ಮುಳುಬಾಗಿಲಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯೇ ಇಲ್ಲ!

Public TV
1 Min Read

ಕೋಲಾರ: ಮುಳುಬಾಗಿಲು ಮೀಸಲು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಜಿ.ಮಂಜುನಾಥ್ (ಕೊತ್ತೂರು ಮಂಜುನಾಥ್) ಅವರ ನಾಮಪತ್ರ ತಿರಸ್ಕೃತಗೊಂಡಿದೆ.

ನಕಲಿ ಜಾತಿ ಪ್ರಮಾಣ ಪತ್ರ ನಿಡಿದ್ದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಮಂಜುನಾಥ್ ಅವರ ನಾಮಪತ್ರವನ್ನು ಅಸಿಂಧುಗೊಳಿಸಿದೆ. ಕೋಲಾರ ಸಂಸದ ಮುನಿಯಪ್ಪ ಪುತ್ರಿ ನಂದಿನಿ ಕೂಡ ಮುಳುಬಾಗಿಲು ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದರು. ಮಂಜುನಾಥ್ ನಾಮಪತ್ರ ತಿರಸ್ಕೃತಗೊಂಡ ಬೆನ್ನಲ್ಲೆ ನಂದಿನಿ ನಾಮಪತ್ರವನ್ನು ವಾಪಸ್ ಪಡೆದ ಕಾರಣ ಈಗ ಮುಳುಬಾಗಿಲು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯೇ ಇಲ್ಲದಂತಾಗಿದೆ.

ಮುಳಬಾಗಿಲು ಕ್ಷೇತ್ರದ ಶಾಸಕ ಜಿ.ಮಂಜುನಾಥ್ ಜಾತಿ ಪ್ರಮಾಣಪತ್ರ ನಕಲೆಂದು ಆರೋಪಿಸಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠವು ಜಾತಿ ಪ್ರಮಾಣಪತ್ರವನ್ನು ಅಸಿಂಧು ಎಂದು ಬುಧವಾರ ತೀರ್ಪು ನೀಡಿತ್ತು.

ನಂದಿನಿಯವರು ನಾಮಪತ್ರವನ್ನು ವಾಪಸ್ ಪಡೆದಿದ್ದು ಯಾಕೆ ಎನ್ನುವ ಕಾರಣ ತಿಳಿದು ಬಂದಿಲ್ಲ.

ಏನಿದು ಪ್ರಕರಣ?
ಮುಳಬಾಗಿಲು ಕ್ಷೇತ್ರವು ಪರಿಶಿಷ್ಟ ಜಾತಿಗೆ ಮೀಸಲಾಗಿದ್ದು ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿನ ಬುಡ್ಗ ಜಂಗಮ ಜಾತಿಗೆ ಸೇರಿದ್ದೇನೆ ಎಂದು 2013ರ ಚುನಾವಣೆ ಸಂದರ್ಭದಲ್ಲಿ ಮಂಜುನಾಥ್ ಜಾತಿ ಪ್ರಮಾಣ ಪತ್ರ ಸಲ್ಲಿಸಿದ್ದರು. ಬುಡ್ಗ ಜಂಗಮ ಅಂತಾ ಜಾತಿಯೇ ಇಲ್ಲ ಮಂಜುನಾಥ್ ಅವರಿಗೆ ಹೇಗೆ ಜಾತಿ ಪ್ರಮಾಣ ಪತ್ರ ನೀಡಲು ಸಾಧ್ಯ ಎಂದು ಮುಳುಬಾಗಿಲಿನ ಜೆಡಿಎಸ್ ಮುಖಂಡ ಮತ್ತು ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮುನಿ ಆಂಜಿನಪ್ಪ ಮತ್ತು ಮುಖಂಡರಾದ ಪಂಡಿತ್ ಮುನಿವೆಂಕಟಪ್ಪ 2013ರಲ್ಲಿ ಹೈಕೋರ್ಟ್ ಮೆಟ್ಟಿಲೇರಿದ್ದರು.

Share This Article
Leave a Comment

Leave a Reply

Your email address will not be published. Required fields are marked *