40ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿದ್ದ ಬಸ್ಸಿಗೆ ಬೆಂಕಿ – ಬೆಂಗಳೂರಿಗೆ ಬರ್ತಿದ್ದ ಬಸ್ ಸುಟ್ಟು ಕರಕಲು

Public TV
1 Min Read

ತುಮಕೂರು: ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಖಾಸಗಿ ಬಸ್ ಸುಟ್ಟು ಕರಕಲಾಗಿದ್ದರೂ ಪ್ರಯಾಣಿಕರು ಅಪಾಯದಿಂದ ಪಾರಾಗಿರುವ ಘಟನೆ ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಇಂದು ಬೆಳಗ್ಗೆ ಸುಮಾರು 5 ಗಂಟೆಯ ವೇಳೆ ಈ ಘಟನೆ ನಡೆದಿದೆ. ಶುಕ್ರವಾರ ಸಂಜೆ 6:15ಕ್ಕೆ ಎಸ್‍ಆರ್‍ಎಸ್ ಬಸ್ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿಯಿಂದ ಬೆಂಗಳೂರಿಗೆ ಬರುತಿತ್ತು.

ಇಂದು ಬೆಳಗ್ಗೆ 7 ಗಂಟೆಗೆ ಬೆಂಗಳೂರಿಗೆ ಬಸ್ ತಲುಪಬೇಕಿತ್ತು. ಆದರೆ ತುಮಕೂರಿನಲ್ಲಿ ಆಕಸ್ಮಿಕವಾಗಿ ಬಸ್‍ಗೆ ಬೆಂಕಿ ಹೊತ್ತಿಕೊಂಡಿದೆ. ಮುದ್ದೆಬಿಹಾಳ ಮೂಲದ ಪ್ರಯಾಣಿಕರೊಬ್ಬರು ಬಸ್ಸಿಗೆ ಬೆಂಕಿ ಹೊತ್ತಿಕೊಂಡಿರುವುದನ್ನು ನೋಡಿ ನಿದ್ದೆಯಲ್ಲಿದ್ದ ಉಳಿದ ಪ್ರಯಾಣಿಕರನ್ನು ಎಬ್ಬಿಸಿ ಕೆಳಗಿಳಿಸಿದ್ದಾರೆ. ಇದರಿಂದಾಗಿ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.

ಪ್ರಯಾಣಿಕರು ಪೊಲೀಸ್ ಮತ್ತು ಅಗ್ನಿಶಾಮಕ ದಳದವರಿಗೆ ಫೋನ್ ಮಾಡಿ ಮಾಹಿತಿ ತಿಳಿಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳದವರು ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಸ್ಸಿನಲ್ಲಿ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಸದ್ಯಕ್ಕೆ ಅವರೆಲ್ಲರೂ ಬೆಂಕಿ ಅವಘಡದಿಂದ ಪಾರಾಗಿದ್ದಾರೆ. ಬೆಂಕಿಯ ರಭಸಕ್ಕೆ ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *