ಗದಗ: ಊಟ, ನೀರು ಇಲ್ಲದೇ ಮುಳ್ಳಿನ ಕಂಠಿಯ ಪೊದೆಯಲ್ಲಿ ಬಿದ್ದು ನರಳಾಡುತ್ತಿದ್ದ ವೃದ್ಧೆಯನ್ನು ಪೊಲೀಸರು ಆಸ್ಪತ್ರೆಗೆ ಸೇರಿಸುವ ಮೂಲಕ ಮಾನವೀಯತೆ ಮೆರೆದಿರುವ ಘಟನೆ ನಗರದ ಬೆಟಗೇರಿಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಸೆಟ್ಲಮೆಂಟ್ ಬಸ್ ನಿಲ್ದಾಣದ ಬಳಿ ಮಂಗಳವಾರ ರಾತ್ರಿ ಮುಳ್ಳಿನ ಗಿಡದ ಮಧ್ಯದಲ್ಲಿ ವೃದ್ಧೆಯೊಬ್ಬರು ಬಿದ್ದು ನರಳಾಡುತ್ತಿದ್ದ ಸ್ಥಿತಿಯನ್ನು ನೋಡಿದ ಸ್ಥಳೀಯರು ಬೆಟಗೇರಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಬಂದ ಬೆಟಗೇರಿ ಠಾಣೆಯ ಪಿಎಸ್ಐ ಮಲ್ಲಪ್ಪ ಮಡ್ಡಿ ಹಾಗೂ ಸಿಬ್ಬಂದಿ ಕೂಡಲೇ ಆಂಬುಲೆನ್ಸ್ ವ್ಯವಸ್ಥೆ ಮಾಡಿ ವೃದ್ಧೆಯನ್ನು ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.
ಸಮಸ್ಯೆಗೆ ಕೂಡಲೇ ಸ್ಪಂದಿಸಿದ ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಅಸ್ವಸ್ಥ ವೃದ್ಧೆ ಮಾತನಾಡುವ ಸ್ಥಿತಿಯಲ್ಲಿಯೂ ಸಹ ಇಲ್ಲದ ಕಾರಣ ಅವರ ಕುರಿತು ಮಾಹಿತಿ ಲಭ್ಯವಾಗಿಲ್ಲ. ಸದ್ಯ ಅವರನ್ನು ಗದಗ್ ನ ಜಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗದಗನ ಬೆಟಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.