– ದರ್ಶನ್ ಕೂಡಲೇ ಶರಣಾಗಬೇಕು: ಸುಪ್ರೀಂ ಕಟ್ಟಾಜ್ಞೆ
ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ (Darshan), ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ (Supreme Court) ರದ್ದುಗೊಳಿಸಿದೆ.
ಜಾಮೀನು ರದ್ದುಗೊಳಿಸುವಂತೆ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಗುರುವಾರ ಮಹತ್ವದ ತೀರ್ಪು ನೀಡಿದೆ. ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಇದನ್ನೂ ಓದಿ: ದರ್ಶನ್ ಅರೆಸ್ಟ್ನಿಂದ ಸುಪ್ರೀಂ ಬೇಲ್ ವಿಚಾರಣೆವರೆಗೆ ಏನೇನಾಯ್ತು? ಟೈಮ್ಲೈನ್ ಹೀಗಿದೆ
ಕೂಡಲೇ ಸರೆಂಡರ್ ಆಗಬೇಕು, ಎಲ್ಲರೂ ಸರೆಂಡರ್ ಆಗಬೇಕು. ಆರೋಪಿ ಎಷ್ಟೇ ದೊಡ್ಡವನಾಗಿದ್ದರೂ, ಅವನು ಅಥವಾ ಅವಳು ಕಾನೂನಿಗಿಂತ ಮೇಲಲ್ಲ ಎಂಬ ಸಂದೇಶವನ್ನು ಇದು ನೀಡುತ್ತದೆ. ಯಾವುದೇ ಮಟ್ಟದಲ್ಲಿ ನ್ಯಾಯ ವಿತರಣಾ ವ್ಯವಸ್ಥೆಯು ಯಾವುದೇ ಬೆಲೆ ತೆತ್ತಾದರೂ ಕಾನೂನಿನ ನಿಯಮವನ್ನು ಕಾಪಾಡಿಕೊಳ್ಳಬೇಕು ಎಂಬ ಬಲವಾದ ಸಂದೇಶವನ್ನು ಇದು ಒಳಗೊಂಡಿದೆ. ಯಾವುದೇ ವ್ಯಕ್ತಿ ಕಾನೂನಿಗಿಂತ ಮೇಲಲ್ಲ ಅಥವಾ ಅದಕ್ಕಿಂತ ಕೆಳಗಿಲ್ಲ. ನಾವು ಅದನ್ನು ಪಾಲಿಸುವಾಗ ಯಾರ ಅನುಮತಿಯನ್ನೂ ಕೇಳುವುದಿಲ್ಲ. ಎಲ್ಲಾ ಸಮಯದಲ್ಲೂ ಕಾನೂನಿನ ನಿಯಮವನ್ನು ಕಾಪಾಡಿಕೊಳ್ಳುವುದು ಇಂದಿನ ಅಗತ್ಯವಾಗಿದೆ ಎಂದು ನ್ಯಾಯಮೂರ್ತಿ ಜೆ.ಬಿ.ಪರ್ದಿವಾಲಾ ಆದೇಶದಲ್ಲಿ ತಿಳಿಸಿದ್ದಾರೆ.
ಜಾಮೀನು ಮಂಜೂರು ಮತ್ತು ರದ್ದತಿ ಎರಡನ್ನೂ ನಾವು ಪರಿಗಣಿಸಿದ್ದೇವೆ. ಹೈಕೋರ್ಟ್ ಆದೇಶವು ಅಧಿಕಾರದ ಯಾಂತ್ರಿಕ ವ್ಯಾಯಾಮವನ್ನು ಪ್ರತಿಬಿಂಬಿಸುತ್ತದೆ ಎಂಬುದು ಸ್ಪಷ್ಟವಾಗಿದೆ. ಜಾಮೀನು ಮಂಜೂರು ವಿಚಾರಣೆಯ ಮೇಲೆ ಪರಿಣಾಮ ಬೀರುತ್ತದೆ. ಹೈಕೋರ್ಟ್ ಆದೇಶದಲ್ಲಿ ಲೋಪಗಳಿವೆ. ಮೇಲಾಗಿ, ಹೈಕೋರ್ಟ್ ವಿಚಾರಣೆಯ ಪೂರ್ವ ಹಂತದಲ್ಲಿ ಪರೀಕ್ಷೆಯನ್ನು ಕೈಗೊಂಡಿತು. ಆದರೆ, ನಾವು ಅಸಾಧಾರಣ ನ್ಯಾಯವ್ಯಾಪ್ತಿಯನ್ನು ಚಲಾಯಿಸಲು ತೃಪ್ತರಾಗಿದ್ದೇವೆ ಎಂದು ನ್ಯಾ. ಮಹದೇವನ್ ತೀರ್ಪಿನಲ್ಲಿ ಹೇಳಿದ್ದಾರೆ. ಇದನ್ನೂ ಓದಿ: ಸತ್ಯ ಎಲ್ಲಕ್ಕಿಂತ ಶಕ್ತಿಶಾಲಿ, ಅದು ನ್ಯಾಯ ಕೊಡುತ್ತೆ – ತೀರ್ಪಿಗೂ ಮುನ್ನ ಪವಿತ್ರಾ ಗೌಡ ಪೋಸ್ಟ್
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕಳೆದ ವರ್ಷ ಕರ್ನಾಟಕ ಹೈಕೋರ್ಟ್ ಆರೋಪಿ ದರ್ಶನ್ ಸೇರಿದಂತೆ ಉಳಿದ ಆರೋಪಿಗಳಿಗೆ ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಅರ್ಜಿ ವಿಚಾರಣೆಯನ್ನು ಜು.24 ರಂದು ಸುಪ್ರೀಂನ ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವಾಲಾ ಮತ್ತು ಆರ್.ಮಹದೇವನ್ ಅವರಿದ್ದ ಪೀಠ ವಿಚಾರಣೆ ನಡೆಸಿತ್ತು. ತೀರ್ಪನ್ನು ಗುರುವಾರಕ್ಕೆ ಕಾಯ್ದಿರಿಸಿತ್ತು.