ಮಹಾ ಬಂದ್- ಮಹಾರಾಷ್ಟ್ರ ಕರ್ನಾಟಕ ನಡುವೆ ಬಸ್ ಸಂಚಾರ ಸ್ಥಗಿತ

Public TV
1 Min Read

ಮುಂಬೈ: ಭೀಮಾ ಕೋರೆಗಾಂವ್ ವಿಜಯೋತ್ಸವ ವೇಳೆ ಆರಂಭವಾದ ಸಾಮಾವೇಶ ಹಿಂಸಾಚಾರ ರೂಪಕ್ಕೆ ತಿರುಗಿ ಇಂದು ಮಹಾರಾಷ್ಟ್ರ ಬಂದ್‍ಗೆ ಕರೆ ನೀಡಲಾಗಿದೆ. ಬಂದ್ ಹಿನ್ನೆಲೆಯಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಬಸ್‍ಗಳ ಸಂಚಾರ ಕೂಡ ಸ್ಥಗಿತವಾಗಿದೆ. ಮುನ್ನೆಚರಿಕಾ ಕ್ರಮವಾಗಿ ಕರ್ನಾಟಕ ಹಾಗೂ ಮಹಾರಾಷ್ಟ್ರ ನಡುವಿನ ಬಸ್ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಚಿಕ್ಕೋಡಿ ವಿಭಾಗದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ 220 ಕ್ಕೂ ಹೆಚ್ಚು ಬಸ್‍ಗಳ ಸಂಚಾರ ಸ್ಥಗಿತಗೊಂಡಿದೆ. ಅಹಿತಕರ ಘಟನೆ ತಡೆಯಲು ಮುಂಜಾಗ್ರತಾ ಕ್ರಮವಾಗಿ ಬಸ್‍ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.

ಬಸ್ ಸಂಚಾರ ಸ್ಥಗಿತಗೊಂಡಿರೋ ಹಿನ್ನೆಲೆಯಲ್ಲಿ ಚಿಕ್ಕೋಡಿ, ನಿಪ್ಪಾಣಿ ಮಾರ್ಗವಾಗಿ ಮಹಾರಾಷ್ಟ್ರದ ಪುಣೆ, ಬಾಂಬೆ, ಕೊಲ್ಹಾಪುರ, ಸಾಂಗ್ಲಿ, ಮೀರಜ್‍ಗೆ ಹೋಗುವ ಪ್ರಯಾಣಿಕರು ಪರದಾಡುತ್ತಿದ್ದಾರೆ.

ಮಂಗಳವಾರದಂದು ಹೊತ್ತಿ ಉರಿದಿದ್ದ ಥಾಣೆಯಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಇಂದು ಕೂಡ ಪ್ರತಿಭಟನೆಗಳು ನಡೆಯುತ್ತಿದ್ದು, ಥಾಣೆಯಲ್ಲಿ ಪ್ರತಿಭಟನಾಕಾರರು ರೈಲು, ಬಸ್‍ಗಳನ್ನು ತಡೆಯಲು ಯತ್ನಿಸಿದ್ರು. ಔರಂಗಾಬಾದ್‍ನಲ್ಲಿ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದ್ದು, ಬಸ್ ಸಂಚಾರದಲ್ಲೂ ವ್ಯತ್ಯಯವಾಗಿದೆ.

ನಿನ್ನೆ ಬಸ್‍ಗೆ ಬೆಂಕಿ ಹಚ್ಚಿದ್ದ ಚೆಂಬೂರ್‍ನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವಹಿಸಲಾಗಿದೆ. ಪರಿಸ್ಥಿತಿ ತಹಬದಿಗೆ ಬಂದಿದ್ದರೂ ಬೂದಿ ಮುಚ್ಚಿದ ವಾತಾವರಣವಿದೆ. ಕೆಲವು ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇನ್ನೂ ಕೆಲವು ಶಾಲೆಗಳಲ್ಲಿ ಕೆಲವು ಮಕ್ಕಳು ಹಾಜರಾಗಿದ್ದು, ಅವರನ್ನು ಮನೆಗೆ ವಾಪಸ್ ಕಳಸಲಾಗಿದೆ. ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *