ಎಚ್‍ಡಿಕೆ ಸರ್ಕಾರ ಸೇಫ್ ಮಾಡಲು ದಾಳ ಉರುಳಿಸಿದ ರಾಹುಲ್

Public TV
1 Min Read

– ಎಐಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆ ಆಫರ್

ನವದೆಹಲಿ: ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ಉಂಟಾಗಬಹುದಾದ ಕೆಲ ಗೊಂದಲಗಳನ್ನು ದೂರ ಮಾಡುವ ನಿಟ್ಟಿನಲ್ಲಿ ರಾಹುಲ್ ಗಾಂಧಿ ಹೊಸ ದಾಳವನ್ನು ಉರುಳಿಸಿದ್ದು, ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಆಫರ್ ನೀಡಿದ್ದಾರೆ ಎಂಬ ಮಾಹಿತಿ ಲಭಿಸಿದೆ.

ಲೋಕಸಭಾ ಚುನಾವಣೆಯಲ್ಲಿ ಉಂಟಾದ ಸೋಲಿನ ಪರಮರ್ಶೆ ಮಾಡಲು ಕರೆಯಲಾಗಿದ್ದ ಸಭೆಯಲ್ಲಿ ಮಹತ್ವದ ಚರ್ಚೆಗಳನ್ನು ನಡೆಸಿದ್ದಾರೆ. ಈ ವೇಳೆಯೇ ರಾಹುಲ್ ಗಾಂಧಿ ಅವರು, ಸಿದ್ದರಾಮಯ್ಯ ಅವರಿಗೆ ಪ್ರಧಾನ ಕಾರ್ಯದರ್ಶಿ ಆಗುವಂತೆ ಮನವಿ ಮಾಡಿದ್ದು, ರಾಷ್ಟ್ರಮಟ್ಟದಲ್ಲಿ ನಿಮ್ಮ ಕಾರ್ಯ ಪಕ್ಷ ಕಟ್ಟುವ ಹಿನ್ನೆಲೆಯಲ್ಲಿ ಬೇಕಿದೆ. ಆದ್ದರಿಂದ ನೀವು ರಾಷ್ಟ್ರ ರಾಜಕಾರಣಕ್ಕೆ ಬನ್ನಿ ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ.

ಕರ್ನಾಟಕದಲ್ಲಿ ಸಿಎಂ ಆಗಿ ಉತ್ತಮ ಆಡಳಿತ ನೀಡಿದ್ದ ಸಿದ್ದರಾಮಯ್ಯ ಅವರು, ಕೇಡಾರ್ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸುವ ಸಾಮಥ್ರ್ಯ ಹೊಂದಿದ್ದಾರೆ. ಆದ್ದರಿಂದಲೇ ಪ್ರಧಾನ ಕಾರ್ಯದರ್ಶಿಯಾಗಿ ರಾಜ್ಯವೊಂದರ ಜವಾಬ್ದಾರಿ ಹೊರುವಂತೆ ರಾಹುಲ್ ಕೇಳಿದ್ದಾರೆ. ಆದರೆ ರಾಹುಲ್ ಅವರ ಆಫರ್ ನ್ನು ನಯವಾಗಿ ಸಿದ್ದರಾಮಯ್ಯ ಅವರು ನಿರಾಕರಿಸಿದ್ದಾರೆ ಎನ್ನಲಾಗಿದೆ. ಅಲ್ಲದೇ ರಾಜ್ಯ ರಾಜಕಾರಣದಲ್ಲೇ ಮುಂದುವರಿದು ಪಕ್ಷ ಸಂಘಟನೆಯ ಭರವಸೆ ನೀಡಿದ್ದಾರೆ ಎಂಬ ಮಾಹಿತಿ ಲಭಿಸಿದೆ.

ರಾಜ್ಯ ಸಮ್ಮಿಶ್ರದಲ್ಲಿ ಹಲವು ಶಾಸಕರು ಸಿದ್ದರಾಮಯ್ಯ ಅವರೇ ನಮ್ಮ ಸಿಎಂ ಹೇಳಿಕೆ ನೀಡಿ ಗೊಂದಲ ಸೃಷ್ಟಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಮೈತ್ರಿ ಸರ್ಕಾರಕ್ಕೆ ಧಕ್ಕೆ ಆಗಲಿದೆ ಎಂಬ ಕಾರಣದಿಂದ ಸಿದ್ದರಾಮಯ್ಯ ಅವರಿಗೆ ಈ ಆಫರ್ ನೀಡಲಾಗಿದೆ ಮಾಹಿತಿ ಲಭಿಸಿದೆ. ರಾಹುಲ್ ಈ ಆಫರ್ ನೀಡಲು ದೇವೇಗೌಡರೆ ಕಾರಣ ಎನ್ನಲಾಗಿದ್ದು, ಎಚ್‍ಡಿಡಿ ಮಾತಿನಂತೆ ರಾಹುಲ್ ನಡೆದುಕೊಂಡಿದ್ದಾರೆ ಎನ್ನಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *