ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು – ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

Public TV
1 Min Read

ಬೆಂಗಳೂರು: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ (Nursing Mother Death Case) ಸಂಬಂಧಿಸಿದಂತೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸುವಂತೆ ಲೋಕಾಯುಕ್ತ (Karnataka Lokayukta) ಮುಖ್ಯ ನ್ಯಾಯಮೂರ್ತಿ ಬಿ.ಎಸ್ ಪಾಟೀಲ್ ಆದೇಶಿಸಿದ್ದಾರೆ.

ಇಂದು (ಡಿ.7) ಬೆಳಗ್ಗೆಯಷ್ಟೇ ಲೋಕಾಯುಕ್ತ ಅಧಿಕಾರಿಗಳು ಬಳ್ಳಾರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ಬೆನ್ನಲ್ಲೇ ಮಹತ್ವದ ಬೆಳವಣಿಗೆ ನಡೆದಿದೆ. ಇದನ್ನೂ ಓದಿ: ಬಾಣಂತಿಯರ ಸಾವಿನಲ್ಲಿ ಕರ್ನಾಟಕ ನಂ.1 ಆಗಿದೆ – ಆರ್‌. ಅಶೋಕ್

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ ಐವರು ಬಾಣಂತಿಯರ ಸಾವಿನ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕು. ಘಟನೆ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ, ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಔಷಧ ನಿಯಂತ್ರಕರು ಹಾಗೂ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಯಮಿತ ವ್ಯವಸ್ಥಾಪಕ ನಿರ್ದೇಶಕರ ವಿರುದ್ಧ ಪ್ರಕರಣ ದಾಖಲಿಸಲು ನ್ಯಾಯಮೂರ್ತಿಗಳು ಆದೇಶಿಸಿದ್ದಾರೆ. ಇದನ್ನೂ ಓದಿ: ಬಾಣಂತಿಯರ ಸಾವು ಕೇಸ್ – ಪ್ರಕರಣದಲ್ಲಿ ನನ್ನ ತಪ್ಪಿದ್ರೆ ರಾಜೀನಾಮೆ ಕೊಡಲು ಸಿದ್ಧ: ದಿನೇಶ್ ಗುಂಡೂರಾವ್

ಬಳ್ಳಾರಿ ಲೋಕಾಯುಕ್ತ ಅಧಿಕಾರಿಗಳಿಗೆ ತನಿಖೆ ನಡೆಸುವ ಹೊಣೆ ನೀಡಲಾಗಿದೆ. ಸರ್ಚ್ ವಾರೆಂಟ್ ಪಡೆದು ಘಟನೆ ನಡೆದ ಆಸ್ಪತ್ರೆ, ಔಷಧ ಉಗ್ರಾಣ ತಪಾಸಣೆ ನಡೆಸಿ ವರದಿ ಸಲ್ಲಿಸಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಬಾಣಂತಿಯರ ಸರಣಿ ಸಾವು ಕೇಸ್ – ಬಳ್ಳಾರಿ ಜಿಲ್ಲಾಸ್ಪತ್ರೆ ಮೇಲೆ ‘ಲೋಕಾ’ ದಾಳಿ

ಇದರೊಂದಿಗೆ ಇತರ ಜಿಲ್ಲೆಗಳಲ್ಲಿ ಇಂತಹ ದುರ್ಘಟನೆ ನಡೆಯುವ ಸಾಧ್ಯತೆ ಇದೆಯೇ ಎಂಬುದರ ಕುರಿತು ಮುನ್ನೆಚ್ಚರಿಕೆಯಾಗಿ ತಪಾಸಣೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿಗಳು ಹಾಗೂ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

Share This Article