ಕರ್ನಾಟಕ ರಾಜ್ಯಕ್ಕೆ ನೀರು ಬಿಡುಗಡೆ ಮಾಡಬಾರದು – ಮಹಾರಾಷ್ಟ್ರ ಸಿಎಂಗೆ ಶಾಸಕ ಪತ್ರ

Public TV
1 Min Read

ಬೆಳಗಾವಿ: ಕರ್ನಾಟಕ ರಾಜ್ಯಕ್ಕೆ ನೀರು ಬಿಡುಗಡೆ ಮಾಡಬಾರದು ಎಂದು ಶಿವಸೇನೆ ಶಾಸಕರೊಬ್ಬರು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಗೆ ಪತ್ರ ಬರೆದು ಉದ್ಧಟತನ ಪ್ರದರ್ಶಿಸಿದ್ದಾರೆ.

ಸಿಎಂ ದೇವೇಂದ್ರ ಫಡ್ನವಿಸ್ ಅವರಿಗೆ ಪತ್ರ ಬರೆದಿರುವ ಸಾತಾರಾ ಜಿಲ್ಲೆಯ ಪಾಟಣ್ ಕ್ಷೇತ್ರದ ಶಾಸಕ ಶಂಭುರಾಜ ದೇಸಾಯಿ ಕೃಷ್ಣಾ ನದಿಗೆ ಕೊಯ್ನಾ ಡ್ಯಾಂನಿಂದ ನೀರು ಬಿಡುಗಡೆ ಮಾಡದಂತೆ ಪತ್ರ ಬರೆದು ನೀಚತನ ಪ್ರದರ್ಶನ ಮಾಡಿದ್ದಾರೆ.

ಮಹಾರಾಷ್ಟ್ರ ರಾಜ್ಯದ ಸಾತಾರಾ ಜಿಲ್ಲೆಯಲ್ಲಿರುವ 105 ಟಿಎಂಸಿ ನೀರು ಸಂಗ್ರಹಣಾ ಸಾಮಥ್ರ್ಯದ ಕೊಯ್ನಾ ಡ್ಯಾಂನಲ್ಲಿ ಪ್ರಸ್ತುತ 36.89 ಟಿಎಂಸಿ ನೀರು ಸಂಗ್ರಹ ಹೊಂದಿದೆ. ರಾಜ್ಯದಲ್ಲಿ ಬರಗಾಲ ಬಂದಿರುವ ಹಿನ್ನೆಲೆಯಲ್ಲಿ ಸಿಎಂ ಕುಮಾರಸ್ವಾಮಿ ಅವರು ಮಹಾರಾಷ್ಟ್ರ ಸರ್ಕಾರಕ್ಕೆ ನೀರು ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ಶಂಭುರಾಜ ದೇಸಾಯಿ ಈ ಪತ್ರ ಬರೆದಿದ್ದಾರೆ.

ಮೇ 5 ರಂದು ಸಿಎಂ ಕುಮಾರಸ್ವಾಮಿ, ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಹರಿಸಲು ಮಹಾರಾಷ್ಟ್ರ ಸರ್ಕಾರ ಸಮ್ಮತಿಸಿದ್ದು ಇನ್ನೆರಡು ದಿನಗಳಲ್ಲಿ ನೀರು ಬರುವ ಸಾಧ್ಯತೆ ಇದೆ ಎಂದು ಮಹಾರಾಷ್ಟ್ರ ಸರ್ಕಾರ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮಾಹಿತಿ ನೀಡಿದೆ. ತೀವ್ರ ಬರಗಾಲದಿಂದ ಕುಡಿಯುವ ನೀರಿನ ಅಭಾವ ಉಂಟಾಗಿರುವ ಹಿನ್ನೆಲೆಯಲ್ಲಿ ಕೊಯ್ನಾ ಜಲಾಶಯದಿಂದ ನೀರು ಬಿಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯದ ಮನವಿಗೆ ಸ್ಪಂದಿಸಿರುವ ಮಹಾರಾಷ್ಟ್ರ ಸರ್ಕಾರ ನೀರು ಹರಿಸಲು ಕ್ರಮ ಕೈಗೊಂಡಿದೆ ಎಂದು ಟ್ವೀಟ್ ಮಾಡಿ ಮಾಹಿತಿ ನೀಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *