ಸಕಲ ಸರ್ಕಾರಿ ಗೌರವದೊಂದಿಗೆ ಮಾಜಿ ಸಚಿವ ಎಂ.ವಿ.ರಾಜಶೇಖರನ್ ಅಂತ್ಯಕ್ರಿಯೆ

Public TV
1 Min Read

ರಾಮನಗರ: ಅನಾರೋಗ್ಯದಿಂದ ಮೃತಪಟ್ಟ ಕೇಂದ್ರದ ಮಾಜಿ ಸಚಿವ ಎಂ.ವಿ.ರಾಜಶೇಖರನ್ ಅಂತ್ಯಕ್ರಿಯೆ ಅವರ ಹುಟ್ಟೂರು ಕನಕಪುರ ತಾಲೂಕಿನ ದೊಡ್ಡಮರಳವಾಡಿಯಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ಲಿಂಗಾಯಿತ ಧರ್ಮದ ವಿಧಿವಿಧಾನಗಳ ಮೂಲಕ ನೆರವೇರಿತು.

ಕೇಂದ್ರದ ಮಾಜಿ ಸಚಿವ ಎಂ.ವಿ.ರಾಜಶೇಖರನ್ ಅವರ ಆಸೆಯಂತೆಯೇ ಅವರ ಹುಟ್ಟೂರು ಮರಳವಾಡಿಯಲ್ಲಿ ಸೋಮವಾರ ಮಧ್ಯಾಹ್ನ 2.45ರ ಸುಮಾರಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಿತು. ಕೊರೊನಾ ಲಾಕ್‍ಡೌನ್ ಹಿನ್ನೆಲೆಯಲ್ಲಿ ಕೇವಲ 20 ನಿಮಿಷಗಳು ಮಾತ್ರ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಸಿಡಿದೇವರಹಳ್ಳಿ ರಸ್ತೆಯ ತೋಟದ ಮನೆಯ ಮುಂಭಾಗ ಸಾರ್ವಜನಿಕರು, ಗಣ್ಯರಿಗೆ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿತ್ತು.

ಎಂ.ವಿ.ಆರ್ ರವರ ಪಾರ್ಥಿವ ಶರೀರವನ್ನು ಮಧ್ಯಾಹ್ನ 2.20ರ ಸುಮಾರಿಗೆ ಅಂಬುಲೆನ್ಸ್ ಮೂಲಕ ಮರಳವಾಡಿಗೆ ಕರೆತರಲಾಯಿತು. ಬಳಿಕ ಅವರದ್ದೇ ತೋಟದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಸಲುವಾಗಿ ದೂರದೂರದಲ್ಲೇ ಆಸನಗಳ ವ್ಯವಸ್ಥೆ ಮಾಡಲಾಗಿತ್ತು.

ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯಾ, ಎಂಎಲ್‍ಸಿ ಸಿ.ಎಂ.ಲಿಂಗಪ್ಪ, ಕೆಪಿಸಿಸಿ ಸದಸ್ಯ ಜಿಯಾವುಲ್ಲಾ, ಕನಕಪುರ ದೇಗುಲ ಮಠದ ಮುಮ್ಮಡಿ ನಿರ್ವಾಣ ಮಹಾಸ್ವಾಮಿ, ಮರಳೇಗವಿ ಮಠದ ಶಿವರುದ್ರ ಸ್ವಾಮೀಜಿ, ಮರಳವಾಡಿಯ ಮೃತ್ಯುಜಯ ಸ್ವಾಮೀಜಿ, ಅನ್ನದಾನೇಶ್ವರ ಸ್ವಾಮೀಜಿ ಸೇರಿದಂತೆ ಇತರ ಗಣ್ಯರು ಅಂತಿಮ ದರ್ಶನ ಹಾಗೂ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.

ಪೊಲೀಸ್ ಸಿಬ್ಬಂದಿ ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಸರ್ಕಾರಿ ಗೌರವ ಸಲ್ಲಿಸಿದರು. ಬಳಿಕ ದೊಡ್ಡ ಮರಳವಾಡಿಯ ದೇವರಹಳ್ಳಿ ರಸ್ತೆಯಲ್ಲಿನ ತೋಟದಲ್ಲಿ ಅಂತ್ಯಕ್ರಿಯೆಯು  ನಡೆಯಿತು.

Share This Article
Leave a Comment

Leave a Reply

Your email address will not be published. Required fields are marked *