ಪ್ರಕರಣ ವಿಚಾರಣಾ ಹಂತದಲ್ಲಿದೆ ಮಹದಾಯಿ ನೋಟಿಫಿಕೇಷನ್ ಅಸಾಧ್ಯ- ಜಲ ಶಕ್ತಿ ಇಲಾಖೆ

Public TV
1 Min Read

ನವದೆಹಲಿ: ಮಹದಾಯಿ ನದಿ ನೀರು ಹಂಚಿಕೆ ಪ್ರಕರಣ ನ್ಯಾಯಲಯದ ವ್ಯಾಪ್ತಿಯಲ್ಲಿದೆ. ಹೀಗಾಗಿ ಗೆಜೆಟ್ ನೋಟಿಫಿಕೇಷನ್ ಹೊರಡಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಜಲ ಶಕ್ತಿ ಇಲಾಖೆ ಸ್ಪಷ್ಟನೆ ನೀಡಿದೆ.

ರಾಜ್ಯಸಭಾ ಕಾಂಗ್ರೆಸ್ ಸಂಸದ ಬಿ.ಕೆ ಹರಿಪ್ರಸಾದ್ ಪ್ರಶ್ನೆಗೆ ಉತ್ತರಿಸಿರುವ ಜಲ ಸಂಪನ್ಮೂಲ ಇಲಾಖೆ ರಾಜ್ಯ ಖಾತೆ ಸಚಿವ ರತನ್ ಲಾಲಾ ಖಟಾರಿಯಾ, ಪ್ರಕರಣ ನ್ಯಾಯಾಲಯದಲ್ಲಿದೆ. ಈ ಹಂತದಲ್ಲಿ ಗೆಜೆಟ್ ನೋಟಿಫಿಕೇಷನ್ ಹೊರಡಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ಮಹದಾಯಿ ವಿವಾದ ಬಗೆಹರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ 2010ರ ನವೆಂಬರ್‍ನಲ್ಲಿ ನ್ಯಾಯಾಧೀಕರಣ ಸ್ಥಾಪಿಸಲಾಗಿತ್ತು. ವಿಚಾರಣೆ ಬಳಿಕ 2018ರ ಆಗಸ್ಟ್ 14ರಂದು ತೀರ್ಪು ನೀಡಿತ್ತು. ಆದರೆ ನ್ಯಾಯಾಧೀಕರಣ ನೀಡಿದ್ದ ತೀರ್ಪು ಪ್ರಶ್ನಿಸಿ ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯಗಳು ಪರಿಶೀಲನಾ ಅರ್ಜಿ ಸಲ್ಲಿಸಿವೆ. ಈ ಬಗ್ಗೆ ಯಾವುದೇ ಅಂತಿಮ ತಿರ್ಮಾಣ ಹೊರ ಬಂದಿಲ್ಲ. ವಿಚಾರಣೆ ಹಂತದಲ್ಲಿರುವ ಕಾರಣ ನೋಟಿಫಿಕೆಷನ್ ಅಸಾಧ್ಯ ಎಂದು ಸಚಿವರು ತಿಳಿಸಿದ್ದಾರೆ.

ಮಹದಾಯಿ ನದಿ ನೀರು ಹಂಚಿಕೆ ಪ್ರಕರಣ ತೀರ್ಪು ಬಂದರೂ ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಷನ್ ಹೊರಡಿಸಿರಲಿಲ್ಲ. ಈ ಹಿನ್ನೆಲೆ ರಾಜ್ಯದಲ್ಲಿ ಹಲವು ಪ್ರತಿಭಟನೆಗಳು ನಡೆದಿದ್ದವು. ಹಲವು ರೈತ ನಿಯೋಗಗಳು ದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದ್ದರು. ನೋಟಿಫಿಕೇಷನ್ ವಿಳಂಬಕ್ಕೆ ಸ್ಪಷ್ಟನೆ ಕೋರಿ ಸಂಸದ ಬಿ.ಕೆ ಹರಿಪ್ರಸಾದ್ ರಾಜ್ಯಸಭೆಯಲ್ಲಿ ಪ್ರಶ್ನೆ ಕೇಳಿದ್ದರು.

Share This Article
Leave a Comment

Leave a Reply

Your email address will not be published. Required fields are marked *