ಮಹಾಂತೇಶ್ ಬೀಳಗಿ ನಿಧನಕ್ಕೆ ಸಿಎಂ ಸೇರಿ ರಾಜಕೀಯ ಗಣ್ಯರ ಸಂತಾಪ

3 Min Read

ಬೆಂಗಳೂರು: ಮಹಾಂತೇಶ್ ಬೀಳಗಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ (Siddaramaiah) ಸೇರಿ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ರಸ್ತೆ ಅಪಘಾತದಲ್ಲಿ ನಿಧನರಾದ ಸುದ್ದಿ ನೋವುಂಟು ಮಾಡಿದೆ. ಹಲವು ಜಿಲ್ಲೆಗಳಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ, ಜಿಲ್ಲಾಧಿಕಾರಿಯಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿದ್ದರು. ಮಹಾಂತೇಶ್ ಅವರು ಕರ್ತವ್ಯ ನಿರ್ವಹಿಸುತ್ತಿದ್ದ ಎಲ್ಲ ಕಡೆಗಳಲ್ಲಿಯೂ ತಮ್ಮ ದಕ್ಷತೆಯಿಂದಾಗಿ ಹೆಜ್ಜೆ ಗುರುತುಗಳನ್ನು ಉಳಿಸಿ ಹೋಗಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ದೊರಕಲೆಂದು ಪ್ರಾರ್ಥಿಸುತ್ತೇನೆ ಹಾಗೂ ಅವರ ದುಃಖತಪ್ತ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಬರೆದುಕೊಂಡಿದ್ದಾರೆ.ಇದನ್ನೂ ಓದಿ: ಕಾರು ಅಪಘಾತ – ಐಎಎಸ್‌ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು

ಡಿಸಿಎಂ ಡಿಕೆ ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದು, ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿಗಳಾದ ಮಹಾಂತೇಶ್ ಬೀಳಗಿ ಅವರು ಕಾರು ಅಪಘಾತದಲ್ಲಿ ವಿಧಿವಶರಾಗಿರುವುದು ಅತ್ಯಂತ ದುಃಖಕರ ಸಂಗತಿಯಾಗಿದೆ. ಮಹಾಂತೇಶ್ ಬೀಳಗಿ ಅವರು ಬೆಸ್ಕಾಂ ಎಂಡಿ ಸಹ ಆಗಿದ್ದರು, ಜೊತೆಗೆ ದಾವಣಗೆರೆ, ಉಡುಪಿ ಸೇರಿದಂತೆ ಕರ್ನಾಟಕದ ಬೇರೆ ಬೇರೆ ಕಡೆ ಕಾರ್ಯನಿರ್ವಹಿಸಿದ್ದರು. ಜನಪರ ಕಾರ್ಯಗಳ ಮೂಲಕ ಹೆಸರುವಾಸಿಯಾಗಿದ್ದ ದಕ್ಷ ಅಧಿಕಾರಿಯ ನಿಧನ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬದವರಿಗೆ ನೋವು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಇನ್ನೂ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಎಕ್ಸ್ ಖಾತೆಯಲ್ಲಿ ಮಹಾಂತೇಶ್ ಬೀಳಗಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ರಾಜ್ಯದ ಹಿರಿಯ ಐಎಎಸ್ ಅಧಿಕಾರಿ ಶ್ರೀ ಮಹಾಂತೇಶ್ ಬೀಳಗಿ ಅವರು ಕಲಬುರ್ಗಿ ಸಮೀಪ ಸಂಭವಿಸಿರುವ ಭೀಕರ ರಸ್ತೆ ಅಪಘಾತದಲ್ಲಿ ವಿಧಿವಶರಾದ ಸುದ್ದಿ ಅತೀವ ಆಘಾತವನ್ನು ಉಂಟುಮಾಡಿದೆ. ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಶ್ರೀ ಮಹಾಂತೇಶ್ ಬೀಳಗಿ ಅವರು ಈ ಹಿಂದೆ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು. ಅವರ ಅಕಾಲಿಕ ನಿಧನದಿಂದ ರಾಜ್ಯ ಒಬ್ಬ ಹಿರಿಯ, ದಕ್ಷ, ಮತ್ತು ಉತ್ತಮ ಅಧಿಕಾರಿಯನ್ನು ಕಳೆದುಕೊಂಡಿದೆ. ಅಗಲಿದ ಹಿರಿಯ ಅಧಿಕಾರಿಯ ಆತ್ಮಕ್ಕೆ ಚಿರಶಾಂತಿಯನ್ನು ಪ್ರಾರ್ಥಿಸುತ್ತಾ, ಅವರ ಕುಟುಂಬದ ಸದಸ್ಯರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ನನ್ನ ತೀವ್ರ ಸಂತಾಪಗಳನ್ನು ಸಲ್ಲಿಸುತ್ತೇನೆ. ಈ ಭೀಕರ ಅಪಘಾತದಲ್ಲಿ ಶ್ರೀಯುತ ಬೀಳಗಿ ಅವರೊಂದಿಗೆ ಪ್ರಯಾಣಿಸುತ್ತಿದ್ದ ಇನ್ನೂ ಇಬ್ಬರು ಕೂಡ ಸಾವನ್ನಪ್ಪಿದ್ದು, ಅವರಿಗೂ ದೇವರು ಸದ್ಗತಿಯನ್ನು ಕರುಣಿಸಲಿ, ಅವರ ಕುಟುಂಬದ ಸದಸ್ಯರಲ್ಲಿ ಕೂಡ ನನ್ನ ಸಂತಾಪಗಳನ್ನು ವ್ಯಕ್ತಪಡಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಸಂತಾಪ ಸೂಚಿಸಿದ್ದಾರೆ. ರಾಜ್ಯದ ಹಿರಿಯ ಐಎಎಸ್ ಅಧಿಕಾರಿ ಕರ್ನಾಟಕ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮಹಾಂತೇಶ ಬೀಳಗಿ ನಿಧನ ಹೊಂದಿರುವ ಸುದ್ದಿ ಕೇಳಿ ಆಘಾತವಾಗಿದೆ. ಅತ್ಯಂತ ಸರಳ ಹಾಗೂ ಪ್ರಾಮಾಣಿಕ ಅಧಿಕಾರಿಯಾಗಿದ್ದ ಅವರು, ದಾವಣಗೆರೆ ಜಿಲ್ಲಾಧಿಕಾರಿಯಾಗಿ, ಬೆಸ್ಕಾಂ ಎಂಡಿಯಾಗಿ ತಮ್ಮ ಛಾಪು ಮೂಡಿಸಿದ್ದರು. ಅವರ ಅಗಲಿಕೆಯಿಂದ ರಾಜ್ಯ ಒಬ್ಬ ಪ್ರಾಮಾಣಿಕ ಮತ್ತು ದಕ್ಷ ಅಧಿಕಾರಿಯನ್ನು ಕಳೆದುಕೊಂಡಂತಾಗಿದೆ. ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ನೀಡಲಿ, ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಟಿ20 ವಿಶ್ವಕಪ್‌ | ಬೆಂಗಳೂರಿನಲ್ಲಿ ಪಂದ್ಯವಿಲ್ಲ – 8 ಮೈದಾನಗಳಲ್ಲಿ ಟೂರ್ನಿ

Share This Article