ಸಂಚಾರಿ ಫೀವರ್ ಕ್ಲಿನಿಕ್ ಕಾರ್ಯಾರಂಭ- ಕ್ವಾರಂಟೈನ್ ಪ್ರದೇಶಗಳಲ್ಲಿ ತಪಾಸಣೆ

Public TV
2 Min Read

ಹುಬ್ಬಳ್ಳಿ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ಅನ್ನು ಸಂಚಾರಿ ಫೀವರ್ ಕ್ಲಿನಿಕ್ ಆಗಿ ಮಾರ್ಪಡಿಸಲಾಗಿದೆ. ಕೊರೊನಾ ಸೋಂಕು ಕಂಡುಬಂದ ಹುಬ್ಬಳ್ಳಿ-ಧಾರವಾಡ ಪ್ರದೇಶದಲ್ಲಿ ಸಂಚರಿಸಿ ಜ್ವರ, ಕೆಮ್ಮು ಹಾಗೂ ಉಸಿರಾಟದ ತೊಂದರೆ ಕಾಣಿಸಿಕೊಂಡವರನ್ನು ಪರೀಕ್ಷಿಸಲಾಗುವುದು ಎಂದು ಜಿಲ್ಲಾ ಉಸ್ತವಾರಿ ಸಚಿವರೂ ಆಗಿರುವ ಬೃಹತ್ ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಸಚಿವ ಜಗದೀಶ್ ಶೆಟ್ಟರ್ ಮಾಹಿತಿ ನೀಡಿದರು.

ನಗರದ ಬಿಆರ್ ಟಿಎಸ್ ಪ್ರಾದೇಶಿಕ ಬಸ್ ನಿಲ್ದಾಣದಲ್ಲಿನ ಕಂಟ್ರೋಲ್ ರೂಂ ಹಾಗೂ ಸಂಚಾರಿ ಫೀವರ್ ಕ್ಲಿನಿಕ್ ಪರಿಶೀಲಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಜಿಲ್ಲಾಡಳಿತ ಹಾಗೂ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ವಿನೂತನ ಪ್ರಯತ್ನ ಮಾಡಲಾಗಿದೆ. ಬಸ್‍ನ್ನು ಸಂಚಾರಿ ಫೀವರ್ ಕ್ಲಿನಿಕ್ ಆಗಿ ಮಾರ್ಪಡಿಸಲಾಗಿದೆ. ಇದು ರಾಜ್ಯದ ಮೊದಲ ಸಂಚಾರಿ ಫೀವರ್ ಕ್ಲಿನಿಕ್ ಆಗಿದೆ. ಕೊರೊನಾ ಸೋಂಕಿನ ಲಕ್ಷಣ ಕಂಡುಬಂದರೆ ತಕ್ಷಣ ಅವರನ್ನು ಅಂಬುಲೆನ್ಸ್ ಮೂಲಕ ಕಿಮ್ಸ್ ಕೊವೀಡ್ ಆಸ್ಪತ್ರೆಗೆ ಕಳುಹಿಸಿಕೊಡಲಾಗುವುದು. ಒರ್ವ ಡಾಕ್ಟರ್, ನರ್ಸ್, ಗ್ರೂಪ್ ಡಿ ನೌಕರರು ಸಂಚಾರಿ ಫೀವರ್ ಅಲ್ಲಿ ಕೆಲಸ ನಿರ್ವಹಿಸುತ್ತಾರೆ. ಥರ್ಮಲ್ ಸ್ಕ್ಯಾನರ್, ರಕ್ತ ಪರೀಕ್ಷೆ, ರಕ್ತದ ಒತ್ತಡ ಪರೀಕ್ಷೆ ಮಾಡುವ ಯಂತ್ರ ಈ ಬಸ್ಸಿನಲ್ಲಿದೆ ಎಂದು ಮಾಹಿತಿ ನೀಡಿದರು.

ಅಗತ್ಯ ವಸ್ತುಗಳ ಮಾರಾಟಗಾರರು ಹಾಗೂ ತುರ್ತು ಸಂದರ್ಭಗಳ ಪಾಸು ವಿತರಿಸಲು ಆನ್ ಲೈನ್ ವ್ಯವಸ್ಥೆ ಕಲ್ಪಿಸಲಾಗಿದೆ. www.supportdharwad.in ಮೂಲಕ ವ್ಯಾಪಾರಿಗಳು ಮತ್ತು ವಿವಿಧ ತುರ್ತು ಉದ್ದೇಶಗಳಿಗೆ ಸಾರ್ವಜನಿಕರು ಇ-ಪಾಸ್ ಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಪರಿಶೀಲಿಸಿ ಕ್ಯೂ.ಆರ್.ಕೋಡ್ ಇರುವ ಪಾಸುಗಳನ್ನು ವಿತರಿಸಲಾಗುವುದು. ಇದರಿಂದ ಪಾಸುಗಳ ದುರುಪಯೋಗವಾಗುವುದು ತಪ್ಪುತ್ತದೆ ಎಂದರು.

ಬಿಆರ್ ಟಿಎಸ್, ಪಾಲಿಕೆ ಹಾಗೂ ಪೊಲೀಸ್ ಕಮಿಷನರೇಟ್ ಕಡೆಯಿಂದ ಅವಳಿ ನಗರದ ವಿವಿಧೆಡೆ ಅಳವಡಿಸಲಾಗಿರುವ ಸಿಸಿ ಟಿವಿ ಕ್ಯಾಮೆರಾಗಳನ್ನು ಮಾನಿಟರ್ ಮಾಡಲು ಹೊಸೂರಿನ ಬಿಆರ್ ಟಿಆಸ್ ಕಚೇರಿಯಲ್ಲಿ ಕಂಟ್ರೋಲ್ ರೂಮ್ ಸ್ಥಾಪಿಸಲಾಗಿದೆ. ಈ ಮೂಲಕ ಲಾಕ್‍ಡೌನ್ ಪ್ರದೇಶಗಳಲ್ಲಿ ಜನರು ಅನಗತ್ಯವಾಗಿ ಸಂಚರಿಸುವುದು ಹಾಗೂ ಗುಂಪು ಸೇರಿವುದನ್ನು ತಡೆಗಟ್ಟಲಾಗುತ್ತದೆ. ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿ ಹಾಗೂ ದೇಶಪಾಂಡೆ ಫೌಂಡೇಶನ್ ವತಿಯಿಂದ ಕೊರೊನಾ ಸೋಂಕಿತರ ಸಂಪರ್ಕ ಸಂಗ್ರಹ, ಕ್ವಾರಂಟೈನ್ ನಲ್ಲಿ ಇರುವ ವ್ಯಕ್ತಿಗಳ ನಿಗಾವಹಿಸುವಿಕೆಯ ಕೇಂದ್ರೀಕೃತ ಕಾರ್ಯವನ್ನು ಸಹ ನಿರ್ವಹಿಸಲಾಗುತ್ತಿದೆ ಎಂದರು.

Share This Article
Leave a Comment

Leave a Reply

Your email address will not be published. Required fields are marked *