ಕೃಷ್ಣದೇವರಾಯನ ಸಮಾಧಿ ಮೇಲೆ ಮಾಂಸ ಮಾರಾಟ: ಯತ್ನಾಳ್‌ ಆಕ್ರೋಶ

Public TV
1 Min Read

ಬೆಂಗಳೂರು: ವಿಜಯನಗರದ (Vijayanagara) ಪ್ರಖ್ಯಾತ ರಾಜ ಕೃಷ್ಣದೇವರಾಯ (krishnadevaraya) ಸಮಾಧಿ ಮೇಲೆ ಮಾಂಸ ಮಾರಾಟ ಮಾಡಿದ್ದಕ್ಕೆ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ (Basanagouda Patil Yatnal) ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಅವರು, ಇದು ಕನ್ನಡಿಗರಿಗಷ್ಟೇ ಅಲ್ಲ ರಾಷ್ಟ್ರಕ್ಕೆ ಮಾಡಿದ ಅವಮಾನ ಎಂದು ಬರೆದು ಸಿಟ್ಟು ಹೊರಹಾಕಿದ್ದಾರೆ.

ಪೋಸ್ಟ್‌ನಲ್ಲಿ ಏನಿದೆ?
ಭಾರತೀಯ ಇತಿಹಾಸದಲ್ಲಿ ಶ್ರೇಷ್ಠ ಆಡಳಿತಗಾರರಾಗಿದ್ದ ವಿಜಯನಗರದ ಶ್ರೀ ಕೃಷ್ಣದೇವರಾಯರ ಸಮಾಧಿಯ ದುಸ್ಥಿತಿ ಇದು. ಈ ಜಾಗವನ್ನು ಅಕ್ಷರಶಃ ಮಾಂಸದ ಮಾರುಕಟ್ಟೆಯಾಗಿ ಕೆಲ ಸ್ಥಳೀಯರು ಪರಿವರ್ತಿಸಿರುವುದು ಕನ್ನಡ ನಾಡಿನ ಹೆಮ್ಮೆಯ ಅರಸರಾದ ಅಸಾಮಾನ್ಯ ಆಡಳಿತಗಾರ, ಅಪ್ರತಿಮ ದಂಡನಾಯಕ ಶ್ರೀ ಕೃಷ್ಣದೇವರಾಯರಿಗೆ ಮಾಡಿದ ಅವಮಾನ.

ಹಿಂದೂ ದೇವಾಲಯಗಳನ್ನು ಕೆಡವಿ, ದೇಶದ ಸಂಪತ್ತನ್ನು ದೋಚಿ, ಸಾವಿರಾರು ಹಿಂದೂಗಳನ್ನು ಅಮಾನವೀಯಗಿ ಕೊಂದ ಔರಂಗಜೇಬನ ಸಮಾಧಿಗೆ ಪುರಾತತ್ವ ಸರ್ವೇಕ್ಷಣಾ ಇಲಾಖೆ [ASI] ತೆರಿಗೆದಾರರ ಹಣದಿಂದ ಸಂರಕ್ಷಣೆ ಮಾಡುತ್ತಿದೆ; ಆದರೆ, ವಿಜಯನಗರ ಸಾಮ್ರಾಜ್ಯವನ್ನು ವಿಸ್ತರಿಸಿದ ಪರಾಕ್ರಮಿ; ಕಲೆ,ಸಾಹಿತ್ಯ ರಂಗಗಳ ಪೋಷಕ ಶ್ರೀ ಕೃಷ್ಣದೇವರಾಯರ ಸಮಾಧಿಗೆ ಏಕೆ ಈ ರೀತಿಯಾದ ದಿವ್ಯ ನಿರ್ಲಕ್ಷ್ಯ ?

ಇದು ಕನ್ನಡಿಗರಿಗಷ್ಟೇ ಅಲ್ಲ ರಾಷ್ಟ್ರಕ್ಕೆ ಮಾಡಿದ ಅವಮಾನ, ಮಾಂಸವನ್ನು ಮಾರುತ್ತ ಸ್ಥಳದ ಪಾವಿತ್ರ್ಯತೆಯನ್ನು ಹಾಳು ಮಾಡುತ್ತಿರುವ ಇಂತವರನ್ನು ಜಿಲ್ಲಾಡಳಿತ ಕೂಡಲೇ ಜಾಗ ಖಾಲಿ ಮಾಡಲು ಸೂಚಿಸಬೇಕು ಹಾಗೂ ಇಲ್ಲಿ ನೈರ್ಮಲ್ಯ ಮತ್ತು ಸಮಾಧಿಯ ಪಾವಿತ್ರ್ಯತೆಯನ್ನು ಕಾಪಾಡುವ ಕೆಲಸವನ್ನು ಸರ್ಕಾರ ತುರ್ತಾಗಿ ಮಾಡಲಿ.

Share This Article