ತೇಜಸ್ವಿ ಸೂರ್ಯ ವಿರುದ್ಧ ಎಫ್‍ಐಆರ್ ದಾಖಲಾಗಿಲ್ಲ: ಡಿಸಿಪಿ ಇಶಾ ಪಂತ್

Public TV
1 Min Read

ಬೆಂಗಳೂರು: ಬಿಜೆಪಿ ಅಭ್ಯರ್ಥಿಯಾಗಿರುವ ತೇಜಸ್ವಿ ಸೂರ್ಯ ವಿರುದ್ಧ ಯಾವುದೇ ಎಫ್‍ಐಆರ್ ದಾಖಲಾಗಿಲ್ಲ ಎಂದು ಡಿಸಿಪಿ ಇಶಾ ಪಂತ್ ಪಬ್ಲಿಕ್ ಟಿವಿಗೆ ಸ್ಪಷ್ಟಪಡಿಸಿದ್ದಾರೆ.

ಇಂದು ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ವಕ್ತಾರ ಬ್ರಿಜೇಶ್ ಕಾಳಪ್ಪ, ಬೆಂಗಳೂರ ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ತಮ್ಮ ಉಮೇದುವಾರಿಕೆಯಲ್ಲಿ ಈ ಬಗ್ಗೆ ಉಲ್ಲೇಖಿಸಿಲ್ಲ ಎಂದು ಆರೋಪಿಸಿದ್ದರು. ಇದೇ ವೇಳೆ ತೇಜಸ್ವಿ ಸೂರ್ಯ ವಿರುದ್ಧ ಟ್ವೀಟ್ ಮಾಡಿದ್ದ ಸೋಮದತ್ತಾ ಪರಿಚತರೊಂದಿಗೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಕ್ಲಿಪ್ ಬಿಡುಗಡೆಗೊಳಿಸಿದ್ದರು.

ಆಡಿಯೋ ಕ್ಲಿಪ್ ನಲ್ಲಿ ಸಹ, ತೇಜಸ್ವಿ ಸೂರ್ಯನ ವಿರುದ್ಧ 2018ರ ಜೂನ್ ಅಥವಾ ಜುಲೈ ತಿಂಗಳಲ್ಲಿ ಆತನ ವಿರುದ್ಧ ದೂರು ದಾಖಲಿಸಿದ್ದೇನೆ. ಕೋರಮಂಗಲ ಪೊಲೀಸ್ ಠಾಣೆಗೆ ಹೋದರೆ ಎಲ್ಲ ಮಾಹಿತಿ ನಿಮಗೆ ಸಿಗಲಿದೆ. ಈಗಾಗಲೇ ಕೆಲವು ಮಾಧ್ಯಮದವರಿಗೆ ಎಫ್‍ಐಆರ್ ಪ್ರತಿ ಲಭ್ಯವಾಗಿದ್ದು, ನನ್ನನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳುತ್ತಾರೆ.

ಎಫ್‍ಐಆರ್ ದಾಖಲಾಗಿದೆ ಎಂದು ಬ್ರಿಜೇಶ್ ಕಾಳಪ್ಪ ತಿಳಿಸಿದ ಹಿನ್ನೆಲೆಯಲ್ಲಿ ಪಬ್ಲಿಕ್ ಟಿವಿ ಈ ವಿಚಾರದ ಬಗ್ಗೆ ಸ್ಪಷ್ಟನೆ ಪಡೆಯಲು ಡಿಸಿಪಿ ಅವರನ್ನು ಸಂಪರ್ಕಿಸಿದೆ. ಈ ವೇಳೆ ತೇಜಸ್ವಿ ಸೂರ್ಯ ವಿರುದ್ಧ ಸಂತ್ರಸ್ತೆ ಯಾವುದೇ ಎಫ್‍ಐಆರ್ ದಾಖಲಿಸಿಲ್ಲ ಎಂದು ಇಶಾ ಪಂತ್ ಸ್ಪಷ್ಟನೆ ನೀಡಿದ್ದಾರೆ.

ಆಡಿಯೋದಲ್ಲಿ ಎಫ್‍ಐಆರ್ ದಾಖಲಾಗಿದೆ ಎಂದು ಹೇಳಿದ್ದರೆ ಡಿಸಿಪಿ ಯಾರೂ ದೂರು ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬಿಡುಗಡೆ ಮಾಡಿದ ಆಡಿಯೋದ ಬಗ್ಗೆ ಅನುಮಾನ ಎದ್ದಿದೆ.

https://www.youtube.com/watch?v=b_yx7ATOliM

Share This Article
Leave a Comment

Leave a Reply

Your email address will not be published. Required fields are marked *