ಸರ್ಕಾರಿ ಶಾಲೆಯ ಗೋಡೆಯಲ್ಲಿ ಪಾಕಿಸ್ತಾನ ಜಿಂದಾಬಾದ್

Public TV
1 Min Read

– ದುಷ್ಕರ್ಮಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ

ಹುಬ್ಬಳ್ಳಿ: ನಗರದ ಪ್ರತಿಷ್ಠಿತ ಕೆಎಲ್‍ಇ ಕಾಲೇಜಿನಲ್ಲಿ ಪಾಕಿಸ್ತಾನ ಪರ ಘೋಷಣೆ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಸರ್ಕಾರಿ ಶಾಲೆಯ ಗೋಡೆಯ ಮೇಲೆ ಪಾಕಿಸ್ತಾನ ಜಿಂದಾಬಾದ್ ಎಂಬ ಬರಹವನ್ನು ಬರೆಯಲಾಗಿದ್ದು, ದುಷ್ಕರ್ಮಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.

ಹುಬ್ಬಳ್ಳಿ ತಾಲೂಕಿನ ಬುಡರಶಿಂಗಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಯಾರೋ ದುಷ್ಕರ್ಮಿಗಳು ಪಾಕಿಸ್ತಾನ ಜಿಂದಾಬಾದ್ ಎಂದು ಬರೆದಿದ್ದಾರೆ. ಕೈ ಬರಹದಿಂದಲೇ ಬರೆದಿರುವ ಬರಹಗಳಾಗಿದ್ದು, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆಡಳಿತ ಮಂಡಳಿ ಹುಬ್ಬಳ್ಳಿ ಗ್ರಾಮೀಣ ಠಾಣೆಗೆ ದೂರು ನೀಡಿದೆ.

ಈ ಬಗ್ಗೆ ಹುಬ್ಬಳ್ಳಿ ಗ್ರಾಮೀಣ ಠಾಣೆಗೆ ದೂರು ದಾಖಲಾಗಿದ್ದು, ಮಾಹಿತಿ ನೀಡಿದ ನಂತರವೂ ಸ್ಥಳಕ್ಕೆ ಭೇಟಿ ನೀಡದ ಪೊಲೀಸರ ಕಾರ್ಯವೈಖರಿಯ ವಿರುದ್ಧ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ಪುಲ್ವಾಮಾ ದಾಳಿಯಾಗಿ ಫೆ 14ಕ್ಕೆ ಒಂದು ವರ್ಷವಾದ ಬೆನ್ನಲ್ಲೇ ಕಾಶ್ಮೀರ ಮೂಲದ ಅಮೀರ್, ತಾಲೀಬ್ ಮತ್ತು ಬಸೀತ್ ಪಾಕಿಸ್ತಾನ ಸೇನೆಯ ಹಾಡಿಗೆ ಧ್ವನಿಗೂಡಿಸಿ ಪಾಕಿಸ್ತಾನ ಜಿಂದಾಬಾದ್ ಎನ್ನುವ ವಿಡಿಯೋ ಮಾಡಿ ಮೊಬೈಲ್ ಸ್ಟೇಟಸ್ ಹಾಕಿಕೊಂಡಿದ್ದರು. ಈ ಮೂವರು ಕೆಎಲ್‍ಇ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ಶನಿವಾರ ವಿಡಿಯೋ ವೈರಲ್ ಆಗುತ್ತಿದ್ದಂತೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಕಾಲೇಜಿಗೆ ಮುತ್ತಿಗೆ ಹಾಕಿ, ವಿದ್ಯಾರ್ಥಿಗಳನ್ನು ಬಂಧಿಸಿ ದೇಶದ್ರೋಹದ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನೆ ಮಾಡಿದಲ್ಲದೇ ವಿದ್ಯಾರ್ಥಿಗಳನ್ನ ಥಳಿಸಿದ್ದರು.

ಬಂಧಿತ ಅಮೀರ್ ಸಿವಿಲ್ ಎಂಜಿನಿಯರಿಂಗ್‍ನ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದು, ದಕ್ಷಿಣ ಕಾಶ್ಮೀರದ ಅನಂತನಾಗ್ ಭಾಗದವನು ಎಂದು ತಿಳಿದು ಬಂದಿದೆ. ಅಲ್ಲದೇ ತಾಲೀಬ್ ಹಾಗೂ ಬಸೀತ್ ಇಬ್ಬರು ಸಿವಿಲ್ ಇಂಜಿನಿಯರಿಂಗ್ ಮೊದಲ ವರ್ಷದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು. ತಾಲೀಬ್ ದಕ್ಷಿಣ ಕಾಶ್ಮೀರದ ಅನಂತನಾಗ್ ಭಾಗದ ವಿದ್ಯಾರ್ಥಿಯಾದರೆ, ಬಸೀತ್ ಉತ್ತರ ಕಾಶ್ಮೀರದ ಸಂಪೂರೆಯವನು ಎಂದು ತಿಳಿದು ಬಂದಿತ್ತು.

Share This Article
Leave a Comment

Leave a Reply

Your email address will not be published. Required fields are marked *