ಮಡೆಸ್ನಾನವೂ ಇಲ್ಲ – ಎಡೆಸ್ನಾನವೂ ಇಲ್ಲ ಪಲಿಮಾರುಶ್ರೀ ದಿಟ್ಟ ನಿರ್ಧಾರ

Public TV
1 Min Read

ಉಡುಪಿ: ಕೃಷ್ಣಮಠದ ಇತಿಹಾಸದಲ್ಲೇ ಪರ್ಯಾಯ ಪಲಿಮಾರು ವಿದ್ಯಾಧೀಶ ಸ್ವಾಮೀಜಿಗಳು ಕ್ರಾಂತಿಕಾರಿ ಮತ್ತು ದಿಟ್ಟ ನಿರ್ಧಾರ ತೆಗೆದುಕೊಂಡಿದ್ದು, ಈ ಬಾರಿಯಿಂದ ಷಷ್ಠಿಯಂದು ಮಠದ ಸುಬ್ರಹ್ಮಣ್ಯ ಗುಡಿಯ ಮುಂದೆ ಎಂಜಲೆಲೆಯ ಮಡೆಸ್ನಾನವೂ ಹಾಗೂ ದೇವರ ಪ್ರಸಾದ ಎಡೆಸ್ನಾನಕ್ಕೆರಡಕ್ಕೂ ವಿದಾಯ ಹೇಳಿದ್ದಾರೆ.

ಪರ್ಯಾಯ ಪಲಿಮಾರು ಮಠಾಧೀಶರ ಮಹತ್ವದ ನಿರ್ಧಾರ ಇದಾಗಿದೆ. ಆಸಕ್ತ ಭಕ್ತರಿಂದ ಈ ಬಾರಿ ಕೇವಲ ಉರುಳುಸೇವೆ ಮಾತ್ರ ನಡೆದಿದೆ. ಉರುಳು ಸೇವೆ ಮಾಡಿದವರ ಸಂಖ್ಯೆಯೂ ಕಡಿಮೆಯಾಗಿತ್ತು. ಕಳೆದ ನಾಲ್ಕು ವರ್ಷದಿಂದ ಪೇಜಾವರ ಶ್ರೀಗಳ ಸಲಹೆಯಂತೆ ಮಠದಲ್ಲಿ ಎಡೆಸ್ನಾನ ನಡೆಯುತ್ತಿತ್ತು. ಆಗಲೇ ಭಕ್ತರ ಸಂಖ್ಯೆ ಕುಸಿದಿತ್ತು.

ಈ ಕುರಿತು ಪ್ರತಿಕ್ರಿಯಿಸಿರುವ ಪರ್ಯಾಯ ಪಲಿಮಾರು ಸ್ವಾಮೀಜಿಗಳು, ಅನಗತ್ಯ ವಿವಾದ ಬೇಡವೆಂದು ಈ ನಿರ್ಧಾರಕ್ಕೆ ಬಂದಿದ್ದೇವೆ. ಭಕ್ತರು ದೇವರಿಗೆ ಪ್ರದಕ್ಷಿಣೆ ಬಂದು ಅರ್ಚನೆ ಪೂಜೆ ಸಲ್ಲಿಸಲಿ. ಎಡೆಸ್ನಾನದಿಂದಲೂ ಕೆಲವರಿಗೆ ಬೇಸರವಾಗಿದೆ. ತಿನ್ನುವ ಅನ್ನದ ಮೇಲೆ ಉರುಳು ಸೇವೆ ಕೆಲವರಿಗೆ ಇಷ್ಟವಿಲ್ಲ. ಕೃಷ್ಣಮಠದ ಭೋಜನ ಶಾಲೆಯಲ್ಲೇ ಪ್ರಸಾದಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಪಲಿಮಾರು ಸ್ವಾಮಿಗಳ ನಿರ್ಧಾರವನ್ನು ಪೇಜಾವರ ಶ್ರೀಗಳು ಸ್ವಾಗತಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಅವರು, ನಾನು ಪಲಿಮಾರು ಸ್ವಾಮಿಗಳ ನಿರ್ಧಾರವನ್ನು ಸ್ವಾಗತಿಸುತ್ತೇನೆ. ಜಾತಿಯ ಹೆಸರಲ್ಲಿ ವಿರೋಧ ಬಂದ್ರೆ ಸಂಘರ್ಷವಾಗುತ್ತದೆ. ದೇವಸ್ಥಾನದಲ್ಲಿ ಮಡೆಸ್ನಾನ – ಎಡೆಸ್ನಾನ ಅನಿವಾರ್ಯ ಅಲ್ಲ. ಹಿಂದೂ ಧರ್ಮಕ್ಕೆ ಇದರಿಂದ ಯಾವುದೇ ಹಾನಿಯಿಲ್ಲ. ದೇವಸ್ಥಾನದ ಉತ್ಸವ ಪೂಜೆ ಶಾಸ್ತ್ರಬದ್ಧವಾಗಿ ನಡೆದರೆ ಸಾಕು. ವಿವಾದ ಭಿನ್ನಾಭಿಪ್ರಾಯದ ಆಚರಣೆಗಳು ನಿಂತರೆ ಹಿಂದೂ ಧರ್ಮಕ್ಕೆ ನಷ್ಟವಿಲ್ಲ. ಇಂತಹ ಆಚರಣೆ ನಡೆಯಬೇಕಾಗಿಲ್ಲವೆಂದು ಹೇಳಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *