್ ತನ್ನ ಹೇಳಿಕೆಯಲ್ಲಿ ಉಲ್ಲೇಖಿಸಿತ್ತು. ಕೂಲಭೂಷಣ್ ಯಾದವ್ ನೌಕಾ ಸೇನೆಯ ನಿವೃತ್ತ ಅಧಿಕಾರಿಯಾಗಿದ್ದರು. ಆದರೆ ಅವರು ರಾ ಪರವಾಗಿ ಗೂಢಚರ್ಯೆ ನಡೆಸುತ್ತಿರುವ ಆರೋಪವನ್ನು ಭಾರತ ಸರ್ಕಾರ ನಿರಾಕರಿಸಿತ್ತು. 2016ರ ಮಾರ್ಚ್ 3ರಂದು ಬಲೂಚಿಸ್ತಾನದ ಮಶೇಕಲ್ ಎಂಬಲ್ಲಿ ಕುಲಭೂಷಣ್ ಜಾಧವ್ ಅವರು ಅರೆಸ್ಟ್ ಅಗಿದ್ದರು.

ವಿಯೆನ್ನಾ ಒಪ್ಪಂದದ ಪ್ರಕಾರ ಕುಲಭೂಷಣ್‍ಗೆ ಭಾರತ ರಾಜತಾಂತ್ರಿಕ ನೆರವು ನೀಡಲು ಅವಕಾಶ ಮಾಡಿಕೊಡಬೇಕಿತ್ತು. ಈ ಕುರಿತು 16 ಬಾರಿ ಭಾರತದ ಮಾಡಿದ್ದ ಮನವಿಯನ್ನು ಪಾಕಿಸ್ತಾನ ತಿರಸ್ಕರಿಸಿತ್ತು. ನಿವೃತ್ತ ನೌಕಾ ಸೇನಾಧಿಕಾರಿ ಕುಲಭೂಷಣ್‍ರನ್ನು ಇರಾನ್‍ನಿಂದ ಪಾಕಿಸ್ತಾನ ಕಿಡ್ನ್ಯಾಪ್ ಮಾಡಿತ್ತು ಎಂಬ ಅಂಶವನ್ನು ಕೋರ್ಟ್ ನಲ್ಲಿ ಭಾರತ ವಾದ ಮಂಡಿಸಿತ್ತು.

Share This Article
Leave a Comment

Leave a Reply

Your email address will not be published. Required fields are marked *