ನೋಂದಣಿ, ಮುದ್ರಾಂಕ ಶುಲ್ಕ ನೆರೆ ರಾಜ್ಯಗಳ ದರಗಳೊಂದಿಗೆ ಸಮೀಕರಿಸಿ ಪರಿಷ್ಕರಣೆ – ಮುಲೈ ಮುಗಿಲನ್

Public TV
2 Min Read
ಬೆಂಗಳೂರು: ಕರ್ನಾಟಕ (Karnataka) ರಾಜ್ಯ ಸರ್ಕಾರವು ಆ.31ರಿಂದ ಜಾರಿಗೊಳಿಸುತ್ತಿರುವ ಸ್ಥಿರಾಸ್ತಿ ಮೇಲಿನ ವ್ಯವಹಾರಗಳ ದಸ್ತಾವೇಜುಗಳಿಗೆ ವಿಧಿಸುತ್ತಿರುವ ನೋಂದಣಿ ಮತ್ತು ಮುದ್ರಾಂಕ ಶುಲ್ಕವು ನೆರೆಹೊರೆಯ ರಾಜ್ಯಗಳಲ್ಲಿರುವ ದರಗಳಿಗಿಂತ ಪ್ರಸ್ತುತ ಕಡಿಮೆ ಶುಲ್ಕ ಇದೆ. ಸದ್ಯ ಅದನ್ನು ಇತರೆ ರಾಜ್ಯಗಳ ಶುಲ್ಕಗಳೊಂದಿಗೆ ಸಮೀಕರಣ ಮಾಡಿ ಪರಿಷ್ಕರಿಸಲಾಗುತ್ತಿದೆ ಎಂದು ನೋಂದಣಿ ಮತ್ತು ಮುದ್ರಾಂಕ ಶುಲ್ಕ ಆಯುಕ್ತ ಮುಲೈ ಮುಗಿಲನ್ (Mullai Mugilan) ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಮುದ್ರಾಂಕ, ನೋಂದಣಿ ಹಾಗೂ ಇತರೆ ಸೆಸ್ ಸೇರಿ ಕರ್ನಾಟಕ ರಾಜ್ಯವು ಶೇ.6.6ರಷ್ಟು ವಿಧಿಸುತ್ತಿತ್ತು. ಇದೇ ಅವಧಿಯಲ್ಲಿ ಈ ಶುಲ್ಕವು ತಮಿಳುನಾಡು ರಾಜ್ಯದಲ್ಲಿ ಶೇ.9, ಕೇರಳ ಶೇ.10, ಆಂಧ್ರಪ್ರದೇಶ ಶೇ.7.5, ತೆಲಂಗಾಣ ರಾಜ್ಯಗಳು ಶೇ.7.5ರಷ್ಟು ಶುಲ್ಕ ಅನುಸರಿಸುತ್ತಿವೆ. ದಸ್ತಾವೇಜುಗಳ ಮೇಲಿನ ಮುದ್ರಾಂಕ ಶುಲ್ಕ ಮತ್ತು ನೋಂದಣಿ ಶುಲ್ಕಗಳನ್ನು ಇತರೆ ರಾಜ್ಯಗಳೊಂದಿಗೆ ಸಮೀಕರಿಸಿಕೊಳ್ಳಲು, ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಬಲಪಡಿಸಲು ಮತ್ತು ನಾಗರಿಕರಿಗೆ ಉತ್ತಮ ಹಾಗೂ ಪರಿಣಾಮಕಾರಿ ಸೇವೆಯನ್ನು ನೀಡಲು ರಾಜ್ಯ ಸರ್ಕಾರವು 2025ರ ಆ.31ರಿಂದ ಜಾರಿಗೆ ಬರುವಂತೆ ನೋಂದಣಿ ಶುಲ್ಕವನ್ನು ಶೇ.1 ರಿಂದ ಶೇ.2ರಷ್ಟು ಪರಿಷ್ಕರಿಸಿದೆ.ಇದನ್ನೂ ಓದಿ: ಪೊಲೀಸರು ಪದಕ ಪಡೆದಿರುವುದರ ಹಿಂದೆ ಶ್ರಮ, ಪ್ರಾಮಾಣಿಕತೆ, ಸಮಾಜದ ಸೇವೆ ಇದೆ: ಡಾ.ಜಿ ಪರಮೇಶ್ವರ್

