ಸರ್ಕಾರಿ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಶಾಕ್ – ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

Public TV
1 Min Read

ದಾವಣಗೆರೆ/ಧಾರವಾಡ: ಇಂದು ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆ ಮೂಲಕ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.

ದಾವಣಗೆರೆಯ ಶಕ್ತಿನಗರದ 3ನೇ ಕ್ರಾಸ್‌ನಲ್ಲಿರುವ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಅಧಿಕಾರಿ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಸಹಾಯಕ ನಿರ್ದೇಶಕ ಕಮಲ್ ರಾಜ್ ಮನೆ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗಿದೆ.

ಎಸ್‌ಪಿ ಎಂ.ಎಸ್.ಕೌಲಾಪುರೇ ನೇತೃತ್ವದಲ್ಲಿ ದಾಳಿ ನಡೆದಿದೆ. ಸಿಪಿಐ ಮಧುಸೂಧನ್, ಪ್ರಭು ಸೇರಿದಂತೆ ಹತ್ತಕ್ಕೂ ಹೆಚ್ಚು ಸಿಬ್ಬಂದಿಯಿಂದ ಶೋಧ ಕಾರ್ಯ ನಡೆದಿದೆ. ಮನೆಯ ಪ್ರತಿಯೊಂದು ಕೋಣೆಯನ್ನು ಪರಿಶೀಲನೆ ಮಾಡಿದ್ದಾರೆ.

ಇತ್ತ, ಧಾರವಾಡದಲ್ಲಿ ಕೆಐಎಡಿಬಿ ಎಇಇ ಗೋವಿಂದಪ್ಪ ಭಜಂತ್ರಿ ನಿವಾಸದ ಮೇಲೆ ದಾಳಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಧಾರವಾಡ ನಗರದ ಗಾಂಧಿನಗರ ಬಡಾವಣೆಯಲ್ಲಿನ ಮನೆ ಮೇಲೆ ಲೋಕಾಯುಕ್ತ ಡಿವೈಎಸ್ಪಿ ವೆಂಕನಗೌಡ ಪಾಟೀಲ ನೇತೃತ್ವದಲ್ಲಿ ದಾಳಿ ನಡೆದಿದೆ. ಆಸ್ತಿ ದಾಖಲೆಗಳ ಪರಿಶೀಲನೆ ಮಾಡಲಾಗಿದೆ.

ಗೋವಿಂದಪ್ಪ ಭಜಂತ್ರಿಗೆ ಸಂಬಂಧಪಟ್ಟ ಆರು ಕಡೆ ದಾಳಿ ಮಾಡಲಾಗಿದೆ. ಧಾರವಾಡದಲ್ಲಿ ಮೂರು ಕಡೆ, ಸವದತ್ತಿ ತಾಲೂಕಿನಲ್ಲಿ ಎರಡು ಕಡೆ ಹಾಗೂ ನರಗುಂದದಲ್ಲಿ ಒಂದು ಕಡೆ ದಾಳಿ ನಡೆದಿದೆ.

ಸವದತ್ತಿ ತಾಲೂಕಿನ ಹೂಲಿ ಹಾಗೂ ಉಗರಗೋಳ ಗ್ರಾಮದ ಫಾರ್ಮ್ ಹೌಸ್ ಮೇಲೆ ರೇಡ್ ಮಾಡಲಾಗಿದೆ. ಗೋವಿಂದಪ್ಪ ಕೆಲಸ ಮಾಡುವ ಲಕಮನಹಳ್ಳಿ ಧಾರವಾಡ ಕೆಐಎಡಿಬಿ ಕಚೇರಿಯಲ್ಲಿ ಪರಿಶೀಲನೆ ಮಾಡಿದ್ದಾರೆ. ನರಗುಂದದಲ್ಲಿರೋ ಸಹೋದರನ ಮನೆ ಮೇಲೂ ದಾಳಿ ನಡೆದಿದೆ. ಗೋವಿಂದಪ್ಪನ ಮನೆ ಎದುರು ನಿಲ್ಲಿಸಿದ್ದ ಕಾರುಗಳ ಪರಿಶೀಲನೆ ಮಾಡಲಾಗಿದೆ. ದಾಖಲೆ ಪತ್ರಗಳ ಬಗ್ಗೆ ಪರಿಶೀಲನಾ ವರದಿಯಲ್ಲಿ ನಮೂದಿಸಿಕೊಂಡಿದ್ದಾರೆ.

ಬೀದರ್‌ನಲ್ಲಿ ಎರಡು ಕಡೆ ಭ್ರಷ್ಟ ಅಧಿಕಾರಿಗೆ ಲೋಕಾಯುಕ್ತ ಪೋಲಿಸರು ಶಾಕ್ ಕೊಟ್ಟಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ರವೀಂದ್ರ ರೊಟ್ಟೆ ನಿವಾಸ ಹಾಗೂ ಕಚೇರಿ ಮೇಲೆ ದಾಳಿ ಮಾಡಿದ್ದಾರೆ.

Share This Article