ಬೆಳ್ಳಂಬೆಳಗ್ಗೆ ಮಲಗಿದ್ದ ಪತ್ನಿ, ಮಕ್ಕಳನ್ನು ಕೊಂದು ಪೊಲೀಸರಿಗೆ ಶರಣಾದ!

Public TV
1 Min Read

ಹೈದರಾಬಾದ್: ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಕೊಂದು ಬಳಿಕ ಪೊಲೀಸರಿಗೆ ಶರಣಾಗಿರುವ ಘಟನೆ ನಗರದ ಮೇರತ್ ಪೇಟ್ ನಲ್ಲಿ ನಡೆದಿದೆ.

ಪತ್ನಿ ವರಲಕ್ಷ್ಮಿ (28), ಮಗ ನಿತೀಶ್ (5) ಮತ್ತು ಮಗಳು ಯಶಸ್ವಿನಿ (2) ಮೃತ ದುರ್ದೈವಿಗಳು. ಮಂಗಳವಾರ ಬೆಳಗ್ಗೆ 7 ಗಂಟೆಯ ಸುಮಾರಿಗೆ ಈ ಕೃತ್ಯ ನಡೆದಿದೆ. ಆರೋಪಿ ಸುರೇಂದರ್ ಮೇರತ್ ಪೇಟ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಸಾಯಿ ಪ್ರಭು ಕಾಲೋನಿಯಲ್ಲಿರುವ ಅತ್ತೆ-ಮಾವನ ಮನೆಯಲ್ಲಿ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳ ಜೊತೆ ವಾಸವಾಗಿದ್ದನು.

ಮಂಗಳವಾರ ಮುಂಜಾನೆ 6.30ರ ಸುಮಾರಿಗೆ ನಿದ್ದೆ ಮಾಡುತ್ತಿದ್ದ ಸಂದರ್ಭದಲ್ಲಿ ಪತ್ನಿ ಮತ್ತು ಮಕ್ಕಳನ್ನು ಕೊಲೆ ಮಾಡಿದ್ದಾನೆ. ಈ ವೇಳೆ ವರಲಕ್ಷ್ಮಿಯ ಪೋಷಕರು ಮನೆಯಲ್ಲಿ ಇರಲಿಲ್ಲ ಎಂದು ತಿಳಿದು ಬಂದಿದೆ. ಆದ್ರೆ ಘಟನೆಯ ಮಾಹಿತಿ ಪಡೆದ ವರಲಕ್ಷ್ಮಿ ಪೋಷಕರು ಕೂಡಲೇ ಸ್ಥಳಕ್ಕೆ ದೌಡಾಯಿಸಿ ಕೂಡಲೇ ಮೂವರನ್ನು ಸಂತೋಷ್ ನಗರದಲ್ಲಿರುವ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಅದಾಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿರುವುದಾಗಿ ವರದಿಯಾಗಿದೆ.

ಇತ್ತ ಪತ್ನಿ ಮತ್ತು ಮಕ್ಕಳನ್ನು ಕೊಲೆ ಮಾಡಿದ ನಂತರ ಆರೋಪಿ ಸುರೇಂದರ್ ಪೊಲೀಸರಿಗೆ ಶರಣಾಗಿ ತಾನೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಸದ್ಯ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಉಸ್ಮಾನಿಯಾ ಜನರಲ್ ಆಸ್ಪತ್ರೆಗೆ ರವಾನಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಆರೋಪಿ ಸುರೇಂದರ್ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಇನ್ನು ಕೊಲೆಗೆ ನಿಖರ ಕಾರಣವೇನು ಎಂದು ತಿಳಿದು ಬಂದಿಲ್ಲ ಅಂತ ಪೊಲೀಸರು ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *