ಮಹಾಘಟಬಂಧನ್ ಹಿನ್ನಡೆಯ ಮುನ್ಸೂಚನೆ ನೀಡಿದ್ರಾ ಎನ್.ಮಹೇಶ್?

Public TV
2 Min Read

ಬೆಂಗಳೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ರಾಜೀನಾಮೆ ನೀಡುವ ಮೂಲಕ ಮಹಾಘಟಬಂಧನ್ ಹಿನ್ನಡೆಯ ಮುನ್ಸೂಚನೆಯನ್ನು ಪರೋಕ್ಷವಾಗಿ ನೀಡಿದ್ದಾರೆ ಎನ್ನುವ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.

ಹೌದು, ಎನ್.ಮಹೇಶ್ ರವರ ಏಕಾಏಕಿ ಮಂತ್ರಿಗಿರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರಕ್ಕೆ ಬಹು ದೊಡ್ಡ ಶಾಕ್ ನೀಡಿದ್ದಾರೆ. ಅಲ್ಲದೇ ಅವರು ರಾಜೀನಾಮೆ ನೀಡುತ್ತಾರೆ ಎನ್ನುವುದನ್ನು ಯಾರೂ ಸಹ ನಿರೀಕ್ಷಿಸಿರಲಿಲ್ಲ. ಈ ಮೂಲಕ ಮುಂಬರುವ ಲೋಕಸಭಾ ಚುನಾವಣೆಯಲ್ಲಿನ ಮಹಾಘಟಬಂಧನ್ ಹಿನ್ನಡೆಗೆ ಪರೋಕ್ಷವಾಗಿ ಮುನ್ಸೂಚನೆ ನೀಡಿದ್ದಾರೆ ಎನ್ನಲಾಗುತ್ತಿದೆ.

ಎನ್.ಮಹೇಶ್‍ರವರ ಮೂಲತಃ ಬಿಎಸ್‍ಪಿ ಶಾಸಕರು. ಅಲ್ಲದೇ ಬಿಎಸ್‍ಪಿ ಅಧಿನಾಯಕಿ ಇತ್ತೀಚೆಗೆ ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿನ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಯಾವುದೇ ಕಾರಣಕ್ಕೂ ಮೈತ್ರಿ ಮಾಡಿಕೊಳ್ಳುವುದಿಲ್ಲವೆಂದು ಹೇಳಿಕೆ ನೀಡಿದ್ದರು. ಹೀಗಾಗಿ ರಾಜ್ಯದಲ್ಲಿ ಕಾಂಗ್ರೆಸ್ ಜೊತೆ ಹೊರಾಡಲು ಪರೋಕ್ಷವಾಗಿ ಸಮ್ಮಿಶ್ರ ಸರ್ಕಾರದ ಮಂತ್ರಿಗಿರಿಗೆ ರಾಜೀನಾಮೆ ಕೊಡಿಸಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ: ದೋಸ್ತಿ ಸರ್ಕಾರದ ಮೊದಲ ವಿಕೆಟ್ ಪತನ-ಸಚಿವ ಸ್ಥಾನಕ್ಕೆ ಎನ್. ಮಹೇಶ್ ರಾಜೀನಾಮೆ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನ್‍ನಲ್ಲಿ ರಾಹುಲ್ ಗಾಂಧಿಯವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಮಾಡಿದರೇ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರವನ್ನು ಪತನಗೊಳಿಸಲು ಸಾಧ್ಯವಿಲ್ಲ. ಇದನ್ನು ಮನಗಂಡಿರುವ ಬಿಎಸ್‍ಪಿಯು ಮಾಯಾವತಿಯವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡುವಂತೆ ಕಾಂಗ್ರೆಸ್ ಜೊತೆ ಚರ್ಚಿಸಿದ್ದಾರೆ. ಆದರೆ ಇದಕ್ಕೆ ಕಾಂಗ್ರೆಸ್ ಆಗಲಿ, ರಾಹುಲ್ ಗಾಂಧಿಯಾಗಲಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಹೀಗಾಗಿ ಕಾಂಗ್ರೆಸ್ ವಿರುದ್ಧ ಮಾಯಾವತಿ ಅಸಮಾಧಾನ ಹೊಂದಿದ್ದಾರೆ. ಅಲ್ಲದೇ ಪರೋಕ್ಷವಾಗಿ ಕಾಂಗ್ರೆಸ್ ವಿರುದ್ಧ ಹೋರಾಡಲು ಮುಂದಾಗುತ್ತಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ.

ಇತ್ತೀಚೆಗೆ ಬಿಎಸ್‍ಪಿ ಹೇಳಿಕೆ ಬೆನ್ನಲ್ಲೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸಹ ಕಾಂಗ್ರೆಸ್ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಅಲ್ಲದೇ ಕಾಂಗ್ರೆಸ್ ನಮ್ಮನ್ನು ತುಂಬಾ ಸತಾಯಿಸುತ್ತಿದ್ದು, ಮುಂಬರುವ ರಾಜಸ್ಥಾನ ಹಾಗೂ ಮಧ್ಯಪ್ರದೇಶ ಚುನಾವಣೆಯಲ್ಲಿ ಈ ಕುರಿತು ಬಿಎಸ್‍ಪಿ ನಾಯಕಿ ಮಾಯಾವತಿ ಬಗ್ಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೀನಿ ಎನ್ನುವ ಹೇಳಿಕೆಯನ್ನು ನೀಡಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *