ಪಾಕ್ ಪರ ಘೋಷಣೆ ಪ್ರಕರಣ – ಜಾಮೀನು ಅರ್ಜಿ ಸಲ್ಲಿಸಲು ಆಗಮಿಸಿದ ನ್ಯಾಯವಾದಿಗಳ ತಂಡ

Public TV
1 Min Read

ಹುಬ್ಬಳ್ಳಿ: ಜಿಲ್ಲೆಯ ಪ್ರತಿಷ್ಠಿತ ಕೆಎಲ್‍ಇ ಕಾಲೇಜಿನಲ್ಲಿ ಪಾಕ್ ಪರ ಘೋಷಣೆ ಕೂಗಿದ ಹಿನ್ನೆಲೆಯಲ್ಲಿ ಮೂವರು ಕಾಶ್ಮೀರಿ ವಿದ್ಯಾರ್ಥಿಗಳ ಪರ ಜಾಮೀನು ಅರ್ಜಿ ಸಲ್ಲಿಸಲು ಇಂದು ಬೆಂಗಳೂರಿನ ವಕೀಲರ ತಂಡ ಹುಬ್ಬಳ್ಳಿಗೆ ಆಗಮಿಸಿದೆ.

ಜಾಮೀನು ಅರ್ಜಿ ಸಲ್ಲಿಸಲು 7 ಜನ ವಕೀಲರ ತಂಡ ಆಗಮಿಸಿದ್ದು, ಹುಬ್ಬಳ್ಳಿಯ 2ನೇ ಜೆಎಂಎಫ್‍ಸಿ ನ್ಯಾಯಾಲಯದಲ್ಲಿ ಬೆಂಗಳೂರಿನ ವಕೀಲರು ಜಾಮೀನು ಅರ್ಜಿ ಸಲ್ಲಿಸಲಿದ್ದಾರೆ. ಮಾರ್ಚ್ 5ರೊಳಗೆ ಜಾಮೀನು ಅರ್ಜಿ ಸಲ್ಲಿಕೆ ಕುರಿತು ತಕರಾರು ಅರ್ಜಿ ಸಲ್ಲಿಸಲು ಸಹಾಯಕ ಸರ್ಕಾರಿ ಅಭಿಯೋಜಕರಿಗೆ 5ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಸೂಚಿಸಿತ್ತು. ಈ ಹಿನ್ನೆಲೆ ಇಂದು ಜಾಮೀನು ಅರ್ಜಿ ಸಲ್ಲಿಸಲು ನ್ಯಾಯಾವಾದಿಗಳು ಆಗಮಿಸಿದ್ದಾರೆ. ಇಂದು ಜಾಮೀನು ಅರ್ಜಿ ಸಲ್ಲಿಕೆಯಾದರೆ ಇಂದೇ ವಿಚಾರಣೆ ನಡೆಯುವ ಸಾಧ್ಯತೆ ದಟ್ಟವಾಗಿದೆ.

ಬೆಂಗಳೂರಿನಿಂದ ಆಗಮಿಸಿದ ವಕೀಲರು ಬಿಗಿ ಪೊಲೀಸ್ ಬಂದೋಬಸ್ತ್ ಮಧ್ಯೆ ಖಾಸಗಿ ಹೊಟೇಲ್‍ನಲ್ಲಿ ಉಳಿದುಕೊಂಡಿದ್ದು, ಇಂದು ಕೋರ್ಟಿಗೆ ಭೇಟಿ ನೀಡಿ ಜಾಮೀನು ಅರ್ಜಿ ಸಲ್ಲಿಕೆ ಮಾಡಲಿದ್ದಾರೆ. ಆರೋಪಿಗಳ ನ್ಯಾಯಾಂಗ ಬಂಧನ ಮಾರ್ಚ್ 7ರಂದು ಮುಕ್ತಾಯಗೊಳ್ಳಲಿದ್ದು, ಇಂದು ಜಾಮೀನು ಅರ್ಜಿ ಸಲ್ಲಿಕೆ ಮಾಡುತ್ತಿದ್ದಾರೆ.

ಬೆಂಗಳೂರಿನ ವಕೀಲರ ತಂಡ ಇಂದು ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಕೆ ಮಾಡುತ್ತಿರುವುದರಿಂದ ಬುಧವಾರದಿಂದಲೇ ಹುಬ್ಬಳ್ಳಿ ನ್ಯಾಯಾಲಯದ ಸುತ್ತಮುತ್ತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್ ಕಮೀಷನರೇಟ್‍ನ ಶ್ವಾನದಳದಿಂದ ಬುಧವಾರ ಸಂಜೆಯಿಂದಲೇ ಪರಿಶೀಲನೆ ನಡೆಸಲಾಗುತ್ತಿದೆ.

Share This Article
Leave a Comment

Leave a Reply

Your email address will not be published. Required fields are marked *