ಪರಿಷ್ಕೃತ ನೋಂದಣಿ ಶುಲ್ಕವನ್ನು ಸುಗಮವಾಗಿ ಇಲಾಖೆಯ ಅಧಿಕೃತ ಪೋರ್ಟಲ್ ಮೂಲಕ ಪಾವತಿಸಬಹುದು. ಹಿಂದಿನ ನೋಂದಣಿ ಶುಲ್ಕವನ್ನು ಪಾವತಿಸಿ ಈಗಾಗಲೇ ದಸ್ತಾವೇಜುಗಳ ನೋಂದಣಿಗೆ ಅಪಾಯಿಂಟ್‌ಮೆಂಟ್ ಪಡೆದಿರುವವರು ಅಥವಾ ಶುಲ್ಕವನ್ನು ಪಾವತಿಸಿ ಅಪಾಯಿಂಟ್‌ಮೆಂಟ್ ಪಡೆಯದಿರುವವರು, ವ್ಯತ್ಯಾಸದ ಮೊತ್ತವನ್ನು ಇಲಾಖೆಯ ಅಧಿಕೃತ ಪೋರ್ಟಲ್ ಮೂಲಕ ಪಾವತಿಸಬೇಕು. ಮೊದಲು ಬಳಸಿದ ಲಾಗಿನ್ ಮೂಲಕವೇ ಈ ಪಾವತಿಯನ್ನು ಮಾಡಬೇಕು. ಅರ್ಜಿದಾರರಿಗೆ ನೆರವಾಗುವ ದೃಷ್ಟಿಯಿಂದ ಅಗತ್ಯ ಸೂಚನೆಗಳನ್ನು ಒಳಗೊಂಡ ಎಸ್‌ಎಂಎಸ್ ನೇರವಾಗಿ ಅವರ ನೋಂದಾಯಿತ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುವುದು.

ಈಗಾಗಲೇ ದಸ್ತಾವೇಜುಗಳ ನೋಂದಣಿಗೆ ಸಲ್ಲಿಸಲಾಗಿರುವ ಹಾಗೂ ಪರಿಶೀಲನೆಯಲ್ಲಿರುವ ದಸ್ತಾವೇಜುಗಳಿಗೆ ನೋಂದಣಿ ಶುಲ್ಕವನ್ನು ಮರು ಲೆಕ್ಕ ಹಾಕಲಾಗುವುದು ಮತ್ತು ಪರಿಷ್ಕೃತ ಶೇಕಡ 2 ರಂತೆ ನೋಂದಣಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಈ ವರ್ಗದ ಅರ್ಜಿದಾರರಿಗೆ ಪಾವತಿಯ ಪ್ರಕ್ರಿಯೆ ಪೂರ್ಣಗೊಳ್ಳುವ ಮೊದಲು ಪರಿಷ್ಕೃತ ನೋಂದಣಿ ಶುಲ್ಕದ ವಿವರವನ್ನು ತಿಳಿಸಲಾಗುವುದು.

ಇಲಾಖೆಯು ದಸ್ತಾವೇಜುಗಳ ನೋಂದಣಿ ಪ್ರಕ್ರಿಯೆಯಲ್ಲಿ ವಿಳಂಬವಾಗುವುದನ್ನು ತಪ್ಪಿಸಲು ಎಲ್ಲಾ ಅರ್ಜಿದಾರರಿಗೆ ಮೇಲ್ಕಾಣಿಸಿದ ನವೀಕರಿಸಿದ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ತಿಳಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಹಂತ ಹಂತವಾಗಿ ಅನುಸರಿಸಬಹುದಾದ ವಿವರವಾದ ಸೂಚನೆಗಳನ್ನು ಇಲಾಖೆಯ ಅಧಿಕೃತ ಪೋರ್ಟಲ್‌ನಲ್ಲಿ ಲಭ್ಯವಾಗುವಿರುವಂತೆ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.ಇದನ್ನೂ ಓದಿ: ಪೊಲೀಸರ ಸಾಮಾಜಿಕ ಬದ್ದತೆಯಿಂದ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ – ಸಿದ್ದರಾಮಯ್ಯ

Share This Article