ಟಿಪ್ಪು ಜಯಂತಿಗೆ ಮಡಿಕೇರಿಯಲ್ಲಿ ತೀವ್ರ ವಿರೋಧ – ಅಂಗಡಿಗಳು ಬಂದ್, ಮುಖ್ಯರಸ್ತೆಗೆ ಮರ ಕಡಿದು ಆಕ್ರೋಶ

Public TV
1 Min Read

ಮಡಿಕೇರಿ: ರಾಜ್ಯ ಸರ್ಕಾರ ನಿರ್ಧರಿಸಿರುವ ಟಿಪ್ಪು ಜಯಂತಿ ಆಚರಣೆಗೆ ಕೊಡಗು ಜಿಲ್ಲೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ.

ಟಿಪ್ಪು ಜಯಂತಿ ಆಚರಣೆಗೆ ಕೊಡಗಿನಲ್ಲಿ ಭಾರೀ ವಿರೋಧ ವ್ಯಕ್ತವಾಗಿದ್ದು, ಇಂದು ಕೊಡಗು ಬಂದ್‍ಗೆ ಟಿಪ್ಪು ಜಯಂತಿ ಆಚರಣಾ ವಿರೋಧಿ ಸಮಿತಿ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆಯಿಂದಲೇ ಮಂಜಿನ ನಗರಿ ಮಡಿಕೇರಿಯ ಅಂಗಡಿ ಮುಂಗಟ್ಟುಗಳು ಸ್ವಯಂ ಪ್ರೇರಿತವಾಗಿ ಬಂದ್ ಆಗಿವೆ. ಅಲ್ಲದೆ ಖಾಸಗಿ ಬಸ್‍ನವರು ಪ್ರಯಾಣಿಕರ ಹಿತದೃಷ್ಠಿಯಿಂದ ಬಸ್ ಸಂಚಾರ ಮಾಡುವುದಿಲ್ಲವೆಂದು ತಿಳಿಸಿದ್ದಾರೆ. ಇನ್ನು ಅಟೋ ಚಾಲಕರು, ಟ್ಯಾಕ್ಸಿ ಚಾಲಕರು ಬಂದ್‍ಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ.

ಮಡಿಕೇರಿ ತಾಲೂಕಿನ ಕಡಗದಳು ಗ್ರಾಮದಲ್ಲಿ ಕಳೆದ ರಾತ್ರಿ ಮುಖ್ಯ ರಸ್ತೆಗಳಿಗೆ ಮರಗಳನ್ನು ಕಡಿದು ಹಾಕುವ ಮೂಲಕ ರಸ್ತೆ ಸಂಚಾರಕ್ಕೆ ಅಡ್ಡಿಯುಂಟು ಮಾಡಲಾಗಿತ್ತು. ತಕ್ಷಣವೇ ಅರಣ್ಯ ಇಲಾಖೆ ಸಿಬ್ಬಂದಿ ಮರಗಳನ್ನು ತೆರವುಗೊಳಿಸಿದ್ದಾರೆ.

ಜಿಲ್ಲೆಯ ಎಲ್ಲಾ ಕಡೆಗಳಲ್ಲಿ ಪೋಲಿಸರೇ ಹೆಚ್ಚಾಗಿ ಕಂಡು ಬರುತ್ತಿದಾರೆ. ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ. ಇದರ ಬೆನ್ನಲ್ಲೇ ಬಿಜೆಪಿ ಕರಾಳ ದಿನ ಹಾಗೂ ಕಳೆದ ಬಾರಿ ಟಿಪ್ಪು ಜಯಂತಿ ಆಚರಣೆ ವೇಳೆ ಮೃತಪಟ್ಟ ಕುಟ್ಟಪ್ಪ ಹುತಾತ್ಮ ದಿನವನ್ನು ಆಚರಿಸಲು ನಿರ್ಧರಿಸಿದೆ.

ವಿವಾದದ ಮಧ್ಯೆ ಸರ್ಕಾರ ಟಿಪ್ಪು ಜಯಂತಿ ಆಚರಣೆ ಮಾಡ್ತಿದ್ದು, ಮಡಿಕೇರಿಯ ಕೋಟೆ ಸಭಾಂಗಣದಲ್ಲಿ ಟಿಪ್ಪು ಜಯಂತಿಗೆ ಸಿದ್ಧತೆ ಪೂರ್ಣಗೊಂಡಿದೆ. ಸಭಾಂಗಣದ ಸುತ್ತ ಪೊಲೀಸ್ ಭದ್ರತೆ ಮಾಡಲಾಗಿದೆ. ಅದರ ಜೊತೆಗೆ ಕಾರ್ಯಕ್ರಮ ನಡೆಯುವ ಟಿಪ್ಪು ಸಭಾಂಗಣದ ಸುತ್ತ 3 ಡ್ರೋನ್ ಕ್ಯಾಮೆರಾಗಳ ಬಳಕೆ ಮಾಡಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *