ಸುದೀಪ್ ಬೆನ್ನಲ್ಲೇ ದರ್ಶನ್ ಪ್ರಕರಣದ ಬಗ್ಗೆ ಉಪೇಂದ್ರ ಫಸ್ಟ್ ರಿಯಾಕ್ಷನ್

Public TV
2 Min Read

ಸ್ಯಾಂಡಲ್‌ವುಡ್ ನಟ ದರ್ಶನ್ (Darshan) ಇದೀಗ ರೇಣುಕಾಸ್ವಾಮಿ ಕೊಲೆ (Renukaswamy Case) ಪ್ರಕರಣವಾಗಿ ಅರೆಸ್ಟ್ ಆಗಿದ್ದಾರೆ.ಸುದೀಪ್ (Sudeep) ಬೆನ್ನಲ್ಲೇ ದರ್ಶನ್ ಪ್ರಕರಣದ ಬಗ್ಗೆ ಉಪೇಂದ್ರ (Upendra) ಫಸ್ಟ್ ರಿಯಾಕ್ಷನ್ ಕೊಟ್ಟಿದ್ದಾರೆ. ಸಾರ್ವಜನಿಕ ವ್ಯಕ್ತಿಯ ವಿಚಾರ, ಸಾರ್ವಜನಿಕವಾಗಿಯೇ ನಡೆಯಲಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ದರ್ಶನ್ ಬಂಧನ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಮತ್ತು ಅದರ ವಿಚಾರಣೆ ಇಡೀ ಕರ್ನಾಟಕ ಮಾತ್ರವಲ್ಲ ಇಡೀ ಭಾರತವೇ ಬೆರಗಾಗಿ ನೋಡುತ್ತಿದೆ. ಈ ಹೈ ಪ್ರೊಫೈಲ್ ಕೇಸ್ ವಿಚಾರಣೆಯಲ್ಲಿ ನಿಶ್ಪಕ್ಷಪಾತವಾದ ನಿರ್ಣಯ ಮತ್ತು ನ್ಯಾಯಕ್ಕಾಗಿ ಕಾಯುತ್ತಿದ್ದಾರೆ. ರೇಣುಕಾ ಸ್ವಾಮಿ ಕುಟುಂಬದಲ್ಲಿ, ಜನರಲ್ಲಿ, ಟಿವಿ ಮಾಧ್ಯಮಗಳಲ್ಲಿ ಮತ್ತು ದರ್ಶನ್ ಅಭಿಮಾನಿಗಳಲ್ಲಿ ಏನೇನೋ ಆತಂಕ, ಅನುಮಾನಗಳು ಕಾಡುತ್ತಿದೆ.

ಊಹಾಪೋಹಗಳು ಹುಟ್ಟಿಕೊಳ್ಳುತ್ತಿದೆ. ಏಕೆಂದರೆ, ಯಾವುದೇ ಕೇಸ್ ಆದರೂ ಆ ಕೇಸ್‌ನ ವಿಚಾರಣೆಯ ವೀಡಿಯೋ ದಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಆಗಾಗ ಪೋಲೀಸರು ಸಂಬಂಧ ಪಟ್ಟ ವ್ಯಕ್ತಿಗಳ ಕುಟುಂಬದವರ ಜೊತೆ ಹಂಚಿಕೊಳ್ಳಬೇಕು ಮತ್ತು ಅದು ಕಾನೂನಾಗಬೇಕು ಎಂದು ಬರೆದುಕೊಂಡಿದ್ದಾರೆ.

 

View this post on Instagram

 

A post shared by Upendra Kumar (@nimmaupendra)

ಬಳಿಕ (ಹಿಂದೆಲ್ಲಾ ಪೊಲೀಸರು ವಿಚಾರಣೆಯ ವಿವರ ಬರೆದು ದಾಖಲಿಸುತ್ತಿದ್ದರು. ಈಗ ತಂತ್ರಜ್ಞಾನ ಇಷ್ಟೊಂದು ಮುಂದುವರಿದಿದ್ದು ಎಲ್ಲವನ್ನೂ ವಿಡಿಯೋ ರೆಕಾರ್ಡ್ ಮತ್ತು ಲೈವ್ ಸ್ಟ್ರೀಮಿಂಗ್ ಮಾಡಬಹುದು) ಅದೇ ರೀತಿ ಒಬ್ಬ ಸಾರ್ವಜನಿಕ ವ್ಯಕ್ತಿಯ ಬಗ್ಗೆ ಕೇಸ್ ಆಗಿದ್ದರೆ ಆ ಕೇಸ್‌ನ ವಿಚಾರಣೆಯ ವಿಡಿಯೋ ದಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಪೋಲೀಸರು ಆಗಾಗ ಸಾರ್ವಜನಿಕವಾಗಿ ತೆರೆದಿಡಬೇಕು. ಒಬ್ಬ ಸಾರ್ವಜನಿಕ ವ್ಯಕ್ತಿಯ ವಿಚಾರಣೆ ಸಾರ್ವಜನಿಕವಾಗೇ ಸಂಪೂರ್ಣ ಪಾರದರ್ಶಕತೆಯಿಂದ ಆಗಬೇಕು, ಸಾಕ್ಷಿ ನಾಶ, ಪ್ರಭಾವಿಗಳ ಹಸ್ತಕ್ಷೇಪ, ಭ್ರಷ್ಟಾಚಾರ ಇವಕ್ಕೆಲ್ಲಾ ತೆರೆ ಎಳೆದಂತಾಗುತ್ತದೆ ಎಂದಿದ್ದಾರೆ ಉಪೇಂದ್ರ.

ಆಗ ರೇಣುಕಾ ಸ್ವಾಮಿ ಕುಟುಂಬಕ್ಕೆ, ಜನರಿಗೆ, ಟಿವಿ ಮಾಧ್ಯಮಗಳಿಗೆ ಮತ್ತು ದರ್ಶನ್ ಅಭಿಮಾನಿಗಳಿಗೆ ಮನಸಿನಲ್ಲಿ ಗೊಂದಲಗಳಿಲ್ಲದೇ ಪೊಲೀಸ್ ಮತ್ತು ಟಿವಿ ಮಾಧ್ಯಮಗಳ ಬಗ್ಗೆ ಇನ್ನೂ ಗೌರವ ಹೆಚ್ಚಾಗುತ್ತದೆ. ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಬರುತ್ತದೆ ಎಂದು ಬರೆದುಕೊಂಡಿದ್ದಾರೆ.

Share This Article