ಉತ್ತರ ಕರ್ನಾಟಕ ದೇವಾಲಯಗಳ ಅಭಿವೃದ್ದಿಗೆ ವಿಶೇಷ ಕಾರ್ಯಸೂಚಿ ರಚಿಸಿ: ಶಶಿಕಲಾ ಜೊಲ್ಲೆ ಸೂಚನೆ

Public TV
3 Min Read

– ಪ್ರಪ್ರಥಮ ಬಾರಿಗೆ ಬೆಳಗಾವಿ ಸುವರ್ಣಸೌಧದಲ್ಲಿ ರಾಜ್ಯ ಧಾರ್ಮಿಕ ಪರಿಷತ್ತಿನ ಸಭೆ
– ಉತ್ತರ ಕರ್ನಾಟಕ ಭಾಗದ ದೇವಸ್ಥಾನಗಳ ಅಭಿವೃದ್ದಿ ಕುರಿತ ವ್ಯಾಪಕ ಚರ್ಚೆ

ಬೆಳಗಾವಿ: ಪ್ರಪ್ರಥಮ ಬಾರಿಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ರಾಜ್ಯ ಧಾರ್ಮಿಕ ಪರಿಷತ್ತಿನ ಸಭೆಯಲ್ಲಿ ಉತ್ತರ ಕರ್ನಾಟಕ ದೇವಸ್ಥಾನಗಳ ಅಭಿವೃದ್ದಿಗೆ ವಿಶೇಷ ಕಾರ್ಯಸೂಚಿ ರಚಿಸುವಂತೆ ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರು ಹಾಗೂ ರಾಜ್ಯ ಧಾರ್ಮಿಕ ಪರಿಷತ್ತಿನ ಅಧ್ಯಕ್ಷೆ ಶಶಿಕಲಾ ಜೊಲ್ಲೆ ಸೂಚನೆ ನೀಡಿದರು.

ಉತ್ತರ ಕರ್ನಾಟಕದ ದೇವಸ್ಥಾನಗಳ ಅಭಿವೃದ್ದಿಯ ಬಗ್ಗೆ ಚರ್ಚಿಸಲು ಪ್ರಪ್ರಥಮ ಬಾರಿಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ 3ನೇ ರಾಜ್ಯ ಧಾರ್ಮಿಕ ಪರಿಷತ್ತಿನ 15ನೇ ಸಭೆಯನ್ನು ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಉತ್ತರ ಕರ್ನಾಟಕ ಹಾಗೂ ಇನ್ನಿತರ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಇದನ್ನೂ ಓದಿ: ನಮ್ಮ ಭೂಮಿ ಹೋದರೂ ಪರವಾಗಿಲ್ಲ, ಮೇಕೆದಾಟು ಯೋಜನೆ ಬೇಗ ಆರಂಭವಾಗಬೇಕು: ಡಿಕೆಶಿ

ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದ ಸಮಗ್ರ ಅಭಿವೃದ್ದಿ:
ಬೆಳಗಾವಿ ಜಿಲ್ಲೆಯಲ್ಲಿರುವ ಪ್ರಮುಖ ಎ ದರ್ಜೆಯ ದೇವಸ್ಥಾನ ಸವದತ್ತಿಯ ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ದೇಶದ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರು ಪ್ರತಿವರ್ಷ ಆಗಮಿಸುತ್ತಾರೆ. ಭಕ್ತರಿಗೆ ಹೆಚ್ಚಿನ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸಮಗ್ರ ಅಭಿವೃದ್ದಿಯ ಕುರಿತು ವಿಶೇಷ ಚರ್ಚೆ ನಡೆಸಲಾಯಿತು. ಈಗಾಗಲೇ 3.58 ಕೋಟಿ ವೆಚ್ಚದಲ್ಲಿ ಬಳಿಗಾರ ಕಟ್ಟೆ ರಸ್ತೆಯ ಅಭಿವೃದ್ದಿ ಕಾರ್ಯದ ಬಗ್ಗೆ ಅಂದಾಜು ಪಟ್ಟಿಯನ್ನು ತಯಾರಿಸಲಾಗಿದೆ. ಇದಕ್ಕೆ ಅಗತ್ಯವಿರುವ ಅನುದಾನ ಬಿಡುಗಡೆಯ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಯುಕ್ತರಿಗೆ ಸಚಿವರು ಸೂಚನೆ ನೀಡಿದರು. ದೇವಾಲಯದ ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ವಿಶೇಷ ಆದ್ಯತೆ ನೀಡುವಂತೆ ಸೂಚಿಸಿದ ಸಚಿವರು, ಘನತ್ಯಾಜ್ಯ ಮತ್ತು ದ್ರವತ್ಯಾಜ್ಯ ಸಂಸ್ಕರಣಾ ಯೋಜನೆಯ ಡಿಪಿಆರ್‌ ಅನ್ನು ಶೀಘ್ರವಾಗಿ ಸಿದ್ದಗೊಳಿಸಿ ಅನುಷ್ಠಾನಗೊಳಿಸಲು ಆದೇಶಿದರು.

ಮಹದೇಶ್ವರ ಬೆಟ್ಟದ ಮಲೈ ಮಹದೇಶ್ವರ ಸ್ವಾಮಿ ದೇವಸ್ಥಾನದಿಂದ ಸಿ ದರ್ಜೆಯ ದೇವಸ್ಥಾನಗಳ ದತ್ತು:
ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲೊಂದಾಗಿರುವ ಮಹದೇಶ್ವರ ಬೆಟ್ಟದ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರಾಭಿವೃದ್ದಿ ಪ್ರಾಧಿಕಾರದ ವತಿಯಿಂದ ಕಡಿಮೆ ಆದಾಯವಿರುವ ದೇವಸ್ಥಾನಗಳನ್ನು ದತ್ತು ತಗೆದುಕೊಳ್ಳುವಂತೆ ಸೂಚನೆ ನೀಡಲು ಸಭೆಯಲ್ಲಿ ನಿರ್ಧರಿಸಲಾಯಿತು. ಇದರಿಂದ ಕಡಿಮೆ ಆದಾಯವಿರುವ ದೇವಸ್ಥಾನಗಳ ಸೂಕ್ತ ನಿರ್ವಹಣೆ ಸಾಧ್ಯವಾಗಲಿದ್ದು, ಈ ಬಗ್ಗೆ ದತ್ತು ತಗೆದುಕೊಳ್ಳಬೇಕಾದ ಸಿ ದರ್ಜೆಯ ದೇವಸ್ಥಾನಗಳ ಪಟ್ಟಿಯನ್ನು ತಯಾರಿಸಿ ಪ್ರಾಧಿಕಾರಕ್ಕೆ ಕಳುಹಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದನ್ನೂ ಓದಿ: ಓಮಿಕ್ರಾನ್ ಆತಂಕ – ಬಂಡೀಪುರದಲ್ಲಿ ನ್ಯೂ ಇಯರ್ ಮೋಜು ಮಸ್ತಿಗೆ ಬ್ರೇಕ್!

ಸಾಮಾನ್ಯ ಸಂಗ್ರಹಣ ನಿಧಿ ವಂತಿಗೆ ಸಂಗ್ರಹಕ್ಕೆ ಆದ್ಯತೆ:
ರಾಜ್ಯದ ಎ ಮತ್ತು ಬಿ ದರ್ಜೆಯ ದೇವಸ್ಥಾನಗಳಿಂದ ಸಾಮಾನ್ಯ ಸಂಗ್ರಹಣ ನಿಧಿಗೆ ಪ್ರತಿವರ್ಷ ಶೇಕಡಾ 10 ರಷ್ಟು ವಂತಿಗೆಯನ್ನು ಸಂಗ್ರಹಿಸಲಾಗುತ್ತದೆ. ಇದನ್ನು ಕಡಿಮೆ ಆದಾಯವಿರುವ ದೇವಸ್ಥಾನಗಳ ಅಭಿವೃದ್ದಿಗೆ ಬಳಸಲಾಗುತ್ತದೆ. ಈ ನಿಧಿಗೆ ವಂತಿಗೆ ಸಂಗ್ರಹಕ್ಕೆ ಆದ್ಯತೆ ನೀಡಬೇಕಾಗಿದೆ. ಪ್ರತಿವರ್ಷ ದೇವಸ್ಥಾನದ ಲೆಕ್ಕಪತ್ರ ಪರಿಶೀಲನೆಯಾಗಿ ಜೂನ್‌ ತಿಂಗಳ ಒಳಗಾಗಿ ಆಯುಕ್ತರಿಗೆ ಆಡಿಟ್‌ ವರದಿ ನೀಡದಿದ್ದಲ್ಲಿ ಆಯಾ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ಜವಾಬ್ದಾರರನ್ನಾಗಿಸಿ ಶಿಸ್ತು ಕ್ರಮ ಜರುಗಿಸುವಂತೆ ಸೂಚಿಸಿದರು.

ಮಲೈ ಮಹದೇಶ್ವರ ಸ್ವಾಮಿ ದೇವಸ್ಥಾನದಿಂದ ವಂತಿಗೆ ಸಂಗ್ರಹ:
ಮಹದೇಶ್ವರ ಬೆಟ್ಟದ ಮಲೈ ಮಹದೇಶ್ವರ ಸ್ವಾಮಿ ದೇವಾಲಯದ ವಾರ್ಷಿಕ ಆದಾಯದಿಂದ ಸಾಮಾನ್ಯ ಸಂಗ್ರಹಣಾ ನಿಧಿಗೆ ವಂತಿಗೆಯನ್ನು ನೀಡಲಾಗುತ್ತಿಲ್ಲ. ಈ ದೇವಸ್ಥಾನದಿಂದಲೂ ವಂತಿಗೆಯನ್ನು ನೀಡುವಂತೆ ಪ್ರಾಧಿಕಾರಕ್ಕೆ ಸೂಚನೆ ನೀಡುವಂತೆ ಸಚಿವರು ಅಧಿಕಾರಿಗಳಿಗೆ ತಿಳಿಸಿದರು. ಇದನ್ನೂ ಓದಿ: ರಕ್ಷಿಸಬೇಕಾದ ಆರಕ್ಷಕನೇ ಕಳ್ಳನಾದ – ಬೈಕ್ ಕಳ್ಳತನ ಮಾಡಿಸ್ತಿದ್ದ ಕಾನ್‍ಸ್ಟೇಬಲ್ ಅರೆಸ್ಟ್

ರಾಮದುರ್ಗದ ಗೊಡಚಿ ವೀರಭದ್ರ ದೇವಸ್ಥಾನ, ಬೆಳಗಾವಿಯ ಪಂಥಬಾಳೇಕುಂದ್ರಿ ದತ್ತ ದೇವಸ್ಥಾನ, ಪರಮಾರ್ಥನಿಕೇತನ ಹರಿಮಂದಿರ, ರಾಯಭಾಗದ ಮಹಾಕಾಳಿ (ಮಾಯಕ್ಕ) ದೇವಿ ದೇವಸ್ಥಾನ ಸೇರಿದಂತೆ ಹಲವು ದೇವಸ್ಥಾನಗಳ ಅಭಿವೃದ್ದಿ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಯಲ್ಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿ ತುಷಾರ್‌ ಗಿರಿನಾಥ್‌, ಮುಜರಾಯಿ ಆಯುಕ್ತ ರೋಹಿಣಿ ಸಿಂಧೂರಿ, ರಾಜ್ಯ ಧಾರ್ಮಿಕ ಪರಿಷತ್ತಿನ ಸದಸ್ಯರು ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *