ವಿಧಾನಸೌಧದಲ್ಲಿ ಕರ್ತವ್ಯ ಲೋಪ ಎಸಗಿದ ಪೊಲೀಸರನ್ನೂ ಸಸ್ಪೆಂಡ್‌ ಮಾಡಿ: ಅಶೋಕ್‌ ಆಗ್ರಹ

Public TV
2 Min Read

– ಯಾರನ್ನೂ ರಕ್ಷಿಸುತ್ತಿಲ್ಲ ಅನ್ನೋದಾದ್ರೆ FSL ವರದಿ ಬಿಡುಗಡೆ ಮಾಡಲಿ: ಒತ್ತಾಯ

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಮೂವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಆಧರಿಸಿ ಅಶೋಕ್ ನಗರ ಪೊಲೀಸರು ದೆಹಲಿ ಮೂಲದ ಇಲ್ತಾಜ್, ಆರ್‌.ಟಿ ನಗರದ ಮುನಾವರ್ ಹಾಗೂ ಬ್ಯಾಡಗಿಯ ಮೊಹಮದ್ ಶಫಿ ನಾಶಿಪುಡಿ ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ನಾಯಕ ಆರ್. ಅಶೋಕ್‌ ಸೋಶಿಯಲ್‌ ಮೀಡಿಯಾ ಎಕ್ಸ್‌ ಖಾತೆಯಲ್ಲಿ ಪ್ರತಿಕ್ರಿಯಿಸಿದ್ದು, ಈ ಪ್ರಕರಣದಲ್ಲಿ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಅವರನ್ನೂ ಶಾಮೀಲು ಮಾಡಬೇಕು. ಜೊತೆಗೆ 100 ಜನ ಬೆಂಬಲಿಗರಿಗೆ ವಿಧಾನಸೌಧದ ಒಳಗೆ ಪ್ರವೇಶ ನೀಡಿ ಕರ್ತವ್ಯ ಲೋಪ ಎಸಗಿದ ಪೊಲೀಸ್ ಅಧಿಕಾರಿಗಳನ್ನೂ ಅಮಾನತು ಮಾಡಿ ವಿಚಾರಣೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಖಾಸಗಿ ಫೋರೆನ್ಸಿಕ್ ವರದಿ ತರಿಸಿ ಬಹಿರಂಗಪಡಿಸಿದ ಬಿಜೆಪಿ ನಡೆ ದೇಶದ್ರೋಹದ ಕೆಲಸ: ಪ್ರಿಯಾಂಕ್‌ ಖರ್ಗೆ

ಅಶೋಕ್‌ ಎಕ್ಸ್‌ ಖಾತೆಯಲ್ಲಿ ಏನಿದೆ?
ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ವರದಿ ಬಂದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಕಾಂಗ್ರೆಸ್‌ ಸರ್ಕಾರ ಕಡೆಗೂ ಜನಾಕ್ರೋಶಕ್ಕೆ ಮಣಿದು ಮೂರು ಆರೋಪಿಗಳನ್ನು ಬಂಧಿಸಿದೆ.

FSL ವರದಿಯಲ್ಲಿ ಘೋಷಣೆ ಕೂಗಿದ್ದು ಧೃಢಪಟ್ಟ ನಂತರವೇ ಈ ಮೂವರು ಆರೋಪಿಗಳ ಬಂಧನವಾಗಿರುವುದು ಸ್ಪಷ್ಟಾಗಿದ್ದರೂ, ಸರ್ಕಾರ ಇನ್ನೂ FSL ವರದಿ ಬಹಿರಂಗ ಮಾಡದಿರುವುದು ಅನೇಕ ಅನುಮಾನಗಳಿಗೆ ಎಡೆ ಮಾಡಿಕೊಡುತ್ತಿದೆ. ಸರ್ಕಾರ ಏನನ್ನೂ ಮುಚ್ಚಿಡುತ್ತಿಲ್ಲ, ಯಾರನ್ನೂ ರಕ್ಷಿಸುತ್ತಿಲ್ಲ ಎನ್ನುವುದಾದರೆ ವರದಿ ಬಹಿರಂಗ ಮಾಡಲು ಹಿಂಜರಿಕೆ ಏಕೆ? ಇದನ್ನೂ ಓದಿ: ಪಾಕಿಸ್ತಾನ ಪರ ಘೋಷಣೆ – ಎಫ್‍ಎಸ್‍ಎಲ್ ವರದಿ ಬಹಿರಂಗಕ್ಕೆ ಬಿಜೆಪಿ ನಿಯೋಗ ಮನವಿ

ಸರ್ಕಾರ ಈ ಮೂವರು ಆರೋಪಿಗಳನ್ನು ಬಂಧಿಸಿದರೆ ಸಾಲದು, ಇವರ ಮೇಲೆ IPC ಯ ಸೆಕ್ಷನ್ 124A ಅಡಿ ದೇಶದ್ರೋಹ ಪ್ರಕರಣ ದಾಖಲಿಸಿ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಅವರನ್ನೂ ಸಹ ಈ ಪ್ರಕರಣದಲ್ಲಿ ಶಾಮೀಲು ಮಾಡಬೇಕು. ಇದರ ಜೊತೆಗೆ 25 ಜನರಿಗೆ ಪಾಸ್ ನೀಡಿ ಸುಮಾರು ನೂರು ಜನ ಬೆಂಬಲಿಗರಿಗೆ ವಿಧಾನಸೌಧದ ಒಳಗೆ ಪ್ರವೇಶ ನೀಡಿ ಕರ್ತವ್ಯ ಲೋಪ ಎಸಗಿದ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ವಿಚಾರಣೆ ನಡೆಸಬೇಕು.

ಈ ಇಡೀ ಪ್ರಕರಣ ರಾಷ್ಟ್ರೀಯ ಕಾಂಗ್ರೆಸ್‌ ಪಕ್ಷದ ದೇಶಪ್ರೇಮಕ್ಕೆ, ರಾಷ್ಟ್ರ ನಿಷ್ಠೆಗೆ ಒಂದು ಅಗ್ನಿ ಪರೀಕ್ಷೆಯಾಗಿದ್ದು, ಕಾಂಗ್ರೆಸ್ ಸರ್ಕಾರದ ನಡೆಯನ್ನ ಬರೀ ಕರ್ನಾಟಕ ಅಲ್ಲ, ಇಡೀ ದೇಶದ ಜನತೆ ಅತ್ಯಂತ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ಬರೆದುಕೊಂಡಿದ್ದಾರೆ.

Share This Article