ಚಿಕ್ಕಬಳ್ಳಾಪುರ: ಗ್ರಾಮದೇವತೆ, ಉತ್ಸವಮೂರ್ತಿಗಳ ಮೆರವಣಿಗೆ ಮಾಡುತ್ತಿದ್ದ ವೇಳೆ ಲಾರಿಯೊಂದು ಹರಿದು ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಹೊಸಹುಡ್ಯ ಗ್ರಾಮದ ಬಳಿ ನಡೆದಿದೆ.
ಗೌತಮ್ (11) ಶ್ರೇಯಸ್ (17) ಮೃತ ದುರ್ದೈವಿಗಳು. ಶನಿವಾರ ರಾತ್ರಿ ಸುಮಾರು 1.30ರ ವೇಳೆ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 9 ಮಂದಿಗೆ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಉಳಿದಂತೆ 7 ಮಂದಿ ಸಣ್ಣ ಪುಟ್ಟ ಗಾಯಗಳಾಗಿದ್ದು, ಚಿಕ್ಕಬಳ್ಳಾಪುರ ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶನಿವಾರ ರಾತ್ರಿ ಗ್ರಾಮದಲ್ಲಿ ವಿನಾಕರಾಣ ಜನ ಸಾವನ್ನಪ್ಪುತ್ತಿದ್ದಾರೆ ಎಂದು ಶಾಂತಿಗಾಗಿ ಗ್ರಾಮಸ್ಥರು ಗ್ರಾಮದೇವತೆಗಳ ಉತ್ಸವಮೂರ್ತಿಗಳ ಮೆರವಣಿಗೆ ನಡೆಸಿದ್ದರು. ಆದರೆ ಉತ್ಸವಮೂರ್ತಿ ಕೊಂಡೊಯ್ಯುತ್ತಿದ್ದ ಮಿನಿ ಟ್ರಾಕ್ಟರ್ ಗೆ ಲಾರಿ ಗುದ್ದಿದೆ. ಪರಿಣಾಮ ಲಾರಿ ಹರಿದು ಇಬ್ಬರು ಬಾಲಕರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಅಪಘಾತ ಖಂಡಿಸಿ ಹೊಸಹುಡ್ಯ ಗ್ರಾಮಸ್ಥರು, ಚಿಕ್ಕಬಳ್ಳಾಪುರ-ಶಿಡ್ಲಘಟ್ಟ ಮಾರ್ಗ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ಈ ಸಂಬಂಧ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಗ್ರಾಮಸ್ಥರ ಮನವೊಲಿಸಲು ಮುಂದಾಗಿದ್ದಾರೆ.