ಅನಗತ್ಯವಾಗಿ ಸಂಚರಿಸುತ್ತಿದ್ದವರ ವಾಹನ ಸೀಜ್- ಸಿಲಿಕಾನ್‍ ಸಿಟಿಯಲ್ಲಿ ಮಿಂಚಿನ ಕಾರ್ಯಾಚರಣೆ

Public TV
1 Min Read

ಬೆಂಗಳೂರು: ಕಳೆದ ಎರಡ್ಮೂರು ದಿನಗಳಿಂದ ಸಿಲಿಕಾನ್ ಸಿಟಿಯಲ್ಲಿ ವಾಹನ ಸಂಚಾರ ಹೆಚ್ಚಾಗಿದ್ದು, ವಿವಿಧೆಡೆ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ. ಹೀಗಾಗಿ ಸರ್ಕಾರ ಲಾಕ್‍ಡೌನ್ ಬಿಗಿಗೊಳಿಸಿದ್ದು, ಪೊಲೀಸರೂ ಸಷ್ಟೇ ಕಾರ್ಯಪ್ರವೃತ್ತರಾಗಿದ್ದಾರೆ. ಅನಗತ್ಯವಾಗಿ ಸಂಚರಿಸುವ ವಾಹನಗಳನ್ನು ಸೀಜ್ ಮಾಡುತ್ತಿದ್ದಾರೆ.

ಬೆಂಗಳೂರು ತುಮಕೂರು ಹೆದ್ದಾರಿಯ ಎಸ್‌ಆರ್‌ಎಸ್ ಬಸ್ ನಿಲ್ದಾಣದ ಬಳಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಮಿಂಚಿನ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅನಗತ್ಯವಾಗಿ ಸಂಚರಿಸುವ ಬೈಕ್ ಹಾಗೂ ಕಾರುಗಳನ್ನು ಸೀಜ್ ಮಾಡುತ್ತಿದ್ದಾರೆ. ಮಂಗಳವಾರ ಮೆಜೆಸ್ಟಿಕ್, ಕೆ.ಆರ್.ಮಾರ್ಕೆಟ್, ಆನಂದರಾವ್ ಸರ್ಕಲ್ ಸೇರಿದಂತೆ ನಗರದ ವಿವಿಧೆಡೆ ಟ್ರಾಫಿಕ್ ಜಾಮ್ ಆಗಿತ್ತು. ಆ ಪ್ರಮಾಣದಲ್ಲಿ ವಾಹನಗಳು ರಸ್ತೆಗೆ ಇಳಿದಿದ್ದವು. ಈ ಹಿನ್ನೆಲೆ ಪೊಲೀಸರು ಲಾಕ್‍ಡೌನ್ ಬಿಗಿಗೊಳಿಸಿದ್ದಾರೆ. ಪ್ರತಿ ವಾಹನವನ್ನೂ ಪರಿಶೀಲನೆ ನಡೆಸುತ್ತಿದ್ದಾರೆ.

ಲಾಕ್‍ಡೌನ್ ಇದ್ದರೂ ಇಂದು ಎಸ್‌ಆರ್‌ಎಸ್ ಬಸ್ ನಿಲ್ದಾಣದ ಬಳಿ ಟ್ರಾಫಿಕ್ ಜಾಮ್ ವಾತಾವರಣ ನಿರ್ಮಾಣವಾಗಿತ್ತು. ಈ ಹಿನ್ನೆಲೆ ಪೊಲೀಸರು ಕಟ್ಟು ನಿಟ್ಟಾಗಿ ಪರಿಶೀಲನೆ ನಡೆಸಿದ್ದಾರೆ. ಒಂದೊಂದೇ ವಾಹನ ತಪಾಸಣೆ ಮಾಡಿ ಕಳಿಸುತ್ತಿದ್ದಾರೆ. ಇಂಟರ್ ವ್ಯೂವ್ ಇದೆ ಸರ್ ಬಿಡಿ, ಪಾಸ್ ಇಲ್ಲ ಎಂದು ಕುಂಟು ನೆಪ ಹೇಳಿಕೊಂಡು ಜನ ಓಡಾಡುತ್ತಿದ್ದಾರೆ. ಹೀಗಾಗಿ ಲಾಕ್‍ಡೌನ್ ಇದೆ ಈ ಹೊತ್ತಲ್ಲಿ ಯಾವ ಇಂಟರ್ ವ್ಯೂವ್ ಇದೆ ತೋರಿಸು ಎಂದು ಪೊಲೀಸರು ಪ್ರಶ್ನಿಸುತ್ತಿದ್ದಾರೆ. ಪಾಸ್ ಇಲ್ಲ ಸರ್ ಬಿಡಿ ಎಂದು ಯುವಕ ಗೋಗರೆದರೂ, ಪಾಸ್ ಇಲ್ಲದೆ ಬಿಡುವುದಿಲ್ಲ ಎಂದು ಪೊಲೀಸರು ಖಡಾಖಂಡಿತವಾಗಿ ಹೇಳಿದ್ದಾರೆ.

ಪ್ರತಿ ವಾಹನವನ್ನೂ ತಪಾಸಣೆ ನಡೆಸುತ್ತಿರುವುದರಿಂದ ಎಸ್‌ಆರ್‌ಎಸ್ ಸಿಗ್ನಲ್ ಬಳಿ ಫುಲ್ ಟ್ರಾಫಿಕ್ ಜಾಮ್ ಆಗಿದೆ. ನೂರಕ್ಕೂ ಹೆಚ್ಚು ಬೈಕ್‍ಗಳನ್ನ ಪೊಲೀಸರು ಸೀಜ್ ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *