ಡಿಕೆ ಶಿವಕುಮಾರ್‌ಗೆ 14 ದಿನ ನ್ಯಾಯಾಂಗ ಬಂಧನ ಮತ್ತೆ ಆಸ್ಪತ್ರೆಗೆ ದಾಖಲು

Public TV
1 Min Read

ನವದೆಹಲಿ: ಅಕ್ರಮ ಹಣಕಾಸು ವ್ಯವಹಾರದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರಿಗೆ ಕೋರ್ಟ್ ಒಂದು ದಿನ ನ್ಯಾಯಾಂಗ ಬಂಧನ ವಿಧಿಸಿದೆ.

ಇಂದು ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ರಾಮ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿವಕುಮಾರ್ ಅವರನ್ನು ಸಂಜೆ 4 ಗಂಟೆಗೆ  ಇಡಿ ಅಧಿಕಾರಿಗಳು ರೋಸ್ ಅವೆನ್ಯೂ ನ್ಯಾಯಾಲಯ ಸಮುಚ್ಚಯದ ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸಿದರು.

ಅನಾರೋಗ್ಯದ ಹಿನ್ನೆಲೆಯಲ್ಲಿ ಜಾಮೀನು ಮಂಜೂರು ಮಾಡಬೇಕೆಂದು ಡಿಕೆಶಿ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ, ಮುಕುಲ್ ರೋಹ್ಟಗಿ ವಾದ ಮಂಡಿಸಿದ್ದರೆ, ವಿಚಾರಣೆ ಪೂರ್ಣಗೊಂಡಿಲ್ಲ. ಸೆ.13 ರಂದು ನಾವು 4 ದಿನ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದೇವು. ನಮ್ಮ ಕಸ್ಟಡಿಗೆ ನೀಡಿದ್ದರೂ ಶಿವಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದರಿಂದ ವಿಚಾರಣೆ ನಡೆಸಿಲ್ಲ. ಹೀಗಾಗಿ ಜಾಮೀನು ಮಂಜೂರು ಮಾಡಬೇಡಿ ಎಂದು ಇಡಿ ಪರ ವಕೀಲ ಹೆಚ್ಚುವರಿ ಸಾಲಿಸಿಟರ್ ಜನರಲ್ ನಟರಾಜ್ ವಾದಿಸಿದರು. ಅಷ್ಟೇ ಅಲ್ಲದೇ ನನಗೆ ವಾದ ಮಾಡಲು 1 ಗಂಟೆ ಸಮಯ ಬೇಕು ಎಂದು ನಟರಾಜ್ ಮನವಿ ಮಾಡಿದರು.

ಎರಡು ಕಡೆಯ ವಾದ ಆಲಿಸಿದ ನ್ಯಾ. ಅಜಯ್ ಕುಮಾರ್ ಕುಹಾರ್ ಅ.1ರವರೆಗೆ ನ್ಯಾಯಾಂಗ ಬಂಧನ ವಿಧಿಸಿದರು. ತಮ್ಮ ಆದೇಶದಲ್ಲಿ ಕೂಡಲೇ ಡಿಕೆಶಿಯನ್ನು ಆಸ್ಪತ್ರೆಗೆ ದಾಖಲಿಸಬೇಕು. ಒಂದು ವೇಳೆ ಆರೋಗ್ಯ ಸರಿ ಇದ್ದು ಡಿಸ್ಚಾರ್ಜ್ ಮಾಡಲು ವೈದ್ಯರು ಅನುಮತಿ ನೀಡಿದರೆ ತಿಹಾರ್ ಜೈಲಿಗೆ ಕಳುಹಿಸಬೇಕು ಎಂದು ಸೂಚಿಸಿ ಜಾಮೀನು ಅರ್ಜಿಯ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದರು

Share This Article
Leave a Comment

Leave a Reply

Your email address will not be published. Required fields are marked *