ಗಣೇಶ ಪೂಜೆ ವೇಳೆ ಮುಖ್ಯ ಶಿಕ್ಷಕನಿಂದ ವಿದ್ಯಾರ್ಥಿನಿಗೆ ಕಿರುಕುಳ

Public TV
1 Min Read

ಭುವನೇಶ್ವರ: ಶಾಲೆಯಲ್ಲಿ ಗಣೇಶ ಪೂಜೆ ನಡೆಯುತ್ತಿರುವ ಸಂದರ್ಭದಲ್ಲಿ 8ನೇ ತರಗತಿ ವಿದ್ಯಾರ್ಥಿನಿಗೆ ಶಾಲೆಯ ಮುಖ್ಯ ಶಿಕ್ಷಕ ಕಿರುಕುಳ ನೀಡಿರುವ ಘಟನೆ ಓಡಿಶಾದಲ್ಲಿ ನಡೆದಿದೆ.

ಪರಾರಿಯಾಗಿರುವ ಆರೋಪಿ ಮುಖ್ಯ ಶಿಕ್ಷಕನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಶಾಲೆಯಲ್ಲಿ ಗಣೇಶ ಪೂಜೆಯನ್ನು ನೆರವೇರಿಸುತ್ತಿರುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೆಪ್ಟೆಂಬರ್ 2ರಂದು ಮಧ್ಯಾಹ್ನ 2.30ರ ಸುಮಾರಿಗೆ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಗಣೇಶನ ಪೂಜೆ ನಡೆಯುತ್ತಿತ್ತು. ಪೂಜೆಯಲ್ಲಿ ಭಾಗವಹಿಸಿದ್ದ ಮುಖ್ಯ ಶಿಕ್ಷಕ 8ನೇ ತರಗತಿಯಲ್ಲಿ ಓದುತ್ತಿರುವ ಅಪ್ರಾಪ್ತ ಬಾಲಕಿಯ ಮುಗ್ಧತೆಯನ್ನು ಬಳಸಿಕೊಂಡು ಕೆಟ್ಟದಾಗಿ ವರ್ತಿಸಿದ್ದಾನೆ. ಈ ಕುರಿತು ಗ್ರಾಮಸ್ಥರಿಗೆ ತಿಳಿಸಿದರೂ ಆರೋಪಿ ಪತ್ತೆಯಾಗಲಿಲ್ಲ. ಹೀಗಾಗಿ ಸಂತ್ರಸ್ತ ವಿದ್ಯಾರ್ಥಿನಿ ತನ್ನ ಪೋಷಕರೊಂದಿಗೆ ಪೊಲೀಸ್ ಠಾಣೆಗೆ ಆಗಮಿಸಿ ಮುಖ್ಯ ಶಿಕ್ಷಕನ ವಿರುದ್ಧ ದೂರು ನೀಡಿದ್ದಾಳೆ ಎಂದು ಎಸ್‍ಡಿಪಿಓ ಎಸ್.ಟಿಗ್ಗಾ ತಿಳಿಸಿದ್ದಾರೆ.

ಆರೋಪಿ ಪರಾರಿಯಾಗಿದ್ದು, ಪತ್ತೆ ಹಚ್ಚಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪೋಕ್ಸೊ ಕಾಯ್ದೆಯಲ್ಲದೆ, ಆರೋಪಿ ಮುಖ್ಯ ಶಿಕ್ಷಕನ ವಿರುದ್ಧ ಭಾರತೀಯ ದಂಡ ಸಂಹಿತೆ(ಐಪಿಸಿ) ಹಾಗೂ ಎಸ್‍ಸಿ, ಎಸ್‍ಟಿ ಕಾಯ್ದೆಯ ವಿಭಾಗಗಳಡಿ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *