ಮೈಸೂರಿನಲ್ಲಿ ನಾಳೆಯಿಂದ ದಸರಾ ಮಹೋತ್ಸವ ಆರಂಭ

Public TV
1 Min Read

ಮೈಸೂರು: ಭಾನುವಾರದಿಂದ ಹತ್ತು ದಿನಗಳ ಕಾಲ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಕ್ಷರಶಃ ಧಾರ್ಮಿಕ, ಪಾರಂಪರಿಕ, ಸಾಂಸ್ಕೃತಿಕ ಹಾಗೂ ಮನರಂಜನೆ ಪೂರಿತ ವಾತಾವರಣ ನಿರ್ಮಾಣವಾಗಲಿದೆ. ಏಕೆಂದರೆ ನಾಳೆಯಿಂದ ದಸರಾ ಮಹೋತ್ಸವ ಆರಂಭವಾಗಲಿದೆ.

ಮೈಸೂರು ದಸರಾ ಮಹೋತ್ಸವ ವಿಶ್ವವನ್ನೇ ತನ್ನತ್ತ ಸೆಳೆದುಕೊಂಡು ತನ್ನ ವೈವಿಧ್ಯಮಯವಾದ ಆಚರಣೆಗಳನ್ನು ಜಗತ್ತಿಗೆ ತೋರ್ಪಡಿಸುತ್ತದೆ. ಭಾನುವಾರದಿಂದ ಮೈಸೂರಿನಲ್ಲಿ ದಸರಾ ಮೆರಗು ತುಂಬಲಿದೆ. ಈ ಮೆರುಗಿಗೆ ಸಾಹಿತಿ ಎಸ್.ಎಲ್ ಭೈರಪ್ಪ ಅವರು ಭಾನುವಾರ ಬೆಳಗ್ಗೆ 9.39ರ ವೃಶ್ಚಿಕ ಲಗ್ನದಲ್ಲಿ ಚಾಮುಂಡೇಶ್ವರಿ ಬೆಟ್ಟದಲ್ಲಿ ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿಗೆ ಪುಷ್ಪಚರಣೆ ಮಾಡುವ ಮೂಲಕ ಚಾಲನೆ ನೀಡಲಿದ್ದಾರೆ.

ದಸರಾ ಉದ್ಘಾಟನಾ ಕಾರ್ಯಕ್ರಮ ಭಾನುವಾರ ಚಾಮುಂಡಿ ಬೆಟ್ಟದಲ್ಲಿ ಜರುಗಲಿದ್ದು, ಈಗಾಗಲೇ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಈ ಕಾರ್ಯಕ್ರಮಕ್ಕೆ ಸಿಎಂ ಬಿ.ಎಸ್ ಯಡಿಯೂರಪ್ಪ ಸೇರಿದಂತೆ ಸಂಪುಟದ ಸಚಿವರು, ಸಂಸದರು, ಶಾಸಕರು ಸೇರಿದಂತೆ ಇತರ ಗಣ್ಯರು ಭಾಗವಹಿಸಲಿದ್ದಾರೆ.

ಒಂದು ಕಡೆ ಭಾನುವಾರ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ದಸರಾ ಮಹೋತ್ಸವಕ್ಕೆ ಚಾಲನೆ ದೊರೆತರೆ, ಇತ್ತ ಮೈಸೂರು ಅಂಬ ವಿಲಾಸ ಅರಮನೆಯಲ್ಲಿ ಯದುವಂಶದ ಅರಸ ಯದುವೀರ ಕೃಷ್ಣದತ್ತ ಒಡೆಯರ್ ಅವರು ಖಾಸಗಿ ದರ್ಬಾರನ್ನು ಆರಂಭಿಸಲಿದ್ದಾರೆ. ಇದಲ್ಲದೇ ಅರಮನೆಯಲ್ಲಿ ವಿವಿಧ ಪೂಜಾ ಕೈಂಕರ್ಯಗಳು ಸಹ ಜರುಗುಲಿವೆ. ಇನ್ನೊಂದೆಡೆ ದಸರಾ ಮಹೋತ್ಸವದ ಅಂಗವಾಗಿ ಮೈಸೂರು ನಗರಾದ್ಯಂತ 10 ದಿನಗಳ ಕಾಲ ನಡೆಯುವ ಕಾರ್ಯಕ್ರಮಗಳಿಗೂ ಸಹ ಚಾಲನೆ ನೀಡಲಾಗುತ್ತದೆ.

ಭಾನುವಾರದಿಂದ ಹತ್ತು ದಿನಗಳ ಸಾಂಸ್ಕೃತಿಕ ನಗರಿ ಮೈಸೂರು ಮಧುವಣಗಿತ್ತಿಯಂತೆ ಅಲಂಕಾರಗೊಂಡು, ತನ್ನ ಸಂಸ್ಕೃತಿಯನ್ನು ಬಿತ್ತರಿಸುವ ಮೂಲಕ ಜನರಿಗೆ ಧಾರ್ಮಿಕ, ಪಾರಂಪರೆಯ ಜೊತೆಗೆ ಮನರಂಜನೆಯ ಬೆಳಕನ್ನೂ ಸಹ ಚೆಲ್ಲಲಿದೆ.

Share This Article
Leave a Comment

Leave a Reply

Your email address will not be published. Required fields are marked *