ಕೋಲಾರ: ಪ್ರೇಮಕ್ಕೆ ಪೋಷಕರು ವಿರೋಧ ಮಾಡಿದ್ದಕ್ಕೆ ಮನವೊಂದು ಅಪ್ರಾಪ್ತೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆಜಿಎಫ್ ತಾಲೂಕಿನ ವಡ್ಡರಹಳ್ಳಿಯಲ್ಲಿ ಭಾನುವಾರ ನಡೆದಿದೆ.
ವಡ್ಡರಹಳ್ಳಿಯ ಲಾವಣ್ಯ (17) ಆತ್ಮಹತ್ಯೆ ಮಾಡಿಕೊಂಡ ಅಪ್ರಾಪ್ತೆ. ಲಾವಣ್ಯ ಪ್ರಥಮ ಪಿಯುಸಿ ವಿದ್ಯಾರ್ಥಿನಿಯಾಗಿದ್ದು, ಮನೆಯಲ್ಲಿ ಯಾರು ಇಲ್ಲದಿದ್ದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಲಾವಣ್ಯ ಕಳೆದ ಎರಡ್ಮೂರು ವರ್ಷಗಳಿಂದ ಗ್ರಾಮದ ವಿನೊದ್ (23) ಎಂಬ ಯುವಕನನ್ನು ಪ್ರೀತಿಸುತ್ತಿದ್ದಳು. ಈ ವಿಚಾರವಾಗಿ ತಾತ ನಾರಾಯಣಪ್ಪ ಲಾವಣ್ಯಗೆ ಬುದ್ಧಿವಾದ ಹೇಳಿ ಆತನಿಂದ ದೂರ ಇರುವಂತೆ ಸೂಚಿಸಿದ್ದರು. ಇದರಿಂದಾಗಿ ಮನನೊಂದ ಲಾವಣ್ಯ ನೇಣು ಹಾಕಿಕೊಂಡು ಪ್ರಾಣ ಬಿಟ್ಟಿದ್ದಾಳೆ.
ಗ್ರಾಮಕ್ಕೆ ಭೇಟಿ ನೀಡಿದ ಬೇತಮಂಗಲ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ, ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಈ ಸಂಬಂಧ ಮೃತ ಬಾಲಕಿಯ ತಾಯಿ ರೇಣುಕಾ ಅವರು, ಪ್ರಿಯಕರ ವಿನೋದ್ ವಿರುದ್ಧ ಜಾತಿ ನಿಂದನೆ, ಪೋಕ್ಸೋ ಕಾಯ್ದೆ ಹಾಗೂ ಐಪಿಸಿ ಸೆಕ್ಷನ್ 306 (ಆತ್ಮಹತ್ಯೆಗೆ ಪ್ರೇರಣೆ) ಅಡಿ ದೂರು ಸಲ್ಲಿಸಿದ್ದಾರೆ.
ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.