ಲಾರಿ ಟ್ರ್ಯಾಕ್ಟರ್ ಮುಖಾಮುಖಿ ಡಿಕ್ಕಿ ಓರ್ವ ಸಾವು, ಮೂವರಿಗೆ ಗಂಭೀರ ಗಾಯ

Public TV
1 Min Read

ಚಾಮರಾಜನಗರ: ಲಾರಿ ಮತ್ತು ಟ್ರ್ಯಾಕ್ಟರ್ ನಡುವೆ ಮುಖಾಮುಖಿ ಡಿಕ್ಕಿ ಪರಿಣಾಮ ಓರ್ವ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮೂವರಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಾಮರಾಜನಗರ ತಾಲೂಕಿನ ಕಮರವಾಡಿ ಗ್ರಾಮದ ಬಳಿ ನಡೆದಿದೆ.

ಮೈಸೂರು ಜಿಲ್ಲೆಯ ಬನ್ನೂರು ಗ್ರಾಮದ ನಂಜುಂಡಿ ಮೃತ ದುರ್ದೈವಿ. ಇಂದು ಬೆಳಿಗ್ಗೆ ನಸುಕಿನ ಜಾವ ತಮಿಳುನಾಡಿನ ಲಾರಿ ಸಂತೇ ಮರಹಳ್ಳಿ ಮಾರ್ಗವಾಗಿ ಮೈಸೂರಿಗೆ ತೆರಳುತ್ತಿತ್ತು. ಟ್ರ್ಯಾಕ್ಟರ್ ಲಾರಿಯ ವಿರುದ್ಧ ದಿಕ್ಕಿನಿಂದ ಅಂದರೆ ಮೈಸೂರಿನಿಂದ ಸಂತೇಮರಹಳ್ಳಿ ಮಾರ್ಗವಾಗಿ ಬರುತ್ತಿತ್ತು. ಈ ಸಂದರ್ಭದಲ್ಲಿ ಎರಡು ವಾಹನಗಳು ಕಮರವಾಡಿ ಗ್ರಾಮದ ಬಳಿ ಬರುತ್ತಿದ್ದಂತೆ ಮುಖಾಮುಖಿ ಡಿಕ್ಕಿ ಹೊಡೆದಿವೆ. ಪರಿಣಾಮ ಟ್ರ್ಯಾಕ್ಟರ್ ನಲ್ಲಿ ಪ್ರಯಾಣಿಸುತ್ತಿದ್ದ ನಂಜುಂಡಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಿಂದ ಲಾರಿ ಮತ್ತು ಟ್ರ್ಯಾಕ್ಟರ್ ರಸ್ತೆ ಪಕ್ಕಕ್ಕೆ ಉರುಳಿ ಬಿದ್ದಿವೆ.

ಅಪಘಾತದಲ್ಲಿ ಟ್ರ್ಯಾಕ್ಟರ್ ಚಾಲಕ ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಮೈಸೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಘಟನೆ ಸಂಬಂಧ ಸಂತೇ ಮರಹಳ್ಳಿ ಠಾಣೆ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಲಾರಿ ಚಾಲಕ ಪರಾರಿಯಾಗಿದ್ದಾನೆ.

Share This Article
Leave a Comment

Leave a Reply

Your email address will not be published. Required fields are marked *