ಮಾಜಿ ಸೈನಿಕನಿಗೆ ರಾಮನಗರ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆ

Public TV
1 Min Read

ರಾಮನಗರ: ಅತ್ತೆಯನ್ನು ಕೊಲೆ ಮಾಡಿದ್ದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ  ಅಪರಾಧಿಯಾಗಿದ್ದ ಮಾಜಿ ಸೈನಿಕನಿಗೆ ರಾಮನಗರ ಜಿಲ್ಲಾ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ.

ಕಳೆದ ವರ್ಷ ಅತ್ತೆಯನ್ನೇ ಬರ್ಬರವಾಗಿ ಹತ್ಯೆ ಮಾಡಿದ್ದ ಮಾಜಿ ಸೈನಿಕ ನಾಗರಾಜುವನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿತ್ತು. ಮೂರನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು ವಿಚಾರಣೆ ನಡೆಸಿ, ಈ ಪ್ರಕರಣ ಕುರಿತಂತೆ ಇಂದು ಶಿಕ್ಷೆಯ ತೀರ್ಪು ನೀಡಿದೆ. ನ್ಯಾಯಧೀಶರಾದ ಗೋಪಾಲಕೃಷ್ಣ ರೈರವರು ಮಾಜಿ ಸೈನಿಕ ನಾಗರಾಜುವಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.

ಏನಿದು ಪ್ರಕರಣ?
ರಾಮನಗರ ತಾಲೂಕಿನ ದಾಸೇಗೌಡನದೊಡ್ಡಿ ಗ್ರಾಮದವನಾದ ನಾಗರಾಜ್, ಬಿಎಸ್‍ಎಫ್ ನಲ್ಲಿ ಸುಮಾರು 20 ವರ್ಷಗಳ ಕಾಲ ಸೇವೆ ಸಲ್ಲಿಸಿ ಗಡಿಯಲ್ಲಿ ದೇಶ ಸೇವೆ ಮಾಡಿದ್ದ. ಮೂವತ್ತು ವರ್ಷಗಳ ಹಿಂದೆ ಮೃತಳ ಪುತ್ರಿ ಮಂಗಳಾ ಎಂಬುವವರನ್ನ ಮದುವೆಯಾಗಿದ್ದ. ದಂಪತಿಗೆ ಮುದ್ದಾದ ಇಬ್ಬರು ಮಕ್ಕಳು ಇದ್ದಾರೆ. ನಾಗರಾಜ್ ಕಳೆದ ಆರು ವರ್ಷಗಳಿಂದ ಕೆಂಚನಕುಪ್ಪೆ ಗ್ರಾಮದಲ್ಲಿಯೇ ನೆಲೆಸಿದ್ದನು.

ನಾಗರಾಜ್ ಸಂಸಾರದಲ್ಲಿ ಪದೇ ಪದೇ ಜಗಳ ನಡೆಯುತ್ತಿತ್ತು. ಈ ಸಂಬಂಧ ರಾಜಿ ಪಂಚಾಯಿತಿ ಕೂಡ ನಡೆದಿತ್ತು. ಅಲ್ಲದೆ ಕಳೆದ ವರ್ಷದ ಏಪ್ರಿಲ್ ನಲ್ಲಿ ಜಗಳ ನಡೆದು ಮಂಗಲಾ ತನ್ನ ತಾಯಿ ಮನೆ ಸೇರಿದ್ದರು. ಇದೇ ವಿಚಾರವಾಗಿ  ಏಪ್ರಿಲ್ 7ರಂದು ಗಲಾಟೆ ಮಾಡುತ್ತಾ, ಮಚ್ಚು ಹಿಡಿದು ಅತ್ತೆ ಮನೆ ಬಳಿ ಬಂದ ನಾಗರಾಜ್, ಪತ್ನಿ ಮಂಗಳರನ್ನ ಹುಡುಕಿದ್ದಾನೆ. ಈ ವೇಳೆ  ಕೈಯಲ್ಲಿ ಮಚ್ಚು ಕಂಡ, ಅತ್ತೆ ಚಿಕ್ಕತಿಮ್ಮಮ್ಮ ನಾಗರಾಜ್ ನನ್ನ ಪ್ರಶ್ನಿಸಿದ್ದಾರೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಇದರಿಂದ ಕುಪಿತಗೊಂಡ ನಾಗರಾಜ್ ಮಚ್ಚಿನಿಂದ ಅತ್ತೆಯನ್ನು ಕೊಚ್ಚಿ ಕೊಲೆ ಮಾಡಿದ್ದ.

.  ಇದನ್ನೂ ಓದಿ : ಗಂಡ-ಹೆಂಡತಿ ಜಗಳದಲ್ಲಿ ಮೂಗು ತೂರಿಸಿದ್ದಕ್ಕೆ ಅತ್ತೆಯನ್ನೇ ಕೊಂದ ಮಾಜಿ ಸೈನಿಕ

Share This Article
Leave a Comment

Leave a Reply

Your email address will not be published. Required fields are marked *