ಸಭಾಧ್ಯಕ್ಷರಿಗೆ ಅಗೌರವ ತೋರಿದ ಸಿದ್ದರಾಮಯ್ಯ ಕ್ಷಮೆಯಾಚಿಸಬೇಕು – ಈಶ್ವರಪ್ಪ

Public TV
1 Min Read

ದಾವಣಗೆರೆ: ಸಿದ್ದರಾಮಯ್ಯ ಸಭಾಧ್ಯಕ್ಷರ ಸ್ಥಾನಕ್ಕೆ ಅಗೌರವ ತೋರುತ್ತಿದ್ದಾರೆ. ಕೂಡಲೇ ಕ್ಷಮೆಯಾಚಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್ ಕುಮಾರ್ ಸಭಾಧ್ಯಕ್ಷರಾಗಿದ್ದಾಗ ಇಬ್ಬರೂ ಒಬ್ಬರಿಗೊಬ್ಬರು ಹೊಗಳಿಕೊಳ್ಳುತ್ತಿದ್ದರು. ರಮೇಶ್ ಕುಮಾರ್ ಅವರಿಗೆ ಸಿದ್ದರಾಮಯ್ಯ ಅಂಬೇಡ್ಕರ್ ಎನ್ನುತ್ತಿದ್ದರು. ಸಿದ್ದರಾಮಯ್ಯ ಅವರಿಗೆ ರಮೇಶ್ ಕುಮಾರ್ ದೇವರಾಜ್ ಅರಸ್ ಎಂದು ಹೇಳಿಕೊಳ್ಳುತ್ತಿದ್ದರು. ಆದರೆ ಈಗ ಸಭಾಧ್ಯಕ್ಷರ ವಿರುದ್ಧ ಏಕ ವಚನದಲ್ಲಿ ಕರೆಯುತ್ತಿದ್ದಾರೆ. ಸಿದ್ದರಾಮಯ್ಯ ಸಂವಿಧಾನದ ಬಗ್ಗೆ ಮಾತನಾಡುತ್ತಾರೆ. ಸಭಾಧ್ಯಕ್ಷರಿಗೆ ಯಾವ ರೀತಿ ಗೌರವ ಕೊಡಬೇಕು ಎನ್ನುವುದು ಗೊತ್ತಿಲ್ಲವೇ ಎಂದು ಪ್ರಶ್ನಿಸಿದರು.

ಸಭಾಧ್ಯಕ್ಷರಿಗೆ ಗೌರವ ಕೊಡದಿರುವುರ ಬಗ್ಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪ್ರತಿಕ್ರಿಯೆ ನೀಡುತ್ತಾರೆ ಎನ್ನುವ ನಿರೀಕ್ಷೆ ಇದೆ. ಈ ಕುರಿತು ಅವರೇ ಸ್ಪಷ್ಟಪಡಿಸಬೇಕು ಎಂದರು.

ಡಿಕೆಶಿಗೆ ಜಾಮೀನು ಸಿಕ್ಕಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಡಿಕೆಶಿ ವಿಚಾರವನ್ನು ನಾವು ರಾಜಕೀಯವಾಗಿ ಬಳಸಿಕೊಳ್ಳುವುದಿಲ್ಲ. ಅವರು ನೋವಿನಲ್ಲಿದ್ದಾರೆ, ದೇವರು ನೋವನ್ನು ಭರಿಸುವ ಶಕ್ತಿನೀಡಲಿ. ಕುಟುಂಬದವರು ಕಣ್ಣೀರು ಹಾಕುತ್ತಿರುವುದನ್ನು ಮಾಧ್ಯಮಗಳಲ್ಲಿ ನೋಡಿದ್ದೇವೆ. ಡಿಕೆಶಿ ಮನೆಗೆ ತೆರಳಿ ಅವರಿಗೆ ಸಾಂತ್ವನ ಹೇಳಲಿ ಎಂದು ತಿಳಿಸಿದ್ದಾರೆ.

ಹರ್ಯಾಣದಲ್ಲಿ ನಮ್ಮ ಪಕ್ಷವೇ ಅಧಿಕಾರಕ್ಕೆ ಬರಲಿದೆ, ನಾವೇ ಮುಖ್ಯಮಂತ್ರಿಯಾಗುತ್ತೇವೆ ಎಂದು ಮಹಾರಾಷ್ಟ್ರ ಹಾಗೂ ಹರ್ಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶದ ಕುರಿತು ಪ್ರತಿಕ್ರಿಯಿಸಿದರು.

ಪಾಲಿಕೆ ಚುನಾವಣೆಯ ಬಗ್ಗೆ ಮಾತನಾಡಿದ ಅವರು, ಪಾಲಿಕೆಯ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಲಿದೆ. ಬಿಜೆಪಿ ಅಧಿಕಾರದ ಗದ್ದುಗೆ ಏರಲಿದೆ. ಕಾಂಗ್ರೆಸ್ ಪಕ್ಷ ಇನ್ನು ರಾಜ್ಯದಲ್ಲಿ ಇತ್ತು ಎನ್ನುವ ಸ್ಥಿತಿ ನಿರ್ಮಾಣವಾಗಲಿದೆ. ಕಾಂಗ್ರೆಸ್ ಜಿಲ್ಲೆಯಲ್ಲಿ, ರಾಜ್ಯದಲ್ಲಿ, ದೇಶದಲ್ಲಿ ಇತ್ತು ಎನ್ನುವ ಸ್ಥಿತಿ ಬರಲಿದೆ. ಅಜ್ಜಿ ತನ್ನ ತುರುಬು ಇತ್ತು ಎಂದು ನೆನಪಿಸಿಕೊಳ್ಳುವಂತೆ. ಜನರು ಒಂದು ಕಾಲದಲ್ಲಿ ಕಾಂಗ್ರೆಸ್ ಇತ್ತು ಎನ್ನುವಂತಾಗುತ್ತೆ ಎಂದು ಹರಿಹಾಯ್ದರು.

Share This Article
Leave a Comment

Leave a Reply

Your email address will not be published. Required fields are marked *