ಕಾಲುಜಾರಿ ಭದ್ರಾ ನದಿಗೆ ಬಿದ್ದು ಕೊಚ್ಚಿ ಹೋದ ಮಂಗ್ಳೂರು ಎಂಜಿನಿಯರ್

Public TV
1 Min Read

ಚಿಕ್ಕಮಗಳೂರು: ಪ್ರವಾಸಕ್ಕೆಂದು ಬಂದಿದ್ದ ಯುವಕನೊಬ್ಬ ಕಾಲುಜಾರಿ ಭದ್ರಾ ನದಿಯಲ್ಲಿ ಬಿದ್ದು ಕೊಚ್ಚಿ ಹೋಗಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಳಸ ಸಮೀಪದ ಅಂಬುತೀರ್ಥದ ಬಳಿ ನಡೆದಿದೆ.

ಕಿರಣ್ ಕೊಟ್ಯಾನ್(26) ನದಿಯಲ್ಲಿ ಕೊಚ್ಚಿ ಹೋದ ಯುವಕ. ಮಂಗಳೂರಿನಿಂದ 13 ಮಂದಿಯ ತಂಡ ಚಿಕ್ಕಮಗಳೂರು ಜಿಲ್ಲೆಯ ಕುದುರೆಮುಖ ಸುತ್ತಮುತ್ತ ಪ್ರವಾಸಕ್ಕೆಂದು ಬಂದಿತ್ತು. ಈ ವೇಳೆ ಅಂಬುತೀರ್ಥದ ಬಳಿ ಕಿರಣ್ ಕೊಟ್ಯಾನ್ ಯುವಕ ಕಾಲು ಜಾರಿ ಭದ್ರಾ ನದಿಯಲ್ಲಿ ಕೊಚ್ಚಿ ಹೋಗಿದ್ದಾರೆ. ಬಳಿಕ ಅವರ ಸ್ನೇಹಿತರು ಕಿರಣ್ ಕೊಟ್ಯಾನ್ ಅವರನ್ನು ಹುಡುಕಾಡಿದ್ದಾರೆ. ಆದರೆ ಎಲ್ಲೂ ಪತ್ತೆಯಾಗಿಲ್ಲ. ಕೊನೆಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ತಿಳಿದ ತಕ್ಷಣ ಕಳಸ ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಸ್ಥಳಕ್ಕೆ ಬಂದು ಭದ್ರಾ ನದಿಯಲ್ಲಿ ಕೊಚ್ಚಿ ಹೋಗಿರುವ ಕಿರಣ್ ಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ. ಕಿರಣ್ ಜೊತೆಯಲ್ಲಿ ಬಂದಿದ್ದವರು ಸ್ಥಳದಲ್ಲಿದ್ದು, ಪೊಲೀಸರಿಗೆ ಶೋಧಕಾರ್ಯಕ್ಕಾಗಿ ಮಾಹಿತಿ ನೀಡುತ್ತಿದ್ದಾರೆ.

ಕಿರಣ್ ಕೊಟ್ಯಾನ್ ಮಂಗಳೂರಿನ ಖಾಸಗಿ ಕಂಪೆನಿಯಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರೆಂದು ತಿಳಿದು ಬಂದಿದೆ. ಈ ಸಂಬಂಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *