ಸುಮಲತಾಗೆ ಬಿಜೆಪಿ ಬೆಂಬಲ – ನನ್ನನ್ನು ಸೋಲಿಸಲು ಕೆಲ ಶಕ್ತಿಗಳ ಹುನ್ನಾರ ಎಂದ್ರು ನಿಖಿಲ್

Public TV
1 Min Read

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಅವರಿಗೆ ಬಿಜೆಪಿ ಬೆಂಬಲ ನೀಡಿದ್ದು, ಬಿಜೆಪಿಯ ಈ ನಡೆ ನನ್ನನ್ನು ಸೋಲಿಸಲು ಕೆಲವೊಂದು ಶಕ್ತಿಗಳು ನಡೆಸಿದ ಹುನ್ನಾರ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸುಮಲತಾ ಅವರಿಗೆ ಬಿಜೆಪಿ ಬೆಂಬಲಕೊಟ್ಟಿರುವುದು ನನಗೆ ಯಾವುದೇ ರೀತಿಯಲ್ಲೂ ಹಿನ್ನಡೆಯಾಗುವುದಿಲ್ಲ. ಕೆಲವೊಂದು ಶಕ್ತಿಗಳು ನನ್ನನ್ನ ಸೋಲಿಸಲು ಹುನ್ನಾರ ನಡೆಸುತ್ತಿದ್ದಾರೆ ಅಷ್ಟೇ. ಆದರೆ ಜನ ನನ್ನ ಪರ ಇದ್ದಾರೆ, ಮಂಡ್ಯ ಜನ ನನ್ನ ಕೈ ಬಿಡಲ್ಲ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು.

ಕ್ಷೇತ್ರದಲ್ಲಿ ಪ್ರಚಾರ ಕಾರ್ಯಕ್ಕೆ ತೆರಳಿದ ಕಡೆಯಲ್ಲಾ ಜನರಿಂದ ಉತ್ತಮ ಪ್ರತಿಕ್ರಿಯೆ ಇದೆ. ನನ್ನ ತಂದೆ ಮಾಡಿರುವ ಅಭಿವೃದ್ಧಿ ಕೆಲಸ ನನ್ನ ಕೈಹಿಡಿಯಲಿದೆ. ನನ್ನನ್ನು ಸೋಲಿಸಲು ನಿಂತಿರುವ ಎಲ್ಲರಿಗೂ ಒಳ್ಳೆಯದಾಗಲಿ. ಜನ ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ, ಅವರೇ ಸರಿಯಾದ ಉತ್ತರ ನೀಡಲಿದ್ದಾರೆ ಎಂದರು. ಅಲ್ಲದೇ ನಾಳೆ ನನ್ನ ತಂದೆಯವರ ಜೊತೆ ಚುಂಚನಗಿರಿ ಮಠಕ್ಕೆ ತೆರಳಿ ಶ್ರೀಗಳ ಆಶೀರ್ವಾದ ಪಡೆಯಲಿದ್ದೇವೆ ಎಂದು ತಿಳಿಸಿದರು.

ಇತ್ತ ಬಿಜೆಪಿ ಸುಮಲತಾ ಅವರಿಗೆ ಬೆಂಬಲ ಘೋಷಣೆ ಮಾಡುತ್ತಿದಂತೆ ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಸಿದ್ದರಾಮಯ್ಯ ಅವರ ನಿವಾಸಕ್ಕೆ ಶಾಸಕಿ ಅನಿತಾ ಕುಮಾರಸ್ವಾಮಿ ಸೇರಿದಂತೆ ಹಲವು ಜೆಡಿಎಸ್ ಮುಖಂಡರು ಭೇಟಿ ನೀಡಿ ಅರ್ಧ ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದರು. ಅಲ್ಲದೇ ಮಂಡ್ಯ ಕ್ಷೇತ್ರದಲ್ಲಿ ನಿಖಿಲ್ ಪರ ಪ್ರಚಾರಕ್ಕೆ ಆಗಮಿಸುವಂತೆ ಸಿದ್ದರಾಮಯ್ಯ ಅವರಿಗೆ ಅನಿತಾ ಕುಮಾರಸ್ವಾಮಿ ಮನವಿ ಮಾಡಿದರು. ಆದರೆ ಭೇಟಿ ಬಳಿಕ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ತೆರಳಿದರು.

Share This Article
Leave a Comment

Leave a Reply

Your email address will not be published. Required fields are marked *