ಲೇಡಿ ರೌಡಿಶೀಟರ್ ಶ್ರೀರಾಮಸೇನೆಯ ಮಹಿಳಾ ಘಟಕದ ಅಧ್ಯಕ್ಷೆ!

Public TV
1 Min Read

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಹಿಳಾ ರೌಡಿಶೀಟರೊಬ್ಬರನ್ನು ಶ್ರೀರಾಮಸೇನೆ ಬೆಂಗಳೂರು ಮಹಿಳಾ ಘಟಕ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಲಾಗಿದ್ದು, ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ.

ಶಿಸ್ತು ಸಂಸ್ಕೃತಿ ಎನ್ನುವ ಶ್ರೀರಾಮಸೇನೆ, ಇದೀಗ ಬೆಂಗಳೂರು ಮಹಿಳಾ ಅಧ್ಯಕ್ಷೆಯಾಗಿ ರೌಡಿ ಶೀಟರ್ ಹೊಂದಿರುವ ಯಶಸ್ವಿನಿ ಗೌಡ ಅವರನ್ನು ನೇಮಕ ಮಾಡಿದೆ. ಈ ವಿಚಾರ ಇದೀಗ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಶ್ರೀರಾಮ ಸೇನೆಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರ ನೇತೃತ್ವದಲ್ಲಿಯೇ ಹಾರ ಹಾಕಿಸಿಕೊಳ್ಳುವ ಮೂಲಕ ಯಶಸ್ವಿನಿ ಗೌಡಾಗೆ ಅಧ್ಯಕ್ಷ ಪಟ್ಟ ನೀಡಲಾಗಿದೆ. ನಗರದ ಖಾಸಗಿ ಹೋಟೆಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುತಾಲಿಕ್ ಹಾಗೂ ಸಂಘಟನೆ ಮುಖಂಡರ ಸಮ್ಮುಖದಲ್ಲಿ ಯಶಸ್ವಿನಿ ಗೌಡ ಅವರಿಗೆ ಅಧಿಕಾರ ನೀಡಲಾಗಿದೆ.

ಈ ಕುರಿತು ಪಬ್ಲಿಕ್ ಟಿವಿ, ಮುತಾಲಿಕ್ ಅವರನ್ನು ಸಂಪರ್ಕಿಸಿದ ಸಂದರ್ಭದಲ್ಲಿ ಯಶಸ್ವಿನಿ ಗೌಡ ಅವರ ವಿರುದ್ಧ ರೌಡಿಶೀಟರ್ ಇರುವ ಕುರಿತು ತಮಗೇ ಮಾಹಿತಿ ಇಲ್ಲ ಎಂಬ ಹಾರಿಕೆಯ ಉತ್ತರ ನೀಡಿದ್ದಾರೆ.

ಅಂದಹಾಗೇ ಸದ್ಯ ಶ್ರೀರಾಮ ಸೇನೆಯ ಬೆಂಗಳೂರು ನಗರ ಘಟಕ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿರುವ ಯಶಸ್ವಿನಿ ಗೌಡ ಸ್ವತಃ ಪತಿಯನ್ನೇ ಹತ್ಯೆ ಮಾಡಿರುವ ಪ್ರಕರಣದಲ್ಲಿ ಆರೋಪಿಯಾಗಿದ್ದರು. ಅಲ್ಲದೇ ನಗರದಲ್ಲಿ ಮೀಟರ್ ಬಡ್ಡಿ ದಂಧೆ ನಡೆಸುತ್ತಿದ್ದರು ಎಂಬ ಮಾಹಿತಿ ಕೂಡ ಲಭಿಸಿದೆ. ನಗರದ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ಯಶಸ್ವಿನಿ ಗೌಡ ವಿರುದ್ಧ ರೌಡಿಶೀಟರ್ ದಾಖಲಾಗಿದೆ.

ಶ್ರೀರಾಮಸೇನೆ ಬೆಂಗಳೂರು ಘಟಕದ ಮಹಿಳಾ ಅಧಕ್ಷ ಸ್ಥಾನ ರೌಡಿ ಶೀಟರ್ ಗೆ ನೀಡಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರೌಡಿಶೀಟರ್ ಹೊಂದಿರುವ ಮಹಿಳೆಯೊಬ್ಬರು ಯಾವ ರೀತಿಯ ಸಮಾಜಸೇವೆ ಮಾಡುತ್ತಾರೆ ಎಂಬ ಪ್ರಶ್ನೆಯೂ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

Share This Article
Leave a Comment

Leave a Reply

Your email address will not be published. Required fields are marked *